ತೋಟಗಾರಿಕಾ ಬೆಳೆಗಳಲ್ಲಿ ಒಂದಾಗಿರುವ ಕೊಬ್ಬರಿ ಬೆಲೆ ಪಾತಾಳಕ್ಕೆ ಕುಸಿದು, ಬೆಳೆಗಾರರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದು ಕೂಡಲೇ ಕೇಂದ್ರ ಸರ್ಕಾರ ಕ್ವಿಂಟಾಲ್ ಕೊಬ್ಬರಿಗೆ 15 ಸಾವಿರ ರೂ. ಬೆಂಬಲ ಬೆಲೆ ಘೋಷಿಸಬೇಕೆಂದು ಮಾಜಿ ಸಂಸದ ಎಸ್.ಪಿ. ಮುದ್ದಹನುಮೇಗೌಡ ಒತ್ತಾಯಿಸಿದ್ದಾರೆ.
ತುಮಕೂರಿನಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇಂದ್ರ ಸರ್ಕಾರ ರಾಗಿ ಸೇರಿದಂತೆ 14 ಬೆಳೆಗಳಿಗೆ ಬೆಂಬಲ ಬೆಲೆ ಹೆಚ್ಚಳ ಮಾಡಿರುವಂತೆ ಕೊಬ್ಬರಿಗೂ ಬೆಂಬಲ ಬೆಲೆ ಹೆಚ್ಚಿಸುವಂತೆ ಪ್ರಧಾನಿ ಮೋದಿ ಅವರಿಗೆ ಪತ್ರ ಬರೆಯುತ್ತೇನೆ ಎಂದರು.
ಈ ಹಿಂದೆ ಕ್ವಿಂಟಾಲ್ ಕೊಬ್ಬರಿಗೆ 18 ಸಾವಿರ ರೂ. ಬೆಲೆ ನಿಗದಿಪಡಿಸಲಾಗಿತ್ತು. ಆದರೆ ಪ್ರಸ್ತುತ ಕ್ವಿಂಟಾಲ್ ಕೊಬ್ಬರಿ 8600 ರೂ.ಗಳಿಗೆ ಕುಸಿದಿದೆ. ಕೊಬ್ಬರಿ ಇಳುವರಿ ಹಾಗೂ ಬೆಲೆ ಎರಡೂ ಕುಸಿತ ಕಂಡಿದೆ. ಆದ್ದರಿಂದ ನಫೆಡ್ ಮಧ್ಯೆ ಪ್ರವೇಶಿಸಿ ಕನಿಷ್ಠ 15 ಸಾವಿರ ರೂ. ಬೆಂಬಲ ಬೆಲೆ ಮೂಲಕ ಖರೀದಿಸಬೇಕು ಎಂದು ಆಗ್ರಹಿಸಿದರು.
ಕೊಬ್ಬರಿಗೆ ಬೆಂಬಲ ಬೆಲೆ 11,720 ರೂ. ಘೋಷಣೆ ಮಾಡಲಾಗಿದೆ. 16300 ರೂ. ನಷ್ಟು ಬೆಂಬಲ ಬೆಲೆಯನ್ನು ನೀಡಬೇಕು ಎಂದು ಕೃಷಿ ಇಲಾಖೆ ಹೇಳಿದೆ. ಈ ಹಿಂದಿನ ರಾಜ್ಯ ಸರ್ಕಾರ ಕೂಡ ಕೇಂದ್ರಕ್ಕೆ ಬೆಂಬಲ ಬೆಲೆ ನೀಡುವಂತೆ ಮನವಿ ಮಾಡಿತ್ತು. ಬೆಲೆ ಕಡಿಮೆಯಾಗಿರುವ ಪರಿಣಾಮ ಕೊಬ್ಬರಿ ಉತ್ಪಾದನೆಯೂ ಕಡಿಮೆಯಾಗುತ್ತಿದೆ. ಇದಕ್ಕೆ ಕಾರಣಗಳನ್ನು ಹುಡುಕುವ ಕೆಲಸವೂ ಆಗಬೇಕಿದೆ ಎಂದು ಸಲಹೆ ನೀಡಿದರು.
ಕ್ವಿಂಟಾಲ್ ಕೊಬ್ಬರಿಗೆ ಕನಿಷ್ಠ 15 ಸಾವಿರ ರೂ. ಬೆಲೆ ಘೋಷಿಸುವಂತೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಕೃಷಿ ಸಚಿವರಿಗೆ ಪತ್ರ ಬರೆಯುತ್ತಿದ್ದೇವೆ ಎಂದು ತಿಳಿಸಿದರು.
ನಾನು ಈ ಹಿಂದೆ ಸಂಸದನಾಗಿದ್ದಾಗ ರಾಜ್ಯದ ಎಲ್ಲ ಸಂಸದರ ಜತೆಗೂಡಿ ಕೊಬ್ಬರಿ ಬೆಲೆ ಹೆಚ್ಚಳ ಮಾಡುವಂತೆ ಕೇಂದ್ರ ಸರ್ಕಾರಕ್ಕೆ ಮನವಿ ಪತ್ರ ಸಲ್ಲಿಸುತ್ತಿದ್ದೆ. ಈಗಲೂ ಸಹ ರಾಜ್ಯದ ಎಲ್ಲ ಸಂಸದರು ಕೊಬ್ಬರಿಗೆ ಬೆಂಬಲ ಬೆಲೆ ನಿಗದಿಪಡಿಸುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸಲು ಧ್ವನಿ ಎತ್ತಬೇಕು ಎಂದು ಹೇಳಿದರು.


