ಸುಳ್ಳು ಗ್ಯಾರಂಟಿಗಳನ್ನು ನೀಡಿ ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರದ ವಿರುದ್ದ ಬಿಜೆಪಿ ಶಾಸಕರು ಸದನದ ಒಳಗೆ ಹೋರಾಟ ನಡೆಸಿದರೆ, ಬಿಜೆಪಿ ಕಾರ್ಯಕರ್ತರು, ಸೋತ ಪ್ರಮುಖರೊಂದಿಗೆ ಜುಲೈ3 ರಿಂದ ವಿಧಾನಸೌಧದ ಹೊರಗೆ ಅಧಿವೇಶನ ಮುಗಿಯುವವರೆಗು ಸತ್ಯಾಗ್ರಹ ನಡೆಸಲಿದ್ದೇವೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.
ತುಮಕೂರಿನ ಗಾಜಿನಮನೆಯಲ್ಲಿ ಆಯೋಜಿಸಿದ್ದ ಪ್ರೇರಣಾ ಸಮಾವೇಷ ಉದ್ಘಾಟಿಸಿ ಮಾತನಾಡಿದ ಅವರು, ಬಿಜೆಪಿಯ ಸೋಲು ನಿಜವಾದ ಸೋಲಲ್ಲ. ಕಾಂಗ್ರೆಸ್ ನೀಡಿದ ಸುಳ್ಳು ಭರವಸೆಗಳಿಗೆ ಮೋಸ ಹೋಗಿದ್ದರಿಂದ ಆದ ಸೋಲು. ಈಗ ಕಾಂಗ್ರೆಸ್ ಪಕ್ಷದ ಬಣ್ಣ ಬಯಲಾಗಿದೆ. ತಾನು ನೀಡಿದ ಭರವಸೆಗಳನ್ನು ಈಡೇರಿಸಲಾಗದೆ ದಿನಕ್ಕೊಂದು ಷರತ್ತುಗಳನ್ನು ವಿಧಿಸುತ್ತಿದೆ. ಜನರಿಗೆ ನೀಡಿದ ಗ್ಯಾರಂಟಿಗಳನ್ನು ಜಾರಿಗೆ ತರುವವರೆಗೂ ನಾವುಗಳು ವಿರಮಿಸುವುದಿಲ್ಲ ಎಂದರು.
ಸುಳ್ಳು ಗ್ಯಾರಂಟಿಗಳ ಮೂಲಕ ಬಡವರಿಗೆ ಮೋಸ ಮಾಡಿರುವ ಕಾಂಗ್ರೆಸ್ಗೆ ಅಧಿಕಾರದಲ್ಲಿ ಮುಂದುವರೆಯುವ ನೈತಿಕ ಹಕ್ಕಿಲ್ಲ. ಗ್ಯಾರಂಟಿಗಳಿಗೆ ಹಣ ಹೊಂದಿಸಲಾಗದೆ, ಇಡೀ ಸರ್ಕಾರದ ಕೆಲಸ ಕಾರ್ಯಗಳನ್ನು ಸ್ಥಗೀತಗೊಳಿಸಿದರೆ, ಅಭಿವೃದ್ದಿಗೆ ಒಂದು ಪೈಸೆ ಹಣ ನೀಡಿಲ್ಲ. ಕಾಂಗ್ರೆಸ್ನ್ನು ಅಧಿಕಾರದಿಂದ ಕಿತ್ತೊಗೆಯಲು ನಿಮ್ಮೆಲ್ಲರ ಸಹಕಾರ ಅಗತ್ಯವಿದೆ ಎಂದು ಮನವಿ ಮಾಡಿದರು.
ಅಧಿಕಾರ ಹೋಗಿದೆ ಎಂದು ದೃತಿಗೆಡುವ ಅಗತ್ಯವಿಲ್ಲ. ವಿಧಾನಸಭೆಯಲ್ಲಿ ಬಿಜೆಪಿ ಪಕ್ಷದ ಇಬ್ಬರೇ ಶಾಸಕರಿದ್ದಾಗಲೂ ಆಡಳಿತ ಪಕ್ಷದ ವಿರುದ್ದ ನಿರಂತರ ಹೋರಾಟ ನಡೆಸಿದ್ದೇವೆ. ರೈತರ ಪಂಪಸೆಟ್ಗಳಿಗೆ ಉಚಿತ ವಿದ್ಯುತ್, ಹೈನುಗಾರರಿಗೆ ಪ್ರೋತ್ಸಾಹ ಧನ, ಹೆಣ್ಣು ಮಕ್ಕಳಿಗೆ ಭಾಗ್ಯಲಕ್ಷ್ಮಿ ಬಾಂಡ್ ನೀಡಿದ್ದ ಸಾಧನೆಗಳಲ್ಲವೇ ಎಂದು ಪ್ರಶ್ನಿಸಿದರು.


