ಜುಲೈ 3 ರಂದು ಆಯವ್ಯಯ ಅಧಿವೇಶನ ಬಹುತೇಕ ಪ್ರಾರಂಭವಾಗಲಿದ್ದು, 7 ರಂದು ಬಜೆಟ್ ಮಂಡಿಸಲಾಗುವುದು. ಈ ಬಗ್ಗೆ ಸಂಪುಟದಲ್ಲಿ ತೀರ್ಮಾನ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ದಾವಣಗೆರೆ ಹೆಲಿಪ್ಯಾಡಿನ ಬಳಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಈ ಬಾರಿಯ ಬಜೆಟ್ ಗಾತ್ರದ ಬಗ್ಗೆ ಬಜೆಟ್ ಸಿದ್ಧತೆಗಳ ಸಭೆ ಪ್ರಾರಂಭವಾದ ನಂತರ ಸ್ಪಷ್ಟ ಚಿತ್ರಣ ದೊರೆಯಲಿದೆ. ಹಿಂದಿನ ಸರ್ಕಾರ 39782 ಲಕ್ಷ ಕೋಟಿ ರೂ.ಗಳ ಬಜೆಟ್ ಮಂಡಿಸಿದ್ದರು ಎಂದು ಹೇಳಿದ್ದಾರೆ.
ಗೋ ಹತ್ಯೆ ನಿಷೇಧ ಕಾಯ್ದೆಯ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಲಾಗುವುದು. 1964 ಕಾಯ್ದೆಯಲ್ಲಿ 12 ವರ್ಷ ತುಂಬಿರುವ ಬರಡು ಹಾಗೂ ವ್ಯವಸಾಯಕ್ಕೆ ಉಪಯೋಗವಿಲ್ಲದ ರಾಸುಗಳ ಬಗ್ಗೆ ಹೇಳಲಾಗಿದೆ. ಆಮೇಲೆ ತಿದ್ದುಪಡಿಯಾಗಿದೆ ಎಂದು ತಿಳಿಸಿದ್ದಾರೆ.
ರೈತರಿಗೆ ತೊಂದರೆಯಾಗದಂತೆ ಬೀಜ ಗೊಬ್ಬರಗಳ ಸರಬರಾಜು ಆಗಬೇಕೆಂದು ಎಲ್ಲ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ್ ಸಿಇಒಗಳಿಗೆ ವೀಡಿಯೋ ಸಂವಾದದ ಮುಖಾಂತರ ತಿಳಿಸಲಾಗಿದೆ. ಪ್ರವಾಹ ಉಂಟಾದರೆ ಎಲ್ಲಾ ಸಿದ್ಧತೆಗಳನ್ನು ಕೈಗೊಳ್ಳುವಂತೆ ಸೂಚಿಸಿದೆ ಎಂದರು.
ವಿದ್ಯುತ್ ದರ ಏರಿಕೆ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ವಿದ್ಯುತ್ ದರ ಏರಿಕೆ ಆರ್.ಇ.ಸಿ ನಲ್ಲಿ ಮೊದಲೇ ತೀರ್ಮಾನವಾಗಿದೆ. ಹಿಂದೆಯೇ ಆಗಿದ್ದ ತೀರ್ಮಾನವನ್ನು ಈಗ ಜಾರಿ ಮಾಡಲಾಗಿದೆ ಎಂದು ಸ್ಪಷ್ಟಪಡಿಸಿದರು.
ಇಂದಿರಾ ಕ್ಯಾಂಟೀನ್ಗಳನ್ನು ಪುನರಾರಂಭಿಸಲು ಸಿದ್ಧತೆಗಳನ್ನು ಮಾಡಲು ಸೂಚಿಸಲಾಗಿದೆ. ಕ್ಯಾಂಟೀನುಗಳ ನೌಕರರಿಗೆ ವೇತನ ದೊರೆತಿಲ್ಲವಾದರೆ ಅಥವಾ ಬಾಕಿ ಇದ್ದರೆ ಅದನ್ನು ಕೊಡಿಸುವ ವ್ಯವಸ್ಥೆ ಮಾಡಲಾಗುವುದು ಎಂದರು.


