Tuesday, March 17, 2026
Google search engine
Homeಮುಖಪುಟಸೂಚನೆಗಳನ್ನು ಜಾರಿ ಮಾಡದಿದ್ದರೆ ಕಠಿಣ ಕ್ರಮ - ಅಧಿಕಾರಿಗಳಿಗೆ ಚಾಟಿ ಬೀಸಿದ ಸಿಎಂ ಸಿದ್ದರಾಮಯ್ಯ

ಸೂಚನೆಗಳನ್ನು ಜಾರಿ ಮಾಡದಿದ್ದರೆ ಕಠಿಣ ಕ್ರಮ – ಅಧಿಕಾರಿಗಳಿಗೆ ಚಾಟಿ ಬೀಸಿದ ಸಿಎಂ ಸಿದ್ದರಾಮಯ್ಯ

ನಾನು ಕೇವಲ ಸೂಚನೆ ಕೊಡೋದಿಲ್ಲ. ಎಚ್ಚರಿಕೆ ಕೊಡ್ತಾ ಇದ್ದೇನೆ. ಸೂಚನೆಗಳನ್ನು ಪರಿಣಾಮಕಾರಿಯಾಗಿ ಜಾರಿ ಮಾಡದಿದ್ದರೆ ಕಠಿಣ ಕ್ರಮಕ್ಕೆ ಸಿದ್ದರಾಗಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ ನೀಡಿದ್ದಾರೆ.

ವಿಧಾನಸೌಧದಲ್ಲಿ ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ವಿಡಿಯೋ ಸಂವಾದದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಸಿದರು.

ರಾಜ್ಯದ ಕೆಲವು ಭಾಗದಲ್ಲಿ ಮಳೆ ಪ್ರಾರಂಭ, ಬಿತ್ತನೆ ಪ್ರಾರಂಭ. ಜೂನ್‌ ನಲ್ಲಿ ಮುಂಗಾರು ಪ್ರಾರಂಭವಾಗುತ್ತದೆ. ಏಪ್ರಿಲ್‌ ತಿಂಗಳಿನಲ್ಲಿಯೇ ಪ್ರಿ-ಮಾನ್ಸೂನ್‌ ಮಳೆ ಪ್ರಾರಂಭವಾಗಿದೆ. ಭಾರಿ ಮಳೆ, ಗಾಳಿಯಿಂದ ಮರಗಳು ಬಿದ್ದು ಹೋಗಿವೆ. ಸಿಡಿಲು, ಆಲಿಕಲ್ಲು ಮಳೆಯಿಂದ ಪ್ರಾಣ ಕಳೆದುಕೊಂಡಿದ್ದಾರೆ. ಅನಾಹುತಗಳಾಗಿವೆ. ಇಂತಹ ಅನಾಹುತಗಳನ್ನು ತಡೆಗಟ್ಟಲು ಮುನ್ನೆಚ್ಚರಿಕೆ ತೆಗೆದುಕೊಳ್ಳಬೇಕು ಎಂದು ಸೂಚನೆ ನೀಡಿದರು.

ನಿಮ್ಮ ಬಳಿ ಅನುದಾನ ಲಭ್ಯವಿದೆ. ಅಗತ್ಯವಿದ್ದರೆ, ಕೇಳಬೇಕು. ಪರಿಹಾರ ಕ್ರಮ ಕೈಗೊಳ್ಳಲು ತೊಂದರೆ ಇಲ್ಲ. ಕೃಷಿ ಅಧಿಕಾರಿಗಳು ಬಿತ್ತನೆ ಚಟುವಟಿಕೆಗೆ ಅಗತ್ಯವಿರುವ ಬೀಜ, ಗೊಬ್ಬರ, ಕೀಟನಾಶಕಗಳನ್ನು ಒದಗಿಸಬೇಕು. ಹಾವೇರಿ ಗೋಲಿಬಾರಿನಂತಹ ಘಟನೆ ಮರುಕಳಿಸಬಾರದು ಎಂದು ಹೇಳಿದರು.

ಮಳೆ ಬಂದು ಮರಗಳು ಬಿದ್ದುಹೋದರೆ, ಕೂಡಲೇ ತೆರವು ಗೊಳಿಸಬೇಕು. ವಿದ್ಯುಚ್ಚಕ್ತಿ ಕಂಬಗಳು ಬಿದ್ದು ಹೋದರೆ, ಟ್ರಾನ್‌ಫಾರ್ಮರ್‌ ಹಾಳಾಗಿದ್ದರೆ, ಸೇತುವೆಗಳು ಹಾಳಾಗಿದ್ದರೆ, ಶಾಲಾ ಕೊಠಡಿಗಳು ಶಿಥಿಲ ಆಗಿದ್ದರೆ ಈಗಲೇ ಅನಾಹುತ ತಪ್ಪಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು. ಮುನ್ನೆಚ್ಚರಿಕೆ ತೆಗೆದುಕೊಂಡರೆ ಅನಾಹುತಗಳನ್ನು ತಪ್ಪಿಸಲು ಸಾಧ್ಯವಾಗುತ್ತದೆ ಎಂದು ಸೂಚನೆ ನೀಡಿದರು.

ಕಚೇರಿಯಲ್ಲೇ ಕುಳಿತು ಕೆಲಸ ಮಾಡಿದರೆ ಆಗದು. ಫೀಲ್ಡ್‌ ಗೆ ಹೋಗಬೇಕು. ಕುಳಿತಲ್ಲೇ ಕುಳಿತು ಪರಿಣಾಮಕಾರಿಯಾಗಿ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳಲು ಸಾಧ್ಯವಾಗದು. ಅದಕ್ಕೇ ಮುಂಚಿತವಾಗಿ ಸಭೆ ಕರೆಯಲಾಗಿದೆ ಎಂದರು.

ಯಾವುದೇ ಕಾರಣಕ್ಕೆ ಕರ್ತವ್ಯ ಲೋಪ ಆಗಬಾರದು. ಬೇಜವಾಬ್ದಾರಿತನದಿಂದ ಅನಾಹುತಗಳಾದರೆ ಸರ್ಕಾರ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವುದು. ನೆಪ ಹೇಳಿಕೊಂಡು ಪರಿಹಾರ ಕ್ರಮ ವಿಳಂಬ ಮಾಡುವುದು ಸರಿಯಲ್ಲ. ಯಾವುದೇ ಕಾರಣಕ್ಕೆ ಲೋಪ ಆಗಬಾರದು ಎಂದು ಹೇಳಿದರು.

ಲೋಪ ಎಸಗಿದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು. ಜನ ಸರ್ಕಾರದಿಂದ ಬದಲಾವಣೆ ಬಯಸಿದ್ದಾರೆ. ಸರ್ಕಾರಕ್ಕೆ ಹೊಸ ಇಮೇಜ್‌ ಕೊಡಲೇಬೇಕು. ಜನರ ನಿರೀಕ್ಷೆಗೆ ತಕ್ಕಂತೆ ಕೆಲಸ ಮಾಡುವ ಸರ್ಕಾರ ಬಂದಿದೆ ಎಂಬ ಸಂದೇಶ ಹೋಗಬೇಕು ಎಂದರು.

ಜಿಲ್ಲಾಧಿಕಾರಿಗಳು, ಸಿಇಓ ಗಳದ್ದು ಜವಾಬ್ದಾರಿಯುತ ಸ್ಥಾನ. ಜೊತೆಗೆ ಪೊಲೀಸ್‌ ವರಿಷ್ಠಾಧಿಕಾರಿಗಳ ಹೊಣೆಯೂ ಪ್ರಮುಖವಾದದ್ದು. ಕರ್ನಾಟಕದ ಜನತೆ ಬದಲಾವಣೆ ಬಯಸಿದ್ದಾರೆ. ಆಲಸ್ಯ ಬಿಟ್ಟು ಕೆಲಸ ಮಾಡಿ. ಬಹಳ ಜನ ಜಿಲ್ಲಾಧಿಕಾರಿಗಳು ತಾಲ್ಲೂಕುಗಳಿಗೆ ಭೇಟಿ ನೀಡಿರುವುದಿಲ್ಲ. ಇನ್ನು ಮುಂದೆ ಇಂತಹುದಕ್ಕೆ ಅವಕಾಶವಿಲ್ಲ. ಜಿಲ್ಲಾಧಿಕಾರಿಗಳು ಕಡ್ಡಾಯವಾಗಿ ಕ್ಷೇತ್ರ ಭೇಟಿ ಮಾಡಬೇಕು ಎಂದು ತಿಳಿಸಿದರು.

ಕಳೆದ ಕೆಲವು ವರ್ಷಗಳಿಂದ ಪ್ರವಾಹ ನೋಡುತ್ತಾ ಇದ್ದೀರಿ. ಹವಾಮಾನ ಇಲಾಖೆ ಸಂಪರ್ಕ- ಮುನ್ಸೂಚನೆ ಅರಿತು ಕೆಲಸ ಮಾಡಿ. ಪ್ರವಾಹ ನಿಯಂತ್ರಣಕ್ಕೆ ಅಗತ್ಯ ಸಲಕರಣೆಗಳನ್ನು ಸಿದ್ಧಪಡಿಸಿಟ್ಟುಕೊಳ್ಳಿ. ಪ್ರವಾಹ ಬರುವ ಪ್ರದೇಶಗಳಲ್ಲಿ ಮುನ್ನೆಚ್ಚರಿಕೆ ತೆಗೆದುಕೊಳ್ಳಿ. ಬೆಳೆಹಾನಿ ಮಾಹಿತಿ ಇರಬೇಕು. ಅನುದಾನ ಅಗತ್ಯವಿದ್ದಲ್ಲಿ ಮನವಿ ಸಲ್ಲಿಸಿ ಬಿಡುಗಡೆ ಮಾಡಿಸಿಕೊಳ್ಳಬೇಕು ಎಂದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular