ಆದಾಯಕ್ಕಿಂತ ಹೆಚ್ಚಿನ ಆಸ್ತಿ ಗಳಿಕೆ ಆರೋಪ ಮೇರೆಗೆ ತುಮಕೂರಿನ ಆರ್ ಟಿ ನಗರದಲ್ಲಿರುವ ಕೆಐಎಡಿಬಿ ಅಧಿಕಾರಿಯೊಬ್ಬರ ಮನೆ ಮೇಲೆ ಮೇ 31ರ ಬೆಳಗ್ಗೆಯೇ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು ಹಲವು ದಾಖಲೆಗಳನ್ನು ವಶಪಡಿಸಿಕೊಂಡಿದ್ದಾರೆ.
ಆರ್.ಟಿ. ನಗರದ ಪಕ್ಕದಲ್ಲಿರುವ ಶಂಕರಪುರಂನ ಡಿ ಬ್ಲಾಕ್ ನಲ್ಲಿರುವ ಸಿ.ಎನ್.ಮೂರ್ತಿ ಅವರ ಮನೆ ಮೇಲೆ ದಾಳಿ ನಡೆದಿದೆ. ಮೂರ್ತಿ ಮೈಸೂರಿನ ಕೆಐಎಡಿಬಿ ಕಚೇರಿಯಲ್ಲಿ ಕಾರ್ಯನಿರ್ವಾಹಕ ಇಂಜಿಯರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದು ತುಮಕೂರಿನಲ್ಲಿ ವಾಸ ಮಾಡುತ್ತಿದ್ದಾರೆ.
ಇಂದು ಬೆಳಗ್ಗೆ ಲೋಕಾಯುಕ್ತ ಎಸ್.ಪಿ ವಲಿಬಾಷಾ ಮಾರ್ಗದರ್ಶನದಲ್ಲಿ ಡಿವೈಎಸ್.ಪಿಗಳಾದ ಮಂಜುನಾಥ್ ಮತ್ತು ಹರೀಶ್ ನೇತೃತ್ವದ ತಂಡ ದಾಳಿ ನಡೆಸಿ ದಾಖಲೆಗಳ ತಪಾಸಣೆ ನಡೆಸಿದ್ದಾರೆ.

ಇದೇ ವೇಳೆ ಲೋಕಾಯುಕ್ತ ಅಧಿಕಾರಿಗಳು ಸಿ.ಎನ್.ಮೂರ್ತಿ ಅವರ ಮನೆ ಹಾಗೂ ಸಮೀಪದಲ್ಲೇ ಇರುವ ಅವರ ಮಾವ, ಮತ್ತು ನಾದಿನಿ ಮನೆ ಮೇಲೂ ಏಕಕಾಲದಲ್ಲಿ ದಾಳಿ ನಡೆಸಲಾಗಿದೆ.
ಕಾಗದ ಪತ್ರಗಳು, ದಾಖಲೆಗಳ ಪರಿಶೀಲನೆ, ಚಿನ್ನಾಭರಣ, ಬೆಳ್ಳಿಯ ಆಭರಣಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಸಿ.ಎನ್. ಮೂರ್ತಿ ತಮ್ಮ ಆದಾಯಕ್ಕಿಂತ ಅಧಿಕ ಅಕ್ರಮ ಆಸ್ತಿ ಹೊಂದಿದ್ದಾರೆ ಎಂಬ ಖಚಿತ ಮಾಹಿತಿ ಮೇರೆಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, 8 ಲಕ್ಷಕ್ಕೂ ಹೆಚ್ಚು ನಗದು, 1 ಕೆ.ಜಿಗೂ ಅಧಿಕ ಚಿನ್ನಾಭರಣಗಳು, ಚರಾಸ್ತಿಯ ದಾಖಲಾತಿಗಳು ಲಭ್ಯವಾಗಿವೆ ಎಂದು ಲೋಕಾಯುಕ್ತ ಎಸ್ಪಿ ವಲಿಬಾಷಾ ತಿಳಿಸಿದ್ದಾರೆ.


