ಅತಿ ಹೆಚ್ಚು ಮಾದಿಗ ಸಮುದಾಯದ ಮತದಾರರನ್ನು ಹೊಂದಿರುವ ತುಮಕೂರು ಜಿಲ್ಲೆಯ ಮಾದಿಗ ಸಮುದಾಯದಲ್ಲಿ ಕಾಂಗ್ರೆಸ್ ಪರವಾಗಿ ಹೆಚ್ಚು ಕೆಲಸ ಮಾಡಿದ ವ್ಯಕ್ತಿಗಳಿಗೆ ವಿಧಾನಪರಿಷತ್ ಸದಸ್ಯ ಸ್ಥಾನ ನೀಡಬೇಕು. ನಿಗಮ, ಮಂಡಳಿಗಳಲ್ಲಿ ಹೆಚ್ಚು ಅವಕಾಶ ಕೊಡಬೇಕು ಎಂದು ಆದಿಜಾಂಭವ ಮಹಾಮೈತ್ರಿ ಅಧ್ಯಕ್ಷ ನರಸೀಯಪ್ಪ ಒತ್ತಾಯಿಸಿದ್ದಾರೆ.
ತುಮಕೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ತುಮಕೂರು ಜಿಲ್ಲೆಯ 11 ವಿಧಾನಸಭಾ ಕ್ಷೇತ್ರಗಳಲ್ಲಿ ಮಾದಿಗರು ಸುಮಾರು 5.50ಲಕ್ಷ ಇದ್ದಾರೆ. ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ ಮಾದಿಗ ಸಮುದಾಯದ ಮತಗಳು 30 ಸಾವಿರದಿಂದ 50 ಸಾವಿರದ ವರಗೆ ಇದೆ. ಜಿಲ್ಲೆಯ ಎರಡು ಮೀಸಲು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಕ್ಷ ಇದುವರೆಗೂ ಟಿಕೇಟ್ ನೀಡದೆ ನಿರ್ಲಕ್ಷ ಮಾಡುತ್ತಲೇ ಬಂದಿದೆ. ಜಿಲ್ಲೆಯಲ್ಲಿ ಸಾಮಾಜಿಕ ನ್ಯಾಯವೆಂಬುದು ಮಾದಿಗ ಸಮುದಾಯಕ್ಕೆ ಇಲ್ಲವಾಗಿದೆ ಎಂದು ಬೇಸರ ಹೊರಹಾಕಿದರು.
ಹಾಗಾಗಿ ಈ ಬಾರಿಯಾದರೂ ವಿಧಾನಪರಿಷತ್ ಸದಸ್ಯರನ್ನಾಗಿ ನೇಮಕ ಮಾಡಬೇಕು. ಜಿಲ್ಲಾ ಪಂಚಾಯತ್ ಮತ್ತು ತಾಲೂಕು ಪಂಚಾಯತ್ ಹಾಗೂ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಮಾದಿಗ ಸಮುದಾಯಕ್ಕೆ ಹೆಚ್ಚಿನ ಅದ್ಯತೆ ನೀಡಬೇಕು ಎಂದು ಆಗ್ರಹಿಸಿದರು.
ಮಾದಿಗ ಸಮುದಾಯ ಜಿಲ್ಲೆಯ ಇಬ್ಬರು ಸಚಿವರು ಹಾಗೂ ಕಾಂಗ್ರೆಸ್ ಪಕ್ಷದ ಶಾಸಕರಿಗೆ ಸನ್ಮಾನ ಸಮಾರಂಭ ಏರ್ಪಡಿಸಿ, ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಕರೆಯಿಸಿ, ಮನವಿ ಮಾಡಲು ತೀರ್ಮಾನಿಸಲಾಗಿದ ಎಂದರು.
ಕಾಂಗ್ರೆಸ್ ಪಕ್ಷದಿಂದ ಮಾತ್ರ ಸಾಮಾಜಿಕ ನ್ಯಾಯ ಎಂದು ಅರಿತಿರುವ ಮಾದಿಗ ಸಮುದಾಯ ಬೇರೆ ಪಕ್ಷದ ಒಳಮೀಸಲಾತಿ ವರ್ಗೀಕರಣದಂತಹ ಅಮೀಷಗಳಿಗೆ ಬಲಿಯಾಗದೆ ಕಾಂಗ್ರೆಸ್ ಪಕ್ಷವನ್ನು ಸಂಪೂರ್ಣವಾಗಿ ಬೆಂಬಲಿಸಿದ ಪರಿಣಾಮ ತುಮಕೂರು ಜಿಲ್ಲೆಯ 7 ಕ್ಷೇತ್ರಗಳಲ್ಲಿ, ರಾಜ್ಯದ 135 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿ, ಸರ್ಕಾರ ರಚಿಸಲು ಸಾಧ್ಯವಾಯಿತು ಎಂದು ಹೇಳಿದ್ದಾರೆ.
1999ರಿಂದಲೂ ಇದುವರೆಗೂ ಹಲವಾರು ಆಕಾಂಕ್ಷಿಗಳು ಇದ್ದಾಗಲೂ ಕಾಂಗ್ರೆಸ್ ಪಕ್ಷದಿಂದ ಎರಡು ಮೀಸಲು ಕ್ಷೇತ್ರಗಳಲ್ಲಿ ಮಾದಿಗ ಸಮುದಾಯಕ್ಕೆ ಟಿಕೇಟ್ ನೀಡದೆ ನಿರ್ಲಕ್ಷ ಮಾಡಿವೆ. ಈ ಬಾರಿಯೂ ನಿರ್ಲಕ್ಷ ಮಾಡಿದರೆ ಮುಂಬರುವ ಚುನಾವಣೆಗಳಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಜಿಲ್ಲೆಯ ಮಾದಿಗ ಸಮುದಾಯ ತಕ್ಕ ಪಾಠ ಕಲಿಸಬೇಕಾಗುತ್ತದೆ ಎಂದು ನರಸೀಯಪ್ಪ ಎಚ್ಚರಿಕೆ ನೀಡಿದರು.
ತುಮಕೂರು ಜಿಲ್ಲಾ ಕಾಂಗ್ರೆಸ್ ಮಹಿಳಾ ಘಟಕದ ಪ್ರಧಾನ ಕಾರ್ಯದರ್ಶಿ ಡಾ.ಅರುಂಧತಿ ಮಾತನಾಡಿ, ಜಿಲ್ಲೆಯಲ್ಲಿ ಮಾದಿಗರಿಗೆ ದ್ವನಿ ಇಲ್ಲದಂತಾಗಿದೆ. ಕಾಂಗ್ರೆಸ್ ಪಕ್ಷದ ಮುಖಂಡರು ಮಾದಿಗ ಸಮುದಾಯದ ಕಡೆ ಗಮನಹರಿಸಬೇಕು. ಈ ನಿಟ್ಟಿನಲ್ಲಿ ಶೀಘ್ರವೇ ನಿಯೋಗ ಹೋಗಿ ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಹಾಗೂ ಜಿಲ್ಲೆಯ ಸಚಿವರುಗಳನ್ನು ಭೇಟಿಯಾಗಿ ಮನವಿ ಸಲ್ಲಿಸುವುದಾಗಿ ತಿಳಿಸಿದರು.
ಮಾಧ್ಯಮಗೋಷ್ಠಿಯಲ್ಲಿ ಜಿಲ್ಲಾ ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಮಕೃಷ್ಣ, ಮಾದಿಗ ದಂಡೋರ ರಾಜ್ಯಾಧ್ಯಕ್ಷ ಪಾವಗಡ ಶ್ರೀರಾಮ್, ಮುಖಂಡರಾದ ಮರಿಚನ್ನಮ್ಮ, ಪಿ.ಎನ್.ರಾಮಯ್ಯ, ಶಿವಶಂಕರ್, ರಾಮಚಂದ್ರ, ಕೆ.ರಾಮಯ್ಯ, ಡಾ.ಲಕ್ಷ್ಮಿರಂಗಯ್ಯ, ಜೆ.ಸಿ.ಬಿ.ವೆಂಕಟೇಶ್,ಚಂದ್ರಶೇಖರ್,ಗೂಳರಿವೆ ನಾಗರಾಜು ಇದ್ದರು.


