ಕಳೆದ ವಾರ ಪಾಟ್ನಾದಲ್ಲಿ ನಡೆದ ಪ್ರತಿಪಕ್ಷಗಳ ಸಭೆಯಲ್ಲಿ ಪ್ರಧಾನಿ ಹುದ್ದೆಗೆ ಸಂಬಂಧಿಸಿದಂತೆ ಯಾವುದೇ ಚರ್ಚೆ ನಡೆದಿಲ್ಲ ಎಂದು ಎನ್.ಸಿಪಿ ಮುಖ್ಯಸ್ಥ ಶರದ್ ಪವಾರ್ ಸ್ಪಷ್ಟಪಡಿಸಿದ್ದಾರೆ.
ಮುಂಬೈನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿರುವ ಅವರು, ಬಿಜೆಪಿಯ ವಿರುದ್ಧ ಟೀಕಾ ಪ್ರಹಾರ ನಡೆಸಿದ್ದಾರೆ. ಬಿಜೆಪಿ ಟೀಕೆಯು ಬಾಲಿಶ ಹೇಳಿಕೆ ಎಂದು ತಳ್ಳಿಹಾಕಿದ್ದಾರೆ.
ಸಭೆಯಲ್ಲಿ, ಹಣದುಬ್ಬರ, ನಿರುದ್ಯೋಗ ಮತ್ತು ಕೋಮು ಉದ್ವಿಗ್ನತೆಯನ್ನು ಉತ್ತೇಜಿಸುವ ಉದ್ದೇಶಪೂರ್ವಕ ಪ್ರಯತ್ನಗಳಿಗೆ ಸಂಬಂಧಿಸಿದ ವಿಷಯಗಳ ಕುರಿತು ಚರ್ಚಿಸಲಾಯಿತು. ಧರ್ಮ ಮತ್ತು ಜಾತಿಯ ಆಧಾರದ ಮೇಲೆ ಸಮುದಾಯಗಳನ್ನು ವಿಭಜಿಸುವ ದುಷ್ಪರಿಣಾಮಗಳ ಬಗ್ಗೆ ಚರ್ಚೆ ನಡೆಯಿತು ಎಂದು ಹೇಳಿದ್ದಾರೆ.
ಪಾಟ್ನಾದಲ್ಲಿ ನಡೆದ ಸಭೆಯಲ್ಲಿ 2024 ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ವಿರುದ್ಧ ಒಂದಾಗುವ ಉದ್ದೇಶದಿಂದ ವಿವಿಧ ಪ್ರತಿಪಕ್ಷಗಳ 32 ಕ್ಕೂ ಹೆಚ್ಚು ನಾಯಕರನ್ನು ಒಟ್ಟುಗೂಡಿಸಲಾಗಿದೆ. ಅವರು ತಮ್ಮ ಭಿನ್ನಾಭಿಪ್ರಾಯಗಳನ್ನು ಬದಿಗಿಟ್ಟು ರಾಜ್ಯವಾರು ಕಾರ್ಯತಂತ್ರಗಳಿಗೆ ಒತ್ತು ನೀಡುವ ಮೂಲಕ ಸಾಮಾನ್ಯ ಅಜೆಂಡಾ ಮತ್ತು ಹೊಂದಿಕೊಳ್ಳುವ ವಿಧಾನದೊಂದಿಗೆ ಚುನಾವಣೆಗಳನ್ನು ಎದುರಿಸಲು ಪ್ರತಿಜ್ಞೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.


