ಕುಟುಂಬದ ಜವಾಬ್ದಾರಿಯನ್ನು ತನ್ನ ಹೆಗಲ ಮೇಲೆ ಹೊತ್ತು ಹಗಲಿರುಳು ಶ್ರಮಿಸುತ್ತಿರುವ ನನ್ನ ಸಹೋದರಿಯರಿಗೆ ಶಕ್ತಿ ಯೋಜನೆಯನ್ನು ಏಪ್ರಿಲ್ 11ರಂದು ಅನುಷ್ಠಾನಗೊಳಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಶಕ್ತಿ ಯೋಜನೆಗೆ ಚಾಲನೆ ನೀಡಿದ ಅವರು, ಉಜ್ವಲ ಭವಿಷ್ಯದ ಕನಸು ಕಟ್ಟಿಕೊಂಡು ಶಾಲಾ ಕಾಲೇಜುಗಳಿಗೆ ಪ್ರಯಾಣ ಬೆಳೆಸುವ ವಿದ್ಯಾರ್ಥಿನಿಯರಿಗೆ ಶಕ್ತಿ ಯೋಜನೆಯಿಂದ ಅನುಕೂಲವಾಗಲಿದೆ ಎಂದು ತಿಳಿಸಿದ್ದಾರೆ.
ಅನಾರೋಗ್ಯ, ಅಗತ್ಯ ವಸ್ತುಗಳ ಖರೀದಿ ಇನ್ನಿತರ ಕೆಲಸ ಕಾರ್ಯಗಳ ನಿಮಿತ್ತ ಪ್ರಯಾಣ ಮಾಡುವ ನಾಡಿನ ತಾಯಂದಿರಿಗೆ ನಮ್ಮ ಈ ಶಕ್ತಿ ಯೋಜನೆಯನ್ನು ಅತ್ಯಂತ ಹೆಮ್ಮೆಯಿಂದ ಅರ್ಪಿಸುತ್ತಿದ್ದೇನೆ ಎಂದು ಹೇಳಿದ್ದಾರೆ.
ಆರ್ಥಿಕ ಸಂಕಷ್ಟದ ನಡುವೆಯೂ ಬದುಕಿನ ಉತ್ಸಾಹ ಕಳೆದುಕೊಳ್ಳದೆ, ಸವಾಲುಗಳನ್ನು ಮೆಟ್ಟಿನಿಂತು ಹೋರಾಟದ ಮೂಲಕ ಬದುಕು ಕಟ್ಟಿಕೊಂಡಿರುವ ಕನ್ನಡ ನೆಲದ ಪ್ರತಿ ಮಹಿಳೆಯೂ ನಮ್ಮ ಈ ಯೋಜನೆಯ ಹಿಂದಿನ ಪ್ರೇರಕ ಶಕ್ತಿ ಎಂದರು.
ನಾಡಿನ ಎಲ್ಲ ಮಹಿಳೆಯರು ನಮ್ಮ ಈ ಯೋಜನೆಯ ಲಾಭ ಪಡೆದು ಮತ್ತಷ್ಟು ಸಶಕ್ತ ಮತ್ತು ಸ್ವಾವಲಂಬಿಗಳಾಗಲಿ ಎಂದು ಅವರು ಹಾರೈಸಿದ್ದಾರೆ.
ಇಂದಿನಿಂದ ಕೆಎಸ್.ಆರ್.ಟಿಸಿ, ಬಿಎಂಟಿಸಿ ಬಸ್ ಗಳಲ್ಲಿ ಮಹಿಳೆಯರು ಉಚಿತವಾಗಿ ಪ್ರಯಾಣಿಸಬಹುದು. ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಶಕ್ತಿ ಯೋಜನೆಯ ಅನುಷ್ಠಾನಕ್ಕೆ ರಾಜ್ಯದ ಮಹಿಳೆಯರಿಂದ ವ್ಯಾಪಕ ಶ್ಲಾಘನೆ ವ್ಯಕ್ತವಾಗಿದೆ.