ಜೂನ್ ತಿಂಗಳಲ್ಲಿ ಸರ್ಕಾರ 10 ಕೆಜಿ ಪಡಿತರವನ್ನು ಒದಗಿಸದೇ ಇದ್ದಲ್ಲಿ, ನಾವು ರಾಜ್ಯ ವ್ಯಾಪಿ ಹೋರಾಟವನ್ನು ನಡೆಸುತ್ತೇವೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಎಚ್ಚರಿಕೆ ನೀಡಿದ್ದಾರೆ.
ಸರಣಿ ಟ್ವೀಟ್ ಮಾಡಿರುವ ಅವರು, ಸುಳ್ಳು ಭರವಸೆಗಳನ್ನು ನೀಡಿ ಅಧಿಕಾರಕ್ಕೆ ಬಂದು, ಈಗ ಭರವಸೆಗಳನ್ನು ಈಡೇರಿಸಲು ಆಗದೇ, ಜವಾಬ್ದಾರಿಯಿಂದ ನುಣುಚಿಕೊಳ್ಳಲು ಪ್ರಯತ್ನಿಸುವ ಈ ಸರ್ಕಾರಕ್ಕೆ ಕೆಲವೇ ದಿನಗಳಲ್ಲಿ ಜನತೆ ಹಿಡಿಶಾಪ ಹಾಕಲಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಹೊಸ ಸರ್ಕಾರ ರಚನೆಯಾದ ಮೊದಲ ಸಂಪುಟ ಸಭೆಯಲ್ಲಿ ಕಾಂಗ್ರೆಸ್ ನವರು 5 ಗ್ಯಾರಂಟಿಗಳಿಗೆ ತಾತ್ವಿಕ ಒಪ್ಪಿಗೆ ನೀಡಿ, ಅಧಿಕಾರಿಗಳೊಂದಿಗೆ ಅನೇಕ ಸರಣಿ ಸಭೆ ನಡೆಸಿದರು. ಅಂದೇ ಅಧಿಕಾರಿಗಳಿಗೆ ಸೂಕ್ತ ವ್ಯವಸ್ಥೆ ಮಾಡಿಕೊಳ್ಳಲು ತಿಳಿಹೇಳಬಹುದಿತ್ತಲ್ವಾ.? ಎಂದು ಪ್ರಶ್ನಿಸಿದ್ದಾರೆ.
ಕೊನೆ ಪಕ್ಷ ಟೆಂಡರ್ ಸಹ ಕರೆಯಲಿಲ್ಲ, ಕೇಂದ್ರ ಸರ್ಕಾರದೊಂದಿಗೆ ಸಂಪರ್ಕ ಸಹ ನಡೆಸದೇ, ಕೇವಲ FCI ನೊಂದಿಗೆ ಸಂವಹನ ನಡೆಸಿರುವುದನ್ನು ಗಮನಿಸಿದರೇ, ಈ ಸರ್ಕಾರಕ್ಕೆ ನುಡಿದಂತೆ ನಡೆಯಲು, ಜನರಿಗೆ ಅಕ್ಕಿ ಕೊಡಲು ಇಷ್ಟವಿಲ್ಲ ಎಂಬುದು ಸಾಬೀತಾಗುತ್ತದೆ. ಅಕ್ಕಿ ಕೊಡುವ ದಿನ ಹತ್ತಿರ ಬಂದ ಕಾರಣ, ಈಗ ಕೇಂದ್ರ ಸರ್ಕಾರದ ಮೇಲೆ ಗೂಬೆ ಕೂರಿಸಿ, ತಮ್ಮ ತಪ್ಪನ್ನು ಸಾರ್ವಜನಿಕರೆದುರು ಮರೆಮಾಚಲು ಯತ್ನಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.
ರಾಜ್ಯ ಸರ್ಕಾರದ ಬೊಕ್ಕಸದಿಂದ ಹಣ ಹೊಂದಿಸಿ, 1 ಕೆಜಿ ಅಕ್ಕಿಯನ್ನು ಖರೀದಿಸುವ ವೇಳೆಯಲ್ಲಿ ಸಹ, FCI ನಮಗೆ ಈ ಬಗ್ಗೆ ನಿಬಂಧನೆ ಇದೆ ಎಂದು ತಿಳಿಸಿತ್ತು. ಆನಂತರ ಈ ಬಗ್ಗೆ ಕಡತದಲ್ಲಿ ನಾನು ಸವಿವರವಾಗಿ ನಮೂದಿಸಿದ್ದು, ಏಪ್ರಿಲ್, ಮೇ, ಜೂನ್, ಜುಲೈಗೆ ಹೆಚ್ಚುವರಿ ಅಕ್ಕಿಯನ್ನು ಟೆಂಡರ್ ಮುಖಾಂತರ ಬೇರೆ ಆಹಾರ ನಿಗಮಗಳಿಂದಾದರೂ ಸಹ ಖರೀದಿಸಬೇಕು, ಕೇವಲ FCI ಮೇಲೆ ಅವಲಂಬಿತರಾಗಬಾರದು ಎಂದು ಸ್ಪಷ್ಟವಾಗಿ ಅಧಿಕಾರಿಗಳಿಗೆ ತಿಳಿಸಿದ್ದೆ ಎಂದಿದ್ದಾರೆ.
ಕೇಂದ್ರ ಸರ್ಕಾರವು ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆ ಅಡಿಯಲ್ಲಿ, ಯಾವುದೇ ಇತರ ಖರ್ಚುಗಳನ್ನು ರಾಜ್ಯ ಸರ್ಕಾರಗಳ ಮೇಲೆ ಹೊರಿಸದೇ, 5 ಕೆಜಿ ಅಕ್ಕಿಯನ್ನು ನೀಡುತ್ತಿದೆ. ಡಿಸೆಂಬರ್ ನಿಂದ, ಗರೀಬ್ ಕಲ್ಯಾಣ್ ಯೋಜನೆಯಡಿ ಕೇಂದ್ರ ಸರ್ಕಾರವು 10 ಕೆಜಿ ಅಕ್ಕಿಯನ್ನು ನೀಡುತ್ತಿದೆ ಎಂದು ಹೇಳಿದ್ದಾರೆ.
ಕಾಂಗ್ರೆಸ್ ನವರಿಗೆ ಜನರ ಮೇಲೆ ಸ್ವಲ್ಪವೂ ಕಾಳಜಿ ಇಲ್ಲ. ಬಡವರಿಗೆ ಆಸೆ-ಆಮೀಷಗಳನ್ನು ಒಡ್ಡಿ, ಈಗ ಅಧಿಕಾರಕ್ಕೆ ಬಂದ ನಂತರ, ನೀಡಿದ ಭರವಸೆಗಳನ್ನು ಈಡೇರಿಸಲು ಸಾಧ್ಯವಾಗಾದಾಗ ಬೇರೆಯವರ ಮೇಲೆ ಗೂಬೆ ಕೂರಿಸುವುದು ಸರಿಯಲ್ಲ. ಮಾತೆತ್ತಿದರೇ 13 ಬಜೆಟ್ ಮಂಡಿಸಿದ್ದೇನೆ ಎಂದು ಬೀಗುವ ಸ್ವಯಂಘೋಷಿತ ಆರ್ಥಿಕ ತಜ್ಞರಿಗೆ, ಗ್ಯಾರಂಟಿಗಳನ್ನು ಈಡೇರಿಸಲು ಸಂಪನ್ಮೂಲವನ್ನು ಹೇಗೆ ಕ್ರೋಢೀಕರಣಗೊಳಿಸುವುದು ಎಂಬ ಸಣ್ಣ ಅಂಶ ಗಮನಕ್ಕೆ ಬಂದಿರಲಿಲ್ಲವೇ.? ಎಂದು ಪ್ರಶ್ನಿಸಿದ್ದಾರೆ.


