ಬೆಂಗಳೂರಿನಲ್ಲಿ ಭಾನುವಾರ ಅಪರಾಹ್ನ ಸುರಿದ ಭಾರೀ ಆಲಿಕಲ್ಲು ಮಳೆಗೆ ಸಿಲುಕಿದ ಯುವತಿಯೊಬ್ಬರು ಮೃತಪಟ್ಟಿದ್ದಾರೆ. ಮೃತರನ್ನು ಭಾನುರೇಖ ಎಂದು ಗುರುತಿಸಲಾಗಿದೆ. ಮೃತ ಯುವತಿಯ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಿಸಲಾಗಿದೆ.
ಬೆಂಗಳೂರು ಮಹಾನಗರದಲ್ಲಿ ಧಾರಾಕಾರ ಮಳೆ ಸುರಿದಿದ್ದು ಅಂಡರ್ ಪಾಸ್ ಗಳು ಮತ್ತು ತಗ್ಗು ಪ್ರದೇಶಗಳು ಜಲಾವೃತವಾಗಿವೆ. ಪರಿಣಾಮ ಕಾರುಗಳು, ಆಟೋಗಳು ಅಂಡರ್ ಪಾಸ್ ನಲ್ಲಿ ಸಿಲುಕಿದ್ದು ಅವುಗಳನ್ನು ಹೊರತೆಗೆಯುವ ಕೆಲಸ ನಡೆಯುತ್ತಿದೆ.
ಇಂದು ಸುರಿದ ಮಳೆಗೆ ಕೆ.ಆರ್. ಸರ್ಕಲ್ ಅಂಡರ್ ಪಾಸ್ ನಲ್ಲಿ ಮುಳುಗಡೆಯಾದ ಕಾರಿನಲ್ಲಿದ್ದ ಮೂವರನ್ನು ರಕ್ಷಣೆ ಮಾಡಲಾಗಿದೆ. ಇನ್ನೂ ಇಬ್ಬರ ರಕ್ಷಣೆಗಾಗಿ ಕಾರ್ಯಾಚರಣೆ ಮುಂದುವರೆದಿದೆ. ಮಳೆಗೆ ಮರಗಳು ಧರೆಗೆ ಉರುಳಿ ಬಿದ್ದಿವೆ. ರಸ್ತೆಗೆ ಅಡ್ಡವಾಗಿ ಬಿದ್ದಿರುವ ಮರಗಳನ್ನು ತೆರವುಗೊಳಿಸುವ ಕಾರ್ಯಾಚರಣೆ ನಡೆಯುತ್ತಿದೆ.

ಕುಮಾರಕೃಪಾ ರಸ್ತೆಯಲ್ಲಿರುವ ಚಿತ್ರಕಲಾ ಪರಿಷತ್ ಮುಂಭಾಗದಲ್ಲಿ ಕಾರು, ಬೈಕ್ ಮೇಲೆ ಬೃಹತ್ ಮರ ಬಿದ್ದಿದ್ದು ಕುಮಾರಕೃಪಾ ರಸ್ತೆಯನ್ನು ಬಂದ್ ಮಾಡಲಾಗಿದೆ.
ಮೆಜಸ್ಟಿಕ್, ಕೆ.ಆರ್. ಮಾರುಕಟ್ಟೆ, ಮಲ್ಲೇಶ್ವರಂ, ಕಾಮಾಕ್ಷಿಪಾಳ್ಯ, ಗಿರಿನಗರ, ನಾಗರಭಾವಿ, ವಿಜಯನಗರ, ಜಯನಗರ, ಯಶವಂತಪುರ, ಶೇಷಾದ್ರಿಪುರಂ, ಎಲೆಕ್ಟ್ರಾನಿಕ್ ಸಿಟಿ, ಮೇಖ್ರಿ ಸರ್ಕಲ್ ಗಳಲ್ಲಿ ಭಾರೀ ಮಳೆ ಸುರಿದಿದೆ.
ಬೆಂಗಳೂರು ನೋಡಲು ಕಾರಿನಲ್ಲಿ ಬಂದಿದ್ದರು. ದಿಢೀರ್ ಮಳೆ ಬಂದ ಕಾರಣ ಅಂಡರ್ ಪಾಸ್ ನಲ್ಲಿ ನೀರು ತುಂಬಿಕೊಂಡಿದೆ. ಕಾರು ಅಂಡರ್ ಪಾಸ್ ನಲ್ಲಿ ಸಿಲುಕಿದೆ. ಹೀಗಾಗಿ ಕಾರಿನಲ್ಲಿದ್ದ ವಿಜಯವಾಡ ಮೂಲದ ಯುವತಿ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಸೇಂಟ್ ಮಾರ್ಥಸ್ ಆಸ್ಪತ್ರೆಗೆ ಭೇಟಿ ನೀಡಿ ಮಾಹಿತಿ ಪಡೆದಿದ್ದು, ಮೃತ ಯುವತಿಯ ಕುಟುಂಬಕ್ಕೆ 5 ಲಕ್ಷ ರೂಪಾಯಿ ಪರಿಹಾರ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.


