ಹೊಸ ಸರ್ಕಾರದ ಮೇಲೆ ಜನರ ನಿರೀಕ್ಷೆ ಹೆಚ್ಚಿದ್ದು, ಸರ್ಕಾರಿ ನೌಕರರು ಪ್ರಾಮಾಣಿಕತೆಯಿಂದ ಕರ್ತವ್ಯ ನಿರ್ವಹಿಸಿ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳನ್ನು ಸಂಪೂರ್ಣವಾಗಿ ಜಾರಿಗೊಳಿಸುವಂತೆ ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ಕದಾರೆ.
ತುಮಕೂರು ಜಿಲ್ಲೆಯ ಪಾವಗಡ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ನಡೆದ ಕುಡಿಯುವ ನೀರು ಸರಬರಾಜು, ಮುಂಗಾರು ಸಿದ್ಧತೆ ಹಾಗೂ ಇತರೆ ಪ್ರಮುಖ ವಿಚಾರಗಳ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು.
ಜನರ ಸಮಗ್ರ ಕಲ್ಯಾಣಕ್ಕಾಗಿಯೇ ಸರ್ಕಾರವು ಜನಪರ ಯೋಜನೆಗಳನ್ನು ಜಾರಿಗೊಳಿಸುತ್ತದೆ. ಸರ್ಕಾರಿ ನೌಕರರು, ಯೋಜನೆಗಳ ಫಲಾನುಭವಿಗಳಿಂದ ಯಾವುದೇ ಫಲಾಪೇಕ್ಷೆ ಬಯಸದೇ ನಿಸ್ವಾರ್ಥವಾಗಿ ಕರ್ತವ್ಯ ನಿರ್ವಹಿಸಬೇಕು. ಈ ಬಗ್ಗೆ ದೂರು ಬಂದಲ್ಲಿ ಅಂತಹ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದು ಎಂದರು.
ಪಾವಗಡ ತಾಲೂಕಿನ ಕೃಷಿ ಹಾಗೂ ತೋಟಗಾರಿಕೆ ಬೆಳೆಗಳ ಸಮಗ್ರ ಮಾಹಿತಿ ಪಡೆದ ಸಚಿವರು, ತಾಲೂಕಿನ ಎರಡು ಸಾವಿರ ರೈತರಿಗೆ ಹನಿ ನೀರಾವರಿ ಉಪಕರಣಗಳನ್ನು ವಿತರಿಸುವಂತೆ, ರೈತರಿಗೆ ಅನುಕೂಲವಾಗುವಂತೆ ಕೃಷಿ ಹೊಂಡಗಳ ನಿರ್ಮಾಣ ಮಾಡಿ, ಈಗಾಗಲೇ ನಿರ್ಮಾಣಗೊಂಡಿರುವ ಕೃಷಿ ಹೊಂಡಗಳ ಸಮರ್ಪಕ ಬಳಕೆಯಾಗುತ್ತಿರುವ ಬಗ್ಗೆ ಖಚಿತ ಪಡಿಸಿಕೊಳ್ಳುವಂತೆ ಸೂಚಿಸಿದರು.
ಪಾವಗಡ ತಾಲೂಕಿನ ಕೊಳವೆ ಬಾವಿಗಳಿಂದ ಫ್ಲೋರೈಡ್ ರಹಿತ ಶುದ್ಧ ಕುಡಿಯುವ ನೀರನ್ನು ವ್ಯತ್ಯಯವಾಗದಂತೆ ಪೂರೈಸಬೇಕು. ಜಲ ಜೀವನ್ ಅಭಿಯಾನದಡಿ ಜಿಲ್ಲೆಯಲ್ಲಿ ಅಳವಡಿಸಿರುವ ಪ್ಲಾಸ್ಟಿಕ್ ಪೈಪ್ಗಳು ಕಿತ್ತು ಬರುವಂತಿದ್ದು, ಇವುಗಳನ್ನು ಬದಲಿಸಿ ಸದೃಢ ಕಬ್ಬಿಣ ಪೈಪ್ಗಳನ್ನು ಅಳವಡಿಸಲು, ಸಮಾಜ ಕಲ್ಯಾಣ ಇಲಾಖೆಯಡಿ ತಾಲೂಕುನಲ್ಲಿ ಕಾರ್ಯನಿರ್ವಹಿಸುತ್ತಿರುವ 15 ವಸತಿ ನಿಲಯದಲ್ಲಿ 1700 ವಿದ್ಯಾರ್ಥಿಗಳಿಗೆ ಅವಕಾಶವಿದ್ದು, ಅರ್ಜಿ ಸಲ್ಲಿಸುವ ಪ್ರತಿಯೊಬ್ಬ ವಿದ್ಯಾರ್ಥಿಗಳಿಗೆ ಅವಕಾಶ ಮಾಡಿಕೊಟ್ಟು, ವಸತಿ ನಿಲಯದಲ್ಲಿ ಶುಚಿತ್ವ, ಆಹಾರ ಗುಣಮಟ್ಟ, ರಕ್ಷಣೆ ಬಗ್ಗೆ ನಿಗಾ ವಹಿಸುವಂತೆ ಇಲಾಖಾಧಿಕಾರಿಗಳಿಗೆ ಸೂಚಿಸಿದರು.


