ಸರ್ಕಾರಿ ಕನ್ನಡ ಶಾಲೆಗಳು ಉಳಿಯಬೇಕಾದರೆ, ಶಿಕ್ಷಕರು,ಎ ಸ್.ಡಿ.ಎಂ.ಸಿ ಹಾಗೂ ಮಕ್ಕಳ ಪೋಷಕರು ಪರಸ್ವರ ಒಗ್ಗೂಡಿ ಗುಣಮಟ್ಟದ ಶಿಕ್ಷಣಕ್ಕೆ ಒತ್ತು ನೀಡಿದಾಗ ಮಾತ್ರ ಸಾಧ್ಯ ಎಂದು ತುಮಕೂರು ನಗರ ಶಾಸಕ ಜಿ.ಬಿ.ಜೋತಿಗಣೇಶ್ ತಿಳಿಸಿದ್ದಾರೆ.
ತುಮಕೂರಿನ ಶಿರಾಗೇಟ್ನ ಉತ್ತರ ಬಡಾವಣೆಯ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಪಾಠಶಾಲೆಯಲ್ಲಿ ಕೆ.ಎನ್.ಆರ್. ಮತ್ತು ಆರ್.ಆರ್.ಅಭಿಮಾನಿ ಬಳಗ, ಹಳೆ ವಿದ್ಯಾರ್ಥಿಗಳ ಸಂಘ,ಎಸ್.ಡಿ.ಎಂ.ಸಿ ಆಡಳಿತ ಮಂಡಳಿ ಹಾಗೂ ಪೋಷಕರು ಆಯೋಜಿಸಿದ್ದ ಉಚಿತ ಲೇಖನ ಸಾಮಗ್ರಿ ವಿತರಣಾ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.
ಶಿಕ್ಷಣ ಎಂಬುದು ಎಲ್ಲಾ ಸಮಸ್ಯೆಗಳಿಂದ ಮನುಷ್ಯ ಹೊರಬರಲು ಸಹಾಯ ಮಾಡುತ್ತದೆ. ಹಾಗಾಗಿ ಸಭೆ, ಸಮಾರಂಭಗಳಲ್ಲಿ ಗಣ್ಯರಿಗೆ ಹಾರ, ತುರಾಯಿ ಬದಲು ಶಾಲಾ ಮಕ್ಕಳಿಗೆ ಈ ರೀತಿಯ ನೋಟ್ ಪುಸ್ತಕ ವಿತರಿಸಿದರೆ ಬಡ ಮಕ್ಕಳ ಓದಿಗೆ ಅನುಕೂಲ ಮಾಡಿದಂತಹ ತೃಪ್ತಿ ದೊರೆಯುತ್ತದೆ ಎಂದರು.
ಶಿರಾಗೇಟ್ ಉತ್ತರ ಬಡಾವಣೆ ಶಾಲೆಯ ಹಳೆ ವಿದ್ಯಾರ್ಥಿಗಳ ಸಂಘದ ಅಧ್ಯಕ್ಷ ಟಿ.ಜಿ.ಪ್ರಸನ್ನಕುಮಾರ್ ಮಾತನಾಡಿ,ಸರ್ಕಾರಿ ಶಾಲೆಗೆ ಬರುವ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡುವುದು ನಮ್ಮೆಲ್ಲರ ಗುರಿಯಾಗಿದೆ. ಹಾಗಾಗಿಯೇ ಹಳೆಯ ವಿದ್ಯಾರ್ಥಿಗಳ ಸಂಘ, ಎಸ್.ಡಿ.ಎಂ.ಸಿ ಆಡಳಿತ ಮಂಡಳಿ ಹಾಗೂ ಪೋಷಕರು ಸೇರಿ, ದಾನಿಗಳ ನೆರವಿನಿಂದ ಶಾಲೆಗೆ ಅಗತ್ಯವಿರುವ ಎಲ್ಲಾ ಮೂಲಭೂತ ಸೌಕರ್ಯ ವ್ಯವಸ್ಥೆ ಮಾಡಿದ್ದೇವೆ ಎಂದು ಹೇಳಿದರು.
ನಗರಪಾಲಿಕೆಯ ಎರಡನೇ ವಾರ್ಡಿನ ಸದಸ್ಯ ಎಸ್.ಮಂಜುನಾಥ ಮಾತನಾಡಿ, ಕನ್ನಡ ಮಾಧ್ಯಮ ಶಾಲೆಗಳು ಇಂದು ಅಧೋಗತಿ ತಲುಪಿವೆ. ಆದರೂ ನಮ್ಮ ಉತ್ತರ ಬಡಾವಣೆಯ ಶಾಲೆ ದಿನದಿಂದ ದಿನಕ್ಕೆ ಅಭಿವೃದ್ದಿ ಪಥದಲ್ಲಿ ಸಾಗಿದೆ ಎಂದು ವಿಷಾದ ವ್ಯಕ್ತಪಡಿಸಿದರು.
ಇದೇ ವೇಳೆ ಮಕ್ಕಳಿಗೆ ನೋಟ್ಸ್ ಪುಸ್ತಕ ವಿತರಿಸಲಾಯಿತು. ವೇದಿಕೆಯಲ್ಲಿ ಶಾಲೆಯ ಪದವಿಧರ ಮುಖ್ಯಶಿಕ್ಷಕ ಎಸ್.ಡಿ.ಶಿವಸ್ವಾಮಿ, ಎಸ್.ಡಿ.ಎಂ.ಸಿ ಸದಸ್ಯರಾದ ಜಬೀನಾ, ನೀಲಮ್ಮ, ವಿಜಯಕುಮಾರಿ, ಅರುಣಕುಮಾರಿ, ಮಂಜುಳ, ಭಾಗ್ಯಮ್ಮ, ಹನುಮರಂಗಯ್ಯ, ಬಸವನಗೌಡ, ಪುಷ್ಪ, ಭರತಕುಮಾರ್ ಇದ್ದರು.


