ಹಳೇ ಪಿಂಚಣಿ ಯೋಜನೆಯ ಜಾರಿಗೆ ಸಂಬಂಧಿಸಿದಂತೆ ಸಚಿವ ಸಂಪುಟದಲ್ಲಿ ಚರ್ಚಿಸಿ ಬಜೆಟ್ ನಲ್ಲಿ ಘೋಷಿಸುವ ಬಗ್ಗೆ ತೀರ್ಮಾನಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಹಳೆ ಪಿಂಚಣಿ ಯೋಜನೆ ಜಾರಿಗೊಳಿಸುವಂತೆ ಕೋರಿ ಕರ್ನಾಟಕ ರಾಜ್ಯ ಸರ್ಕಾರಿ ಎನ್.ಪಿ.ಎಸ್. ನೌಕರರ ಸಂಘ ಹಾಗೂ ವಿವಿಧ ಸಂಘಟನೆಗಳ ಪದಾಧಿಕಾರಿಗಳ ನಿಯೋಗವು ಅವರನ್ನು ಭೇಟಿ ಮಾಡಿದ ಸಂದರ್ಭದಲ್ಲಿ ಮಾತನಾಡಿದರು.
ಸರ್ಕಾರ ಜಾರಿ ಮಾಡಿರುವ ಗ್ಯಾರಂಟಿ ಯೋಜನೆಗಳನ್ನು ಸಮರ್ಪಕವಾಗಿ ಜಾರಿಗೊಳಿಸಲು ನೌಕರರು ಕೆಲಸ ಮಾಡಬೇಕು. ಪ್ರಾಮಾಣಿಕವಾಗಿ ಕಾರ್ಯಕ್ರಮಗಳನ್ನು ಜನರಿಗೆ ಮುಟ್ಟಿಸುವ ಕೆಲಸ ಮಾಡಬೇಕೆಂದು ತಿಳಿಸಿದ್ದಾರೆ.
ವಿಧಾನ ಪರಿಷತ್ ಮಾಜಿ ಸದಸ್ಯ ವಿ.ಎಸ್ ಉಗ್ರಪ್ಪ ಮಾತನಾಡಿ, 1.4.2006 ರಲ್ಲಿ ಎನ್.ಪಿ.ಎಸ್ ಜಾರಿಯಾಗಿದೆ. 2.98 ಲಕ್ಷ ನೌಕರರು ಇದರ ವ್ಯಾಪ್ತಿಗೆ ಒಳಪಡುತ್ತಾರೆ. ಪಿಂಚಣಿ ಮೊತ್ತವನ್ನು ಎನ್.ಎಸ್.ಡಿ.ಎಲ್ ನಲ್ಲಿ ಠೇವಾಣಿ ಇಡಲಾಗಿದೆ. ಈ ಮೊತ್ತ ಬಳಕೆ ಮಾಡಿ ಇವರು ನಿವೃತ್ತಿಯಾಗುವ ವೇಳೆಗೆ ಲಭ್ಯವಾಗುವಂತೆ ಜಿ.ಪಿ.ಎಫ್ ನಲ್ಲಿ ಇಡಬಹುದು. ವೋಟ್ ಫಾರ್ ಒ.ಪಿ.ಎಸ್ ನಲ್ಲಿ ಭಾಗಿಯಾದವರ ಮೇಲೆ ಕೈಗೊಂಡಿರುವ ಶಿಸ್ತಿನ ಕ್ರಮ ಕೈಬಿಡುವ ಕುರಿತು ಸರ್ಕಾರ ತೀರ್ಮಾನಿಸಬೇಕು ಎಂದು ವಿವರಿಸಿದರು.
ಕರ್ನಾಟಕ ರಾಜ್ಯ ಎನ್.ಪಿ.ಎಸ್ ನೌಕರರ ಸಂಘದ ಅಧ್ಯಕ್ಷ ಶಾಂತಾರಾಂ ತೇಜ ಮಾತನಾಡಿ, ರಾಜಾಸ್ತಾನ, ಛತ್ತೀಸ್ ಗಡದಲ್ಲಿ ಎನ್.ಪಿ.ಎಸ್ ರದ್ದಾಗಿದ್ದು, ಕರ್ನಾಟಕದಲ್ಲಿಯೂ ಅದನ್ನು ರದ್ದುಗೊಳಿಸಿ ಹಳೆ ಪಿಂಚಣಿ ಯೋಜನೆಯನ್ನು ಜಾರಿಗೊಳಿಸಬೇಕು. ಎನ್.ಪಿ.ಎಸ್ ರದ್ದು ಮಾಡುವುದರಿಂದ ಯೋಜನೆಯಡಿ ಲಭ್ಯವಿರುವ ಒಟ್ಟು 19 ಸಾವಿರ ಕೋಟಿ ಹಣವನ್ನು ಸರ್ಕಾರದ ಅಭಿವೃದ್ಧಿ ಕಾರ್ಯಕ್ರಮ ಗಳಿಗೆ ದೊರೆಯಲಿದೆ. ನೌಕರರ ಪಾಲಿನ 9 ಸಾವಿರ ಕೋಟಿ ಜಿಪಿಎಫ್ ಗೆ ಪರಿವರ್ತನೆ ಮಾಡಿಕೊಳ್ಳುಬಹುದು ಹಾಗೂ ಸರ್ಕಾರದ 10 ಸಾವಿರ ಕೋಟಿ ರೂ.ಗಳು ಸರ್ಕಾರದ ಪಾಲನ್ನು ಅಭಿವೃದ್ಧಿ ಕಾರ್ಯಕ್ರಮಗಳಿಗೆ ಬಳಕೆ ಮಾಡಿಕೊಳ್ಳಬಹುದು ಎಂದು ತಿಳಿಸಿದರು.


