ಬಡವರಿಗೆ ಅನ್ನ ನೀಡುವ ಅನ್ನಭಾಗ್ಯ ಯೋಜನೆಗೆ ಅಕ್ಕಿ ನೀಡದೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ದ್ವೇಷದ ರಾಜಕಾರಣ ಮಾಡುತ್ತಿದೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಚಂದ್ರಶೇಖರಗೌಡ ಆರೋಪಿಸಿದ್ದಾರೆ.
ತುಮಕೂರಿನ ಟೌನ್ಹಾಲ್ ವೃತ್ತದಲ್ಲಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ಅನ್ನಭಾಗ್ಯ ಯೋಜನೆಗೆ ಅಕ್ಕಿ ನೀಡಲು ನಿರಾಕರಿಸಿದ ಕೇಂದ್ರ ಸರ್ಕಾರದ ವಿರುದ್ದ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಭಾಗವಹಿಸಿ ಅವರು ಮಾತನಾಡಿ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷದ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಪಡಿತರ ಹಕ್ಕಿ ಪೂರೈಸುವ ಎಫ್.ಸಿ.ಐಗೆ ಪತ್ರ ಬರೆದು ಅಕ್ಕಿ ಪೂರೈಸುವಂತೆ ಮಾಡಿದ ಮನವಿ ಒಪ್ಪಿಗೆ ಸೂಚಿಸಿದ 24 ಗಂಟೆಯೊಳಗೆ ಕೇಂದ್ರದ ಒತ್ತಡಕ್ಕೆ ಮಣಿದು ಅಕ್ಕಿ ಪೂರೈಸಲು ನಿರಾಕರಿಸಿದೆ ಎಂದು ದೂರಿದರು.
ಕಾಂಗ್ರೆಸ್ ವಕ್ತಾರ ಮುರುಳೀಧರ ಹಾಲಪ್ಪ ಮಾತನಾಡಿ, ಒಂದೆಡೆ ಬಡವರಿಗೆ ವಿತರಿಸುವ ಅನ್ನಭಾಗ್ಯ ಯೋಜನೆಗೆ ಅಕ್ಕಿ ನೀಡದ ಬಿಜೆಪಿ ನೇತೃತ್ವದ ಸರ್ಕಾರ, ಗ್ಯಾರಂಟಿಗಳನ್ನು ಜಾರಿಗೊಳಿಸುವಂತೆ ಜನರನ್ನು ಎತ್ತಿಕಟ್ಟುತ್ತಿದೆ. ವರ್ಷಕ್ಕೆ ಎರಡು ಕೋಟಿ ಉದ್ಯೋಗ, ರೈತರ ಆದಾಯ ದ್ವಿಗುಣ, ಕಪ್ಪು ಹಣ ವಾಪಸ್ ತರಲು ನೀಡಿದ ಭರವಸೆ ಹಾಗೆಯೇ ಉಳಿದಿದೆ ಎಂದು ಟೀಕಿಸಿದರು.
ಕಾಂಗ್ರೆಸ್ ಪಕ್ಷದ ಶಕ್ತಿ ಯೋಜನೆ ಜಾರಿಯಿಂದ ದಿಕ್ಕು ತೋಚದಂತಾಗಿರುವ ಬಿಜೆಪಿ ಉಳಿದ ಗ್ಯಾರಂಟಿಗಳ ಜಾರಿಗೆ ಬರುವ ಮುನ್ನ ಜನರಲ್ಲಿ ಇನ್ನಿಲ್ಲದ ಗೊಂದಲ ಮೂಡಿಸಲು ಹೊರಟಿದೆ. ಜನತೆಗೆ ಕೊಟ್ಟ ಮಾತಿನಂತೆ ಪಡಿತರ ಚೀಟಿ ಹೊಂದಿರುವ ಕುಟುಂಬದ ಪ್ರತಿ ವ್ಯಕ್ತಿಗೆ 10 ಕೆ.ಜಿ ಅಕ್ಕಿ ನೀಡಲಿದೆ ಹೇಳಿದರು.
ಕಾಂಗ್ರೆಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಇಕ್ಬಾಲ್ ಅಹಮದ್, ಜಿಲ್ಲಾ ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷೆ ಗೀತಾರಾಜಣ್ಣ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಕೇಶವಮೂರ್ತಿ, ಜಿಲ್ಲಾ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ಆತೀಕ್ ಅಹಮದ್, ಷಣ್ಮುಖಪ್ಪ, ನರಸೀಯಪ್ಪ, ಕೆಂಚಮಾರಯ್ಯ, ಆರ್.ರಾಮಕೃಷ್ಣ, ಎಚ್.ನಿಂಗಪ್ಪ, ಟಿ.ಜಿ.ಲಿಂಗರಾಜು, ಸುಜಾತ, ಮರಿಚನ್ನಮ್ಮ ಇತರರು ಇದ್ದರು.


