ಅರಣ್ಯ ಪ್ರದೇಶದಲ್ಲಿನ ಸಣ್ಣ ಹಿಡುವಳಿದಾರರನ್ನು ಒಕ್ಕಲಿಬ್ಬಿಸದೆ ಅರಣ್ಯ ಭೂಮಿ ಸಂರಕ್ಷಣೆಗೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಅರಣ್ಯ ಪರಿಸರ ಮತ್ತು ಜೀವಿ ಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ಸ್ಪಷ್ಟಪಡಿಸಿದ್ದಾರೆ.
ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿ ಹಿರಿಯ ಶ್ರೀಗಳ ಗದ್ದುಗೆಯ ದರ್ಶನ ಪಡೆದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಂದಾಯ ಇಲಾಖೆ ಅರಣ್ಯ ಇಲಾಖೆ ಜಂಟಿಯಾಗಿ ಸಮೀಕ್ಷೆ ನಡೆಸಿದ ಬಳಿಕ ಈ ಸಮಸ್ಯೆಗೆ ಪರಿಹಾರ ದೊರಕಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.
ಉಸಿರಾಡುವ ಗಾಳಿ ಕುಡಿಯುವ ನೀರು ಕಲುಷಿತವಾದರೆ ವಿಷವಾದರೆ ಬದುಕುವುದು ಹೇಗೆ? ಎಂದು ಪ್ರಶ್ನಸಿದ ಅವರು ತಮಗೆ ದೊರೆತಿರುವ ಈ ಖಾತೆಯಲ್ಲಿ ದಕ್ಷ ಪ್ರಾಮಾಣಿಕವಾಗಿ ಕೆಲಸ ಮಾಡಿ ಮುಂದಿನ ಪೀಳಿಗೆ ಸ್ಮರಿಸುವಂತಹ ಕಾರ್ಯ ಮಾಡುವುದಾಗಿ ಭರವಸೆ ನೀಡಿದರು.
ಅನ್ನ, ಜ್ಞಾನ, ಅಕ್ಷರ ದಾಸೋಹದ ತಾಣವಾದ ಮಠಕ್ಕೆ ಆಗಮಿಸಿದಾಗ ಮನಸ್ಸಿಗೆ ಶಾಂತಿ ನೆಮ್ಮದಿ ಸಿಗುತ್ತದೆ ಪೂಜ್ಯರ ಪ್ರೇರಣೆ ಪಡೆದು, ಸರ್ವರಿಗೂ ಲೇಸನ್ನೇ ಬಯಸುವ ಬಸವಾದಿ ಪ್ರಮಥರ ಹಿತವಚನದಂತೆ ಕರ್ನಾಟಕವನ್ನು ಸರ್ವ ಜನಾಂಗದ ಶಾಂತಿಯ ತೋಟವಾಗಿ ಪರಿವರ್ತಿಸಿ, ರಾಜ್ಯವನ್ನು ಪ್ರಗತಿಪಥದಲ್ಲಿ ಕೊಂಡೊಯ್ಯುವ ಕಾರ್ಯ ಮಾಡಲಾಗುವುದು ಎಂದರು.
ಗ್ಯಾರಂಟಿಗಳ ಅನುಷ್ಠಾನ ಗ್ಯಾರಂಟಿ ಆಗಲಿದೆ. ಕಾಂಗ್ರೆಸ್ ಪಕ್ಷ ಚುನಾವಣಾ ಪೂರ್ವದಲ್ಲಿ ನೀಡಿದ ಎಲ್ಲ ಗ್ಯಾರಂಟಿಗಳನ್ನು ಅನುಷ್ಠಾನಕ್ಕೆ ತರಲು ಮೊದಲ ಸಚಿವ ಸಂಪುಟದಲ್ಲಿಯೇ ತಾತ್ವಿಕ ಒಪ್ಪಿಗೆ ಸೂಚಿಸಲಾಗಿದ್ದು, ಈ ಬಗ್ಗೆ ರೂಪು ರೇಶೆ ತಯಾರಿಸಲಾಗುತ್ತಿದೆ ಶೀಘ್ರವೇ ಕಾಂಗ್ರೆಸ್ ಪಕ್ಷ ಕೊಟ್ಟ ಮಾತಿನಂತೆ ನಡೆದು ಮಾದರಿಯಾಗಲಿದೆ ಎಂಬ ವಿಶ್ವಾಸವನ್ನು ಸಚಿವರು ವ್ಯಕ್ತಪಡಿಸಿದರು.


