Friday, January 30, 2026
Google search engine
Homeಮುಖಪುಟಗೆದ್ದ ಅಹಂನಲ್ಲಿ ಕಾಂಗ್ರೆಸ್ - ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಲೇವಡಿ

ಗೆದ್ದ ಅಹಂನಲ್ಲಿ ಕಾಂಗ್ರೆಸ್ – ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಲೇವಡಿ

ಕೆಲವರ ವಿವೇಕರಹಿತ ಹೇಳಿಕೆಗಳಿಗೆ ಉತ್ತರಿಸುವುದು ಬೇಡ ಭಾವಿಸಿದ್ದೆ. ನಾನು ಸೋತ ನೋವಿನಲ್ಲಿದ್ದೇನೆ. ಕಾಂಗ್ರೆಸ್ ನವರು ಗೆದ್ದ ಅಹಂನಲ್ಲಿ ಇದ್ದಾರೆ. ಅಹಂ ಅಳಿಯುತ್ತದೆ ಅನ್ನುವ ಕನಿಷ್ಠ ಅರಿವು ಅವರಿಗೆ ಇದ್ದಂತೆ ಇಲ್ಲ. ಆ ಅರಿವು ಬರುವ ಕಾಲವೂ ದೂರವಿಲ್ಲ. ಕಾಯುವ ತಾಳ್ಮೆ ನನಗಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

ವಿಧಾನಸಭೆ ಚುನಾವಣೆಯಲ್ಲಿ ಸೋತರೆ ಜತ್ಯತೀತ ಜನತಾ ದಳ ಪಕ್ಷವನ್ನು ವಿಸರ್ಜನೆ ಮಾಡುತ್ತೇನೆ ಎಂದು ಕುಮಾರಸ್ವಾಮಿ ಹೇಳಿದ್ದರು. ಅವರು ಯಾವಾಗ ವಿಸರ್ಜನೆ ಮಾಡುತ್ತಾರೆ? ಪಕ್ಷಕ್ಕೆ ಯಾವಾಗ ಅಂತಿಮ ಸಂಸ್ಕಾರ ಮಾಡುತ್ತಾರೆ? ಎಂದು ಕೆಲ ಅರೆಬೆಂದ ಸಚಿವರು, ಶಾಸಕರು ಸಲ್ಲದ ಹೇಳಿಕೆಗಳನ್ನು ನೀಡುತ್ತಿರುವುದು ನನ್ನ ಗಮನಕ್ಕೆ ಬಂದಿದೆ ಎಂದರು.

ಅವರೆಲ್ಲರ ಅಜ್ಞಾನಕ್ಕೆ ನನ್ನ ಪ್ರಗಾಢ ಸಾಂತ್ವನವಿದೆ. ಅವರ ಕನ್ನಡ ಭಾಷಾಜ್ಞಾನದ ಬಗ್ಗೆ ಕಾಳಜಿ ಇದೆ. ಆ ಮಹಾಶಯರು ನನ್ನ ಹೇಳಿಕೆಗಳನ್ನೊಮ್ಮೆ ತಿಳಿಯಲಿ. ಪತ್ರಿಕೆಗಳಲ್ಲಿ ಪ್ರಕಟವಾಗಿವೆ, ಸುದ್ದಿವಾಹಿನಿಗಳಲ್ಲಿ ಪ್ರಸಾರವಾಗಿವೆ. ಕನ್ನಡ ಓದಲು ಬಾರದಿದ್ದರೆ ನನ್ನ ಬಳಿ ಬರಲಿ, ಮನದಟ್ಟು ಆಗುವ ರೀತಿ ಹೇಳುತ್ತೇನೆ. ಕನ್ನಡವನ್ನೂ ಕಲಿಸುತ್ತೇನೆ ಎಂದು ತಿಳಿಸಿದ್ದಾರೆ.

ನನಗೆ 123 ಕ್ಷೇತ್ರಗಳನ್ನು ಕೊಟ್ಟರೆ, ನಾನು ಭರವಸೆ ಕೊಟ್ಟಂತೆ ಪಂಚರತ್ನ ಯೋಜನೆಗಳನ್ನು ಜಾರಿ ಮಾಡದಿದ್ದರೆ ಜೆಡಿಎಸ್ ಪಕ್ಷವನ್ನು ವಿಸರ್ಜನೆ ಮಾಡುತ್ತೇನೆ, ಆಮೇಲೆ ಎಂದೂ ವೋಟು ಕೇಳಲು ನಿಮ್ಮ ಮನೆ ಬಾಗಿಲಿಗೆ ಬರುವುದಿಲ್ಲ ಎಂದು ಜನರಿಗೆ ಹೇಳಿದ್ದು ಹೌದು ಎಂದಿದ್ದಾರೆ.

ಚುನಾವಣೆ ಫಲಿತಾಂಶ ಬಂದಿದೆ, ನನಗೆ ಜನರು 123 ಕ್ಷೇತ್ರ ಕೊಡಲಿಲ್ಲ. ಈಗ ಪಂಚರತ್ನ ಜಾರಿ ಹಾಗೂ ಪಕ್ಷ ವಿಸರ್ಜನೆ ಪ್ರಶ್ನೆ ಎಲ್ಲಿ? ಸಾಮಾನ್ಯಜ್ಞಾನವೇ ಇಲ್ಲದ ಸಚಿವರಿಗೆ ಈ ಪರಿ ಅಜ್ಞಾನವಿದೆ ಎಂದು ನಾನಂತೂ ಎಣಿಸಿರಲಿಲ್ಲ. ಇಷ್ಟು ಅವಿವೇಕವುಳ್ಳ ಇವರ ಮುಂದಿನ ಆಡಳಿತದ ಈಗಲೇ ಆತಂಕವಾಗುತ್ತಿದೆ ಎಂದು ಹೇಳಿದ್ದಾರೆ.

ಪಕ್ಷ ವಿಸರ್ಜನೆ, ಅಂತಿಮ ಸಂಸ್ಕಾರದ ಹೇಳಿಕೆ ಕೊಟ್ಟ ಸಂಸ್ಕಾರಹೀನರಿಗೆ ಹೇಳುವುದು ಇಷ್ಟೇ. ನನಗೆ 123 ಸೀಟು ಬಂದಿಲ್ಲ, ಪಂಚರತ್ನ ಜಾರಿಗೆ ಜನರು ಅವಕಾಶವನ್ನೂ ಕೊಟ್ಟಿಲ್ಲ, ಹಾಗಾಗಿ ಪಕ್ಷವನ್ನು ವಿಸರ್ಜನೆ ಮಾಡುವುದೂ ಇಲ್ಲ. ಇನ್ನೇನಾದರೂ ಅನುಮಾನ ಇದ್ದವರು ಬರಲಿ, ಅಂಥವರ ಅಜ್ಞಾನ ಹೋಗಲಾಡಿಸುತ್ತೇನೆ ಎಂದು ತಿಳಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular