ರೈತರಿಗೆ ಮಾರಕವಾಗಿರುವ ಮೂರು ಕೃಷಿ ಕಾಯ್ದೆಗಳನ್ನು ಹಿಂಪಡೆಯಬೇಕು. ಕೊಬ್ಬರಿಗೆ ಬೆಂಬಲ ಬೆಲೆ ಹೆಚ್ಚಿಸಬೇಕೆಂದು ಒತ್ತಾಯಿಸಿ ರಾಜ್ಯ ರೈತ ಸಂಘದ ವತಿಯಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು.
ಕರ್ನಾಟಕ ರಾಜ್ಯರೈತ ಸಂಘದ ರಾಜ್ಯ ಕಾರ್ಯಾಧ್ಯಕ್ಷ ಹಾಗೂ ತುಮಕೂರು ಜಿಲ್ಲಾಧ್ಯಕ್ಷ ಎ.ಗೋವಿಂದರಾಜು ನೇತೃತ್ವದಲ್ಲಿ ನಡೆದ ಪ್ರತಿಭಟನಾ ಧರಣಿಯಲ್ಲಿ ಮಾತನಾಡಿದ ಅವರು, ರೈತ ಸಂಘಟನೆಗಳಿಗೆ ಕೊಟ್ಟ ಮಾತಿನಂತೆ ಅಧಿಕಾರದಲ್ಲಿರುವ ಸಿದ್ದರಾಮಯ್ಯ ನೇತೃತ್ವದ ಸರಕಾರ ಕೂಡಲೇ ಕರ್ನಾಟಕ ಭೂ ಸುಧಾರಣಾ ತಿದ್ದುಪಡಿ ಕಾಯ್ದೆ-2013, ಎಪಿಎಂಸಿ ಮಾರುಕಟ್ಟೆ ತಿದ್ದುಪಡಿ ಕಾಯ್ದೆ ಹಾಗೂ ಗೋ ಹತ್ಯೆ ನಿಷೇಧ ಹಾಗೂ ಗೋ ವಂಶ ಸಂರಕ್ಷಣಾ ಕಾಯ್ದೆಗಳನ್ನು ಸರ್ಕಾರ ಕೂಡಲೇ ಹಿಂಪಡೆಯಬೇಕೆಂದು ಆಗ್ರಹಿಸಿದರು.
ಅರ್.ಎಸ್.ಎಸ್. ಆಣತಿಯಂತೆ ನಡೆಯುವ ಬಿಜೆಪಿ ಸರ್ಕಾರ ಭೂ ಸುಧಾರಣಾ ಕಾಯ್ದೆಗೆ ತಿದ್ದುಪಡಿ ತಂದ ಪರಿಣಾಮ, ಉಳುವವನೇ ಭೂಮಿ ಒಡೆಯ ಎಂಬ ಮಹಾತ್ವಕಾಂಕ್ಷೆಗೆ ಕೊಡಲಿ ಪೆಟ್ಟು ಬಿದ್ದಿರುವುದಲ್ಲದೆ, ಉಳ್ಳವನೇ ಭೂಮಿ ಒಡೆಯ ಎಂಬಂತಾಗಿದೆ. ರಿಯಲ್ ಎಸ್ಟೇಟ್ ಉದ್ಯಮಿಗಳು, ಭೂ ಮಾಫೀಯದವರಿಗೆ ಸಾವಿರಾರು ಎಕರೆ ಫಲವತ್ತಾ ಭೂಮಿಯನ್ನು ರೈತರಿಂದ ಕಸಿದು ನೀಡುವ ಪ್ರಯತ್ನ ನೀಡುವ ಪ್ರಕ್ರಿಯೆ ಇದಾಗಿದ್ದು, ಇದನ್ನು ಆರಂಭದಿಂದಲೂ ರೈತ ಸಂಘ ವಿರೋಧಿಸುತ್ತಾ ಬಂದಿದೆ. ರೈತರು ಬಿಜೆಪಿ ಸರ್ಕಾರದ ವಿರುದ್ದ ಪ್ರತಿಭಟನೆ ನಡೆಸುವ ವೇಳೆ ಬೆಂಬಲ ಸೂಚಿಸಿದ್ದ ಸಿದ್ದರಾಮಯ್ಯ ನಮ್ಮ ಸರಕಾರ ಬಂದರೆ ಈ ಕಾಯ್ದೆಗಳನ್ನು ವಾಪಸ್ ಪಡೆಯುವ ಭರವಸೆ ನೀಡಿತ್ತು. ಆದರಂತೆ ಕೂಡಲೇ ಕಾಯ್ದೆಗಳನ್ನು ವಾಪಸ್ ಪಡೆಯಬೇಕೆಂದು ಆಗ್ರಹಿಸಿದರು.
ರಾಜ್ಯದಲ್ಲಿ ಬಿಜೆಪಿ ಸರ್ಕಾರವನ್ನು ಕಿತ್ತೊಗೆಯಲು ರೈತ, ದಲಿತ, ಕಾರ್ಮಿಕ, ಮಹಿಳಾ, ವಿದ್ಯಾರ್ಥಿ ಯುವಜನತೆಮ, ಪ್ರಗತಿಪರ ಚಳವಳಿಯ ನೇತಾರರು ಶ್ರಮಿಸಿದ್ದಾರೆ. ಸರ್ಕಾರ ಅಧಿಕಾರಕ್ಕೆ ಬಂದ ತಕ್ಷಣೆ ಮತದಾರರಿಗೆ ನೀಡಿದ್ದ ಐದು ಗ್ಯಾರೆಂಟಿಗಳನ್ನು ಈಡೇರಿಸಲು ಮುಂದಾಗಿರುವುದು ಸ್ವಾಗತಾರ್ಹ ಬೆಳೆವಣಿಗೆಯಾಗಿದೆ. ಅದೇ ರೀತಿ ರೈತರಿಗೆ ಮಾರಕವಾಗಿರುವ ಈ ಕಾಯ್ದೆಗಳನ್ನು ವಾಪಸ್ ಪಡೆದು, ದೇಶದ ಬೆನ್ನೆಲುಬಾಗಿರುವ ರೈತರನ್ನು ಕಾಪಾಡಬೇಕು ಎಂದು ಒತ್ತಾಯಿಸಿದರು.
ಈ ಹಿಂದಿನ ಬಿಜೆಪಿ ಸರ್ಕಾರ ತನ್ನ ಅಂಗ ಸಂಸ್ಥೆಯಾದ ಸಂಘ ಪರಿವಾರಕ್ಕೆ ನೂರಾರು ಎಕರೆ ಸರಕಾರಿ ಜಾಗವನ್ನು ಮಂಜೂರು ಮಾಡಿದೆ. ರೈತರು ಕೃಷಿಗಾಗಿ ಸಣ್ಣ ಪ್ರಮಾಣದ ಸರಕಾರಿ ಜಮೀನು ಉಳುಮೆ ಮಾಡಿ ಫಾರಂ ನಂ 50-53 ಮತ್ತು 57 ಹಾಕಿ ಕಾಯುತಿದ್ದರೂ ಇದುವರೆಗೂ ಸಾಗುವಳಿ ಚೀಟಿ ನೀಡಿಲ್ಲ. ಆದರೆ ಯಾವುದೇ ಷರತ್ತು ಇಲ್ಲದೆ ನೂರಾರು ಎಕರೆಯನ್ನು ಸಂಘ ಪರಿವಾರದ ಸಂಘಟನೆಗಳಿಗೆ ನೀಡಲಾಗಿದೆ. ಸರಕಾರ ಕೂಡಲೇ ಮಂಜೂರಾತಿಯನ್ನು ರದ್ದುಪಡಿಸಿ, ಭೂಮಿಯನ್ನು ವಾಪಸ್ ಪಡೆಯಬೇಕೆಂದರು.


