ಅನ್ನಭಾಗ್ಯ ಯೋಜನೆಗೆ ಬೇಕಾದ ಅಕ್ಕಿಯನ್ನು ನೀಡಲು ಛತ್ತೀಸ್ ಗಡ ಸರ್ಕಾರ ಒಪ್ಪಿಗೆ ನೀಡಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ.
ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಅನ್ನಭಾಗ್ಯ ಯೋಜನೆಗೆ ಅಗತ್ಯವಾದಷ್ಟು ಅಕ್ಕಿ ಯಾವುದೇ ಒಂದು ರಾಜ್ಯದಿಂದ ಸಿಗುತ್ತಿಲ್ಲ. ಹಲವು ರಾಜ್ಯಗಳನ್ನು ಸಂಪರ್ಕಿಸಲಾಗಿದ್ದು, ಎಲ್ಲಿ ಅಕ್ಕಿ ಸಿಕ್ಕರೂ ಖರೀದಿಸಲಾಗುವುದು ನಮ್ಮ ರೈತರ ಬಳಿ ಇದ್ದರೂ ಖರೀದಿ ಮಾಡಲಾಗುವುದು ಎಂದರು.
ಅನ್ನಭಾಗ್ಯ ಯೋಜನೆಯಲ್ಲಿ ಅಕ್ಕಿ ಜತೆಗೆ ಜೋಳ, ರಾಗಿಯನ್ನು ಕೊಡಲಾಗುವುದು. ಬಡವರ ಯೋಜನೆ ಮುಂದುವರಿಸುತ್ತೇವೆ. ಯಾವುದೇ ಕಾರಣಕ್ಕೂ ಅನ್ನಭಾಗ್ಯ ಯೋಜನೆ ನಿಲ್ಲಿಸುವುದಿಲ್ಲ ಎಂದು ತಿಳಿಸಿದರು.
ವಿದ್ಯುತ್ ದರ ಹೆಚ್ಚಳದ ಬಗ್ಗೆ ಪ್ರತಿಕ್ರಿಯೆ ನೀಡಿದ ಪರಮೇಶ್ವರ್, ಹಿಂದಿನ ಬಿಜೆಪಿ ಸರ್ಕಾರ ವಿದ್ಯುತ್ ದರ ಹೆಚ್ಚಳ ಮಾಡಿದೆ. ಇದರಿಂದ ಕೈಗಾರಿಕೆಗಳ ಮೇಲೂ ಹೆಚ್ಚು ಹೊರೆ ಬಿದ್ದಿದೆ. ಈ ಬಗ್ಗೆ ಸರ್ಕಾರ ಯೋಚಿಸುತ್ತಿದ್ದು ಉದ್ಯಮಿಗಳಿಗೆ ತೊಂದರೆಯಾಗದಂತೆ ನೋಡಿಕೊಳ್ಳುತ್ತೇವೆ ಎಂದರು.


