ಕಲಬುರಗಿ ಮಹಾನಗರಕ್ಕೆ 24 ಗಂಟೆ ನಿರಂತರ ಕುಡಿಯುವ ನೀರು ಒದಗಿಸುವ ಮಹತ್ವದ ಯೋಜನೆ ಅಧಿಕಾರಿಗಳ ನಿರ್ಲ್ಯಕ್ಷ್ಯದಿಂದ ಕುಂಟುತ್ತಾ ಸಾಗುತ್ತಿದೆ. ಜನಸಾಮಾನ್ಯರ ತೆರಿಗೆ ದುಡ್ಡು ಪೋಲಾಗುವುದನ್ನು ಸಹಿಸಲಾಗುವುದಿಲ್ಲ ಎಂದು ಸಚಿವ ಪ್ರಿಯಾಂಕ್ ಖರ್ಗೆ ಎಚ್ಚರಿಕೆ ನೀಡಿದ್ದಾರೆ.
ಕಲಬುರಗಿ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ನಗರದಲ್ಲಿ ಕುಡಿಯುವ ನೀರಿನ ಸಮಸ್ಯೆ ಪರಿಹಾರಕ್ಕೆ ತ್ವರಿತ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.
ಸದ್ಯ ಇರುವ ಕಾರ್ಮಿಕರ ಸಂಖ್ಯೆಯನು ದುಪ್ಪಟ್ಟುಗೊಳಿಸಿ ತ್ವರಿತ ಗತಿಯಲ್ಲಿ ಮಿಷನ್ ಮೋಡ್ನಲ್ಲಿ ಕಾಮಗಾರಿ ಪೂರ್ಣಗೊಳಿಸಬೇಕು. ಕಾಮಗಾರಿ ವೇಗ ಪಡೆದುಕೊಳ್ಳದಿದ್ದಲ್ಲಿ ಎಲ್ & ಟಿ ಕಂಪನಿಂದ ಗುತ್ತಿಗೆ ಹಿಂಪಡೆಯುವ ಕುರಿತು ಆಲೋಚಿಸಬೇಕಾಗುತ್ತದೆ ಎಂದು ಅಧಿಕಾರಿಗಳಿಗೆ ಎಚ್ಚರಿಸಿದರು.
ಉತ್ತಮ ಗುಣಮಟ್ಟ ಹೊಂದಿಲ್ಲದ ಡಿಪಿ ಪೈಪ್ಗಳನ್ನು ಅಳವಡಿಸಲಾಗಿರುವ ಕುರಿತು ಅಧಿಕಾರಿಗಳನ್ನು ಪ್ರಶ್ನಿಸಿದ ವೇಳೆ ಸಮರ್ಪಕ ಉತ್ತರ ನೀಡಿಲ್ಲ. ಸರಿಯಾದ ದಾಖಲೆಗಳನ್ನು ಒದಗಿಸಲೂ ವಿಫಲರಾಗಿದ್ದಾರೆ ಎಂದರು.
ಪೈಪ್ಲೈನ್ಗಾಗಿ ಅಗೆದ ನೆಲವನ್ನು ಮುಚ್ಚಿ ಮರಳಿ ಡಾಂಬರೀಕರಣ ಮಾಡಿಲ್ಲ. ಇದರಿಂದ ಜನಸಾಮಾನ್ಯರಿಗೆ ತೊಂದರೆಯಾಗುತ್ತಿದೆ. ಕಾಮಗಾರಿ ಕುರಿತು ಪ್ರತಿವಾರ ಖುದ್ದಾಗಿ ಪರಿಶೀಲಿಸಿ ವರದಿ ನೀಡಲು ಮತ್ತು ಕರ್ತವ್ಯದಲ್ಲಿ ನಿರ್ಲ್ಯಕ್ಷ ವಹಿಸುವ ಅಧಿಕಾರಿಗಳ ವಿರುದ್ದ ಸೂಕ್ತ ಕ್ರಮ ಕೈಗೊಳ್ಳಲು ಮಹಾನಗರ ಪಾಲಿಕೆ ಆಯುಕ್ತ ಭುವನೇಶ ಪಟೇಲ್ ದೇವಿದಾಸ್ ಅವರಿಗೆ ಸೂಚನೆ ನೀಡಿದ್ದಾರೆ.
ಕಲಬುರಗಿ ಉತ್ತರ ಹಾಗೂ ದಕ್ಷಿಣ ವಿಧಾನಸಭೆ ವ್ಯಾಪ್ತಿಯ ವಾರ್ಡ್ ಗಳಲ್ಲಿ ಕುಡಿಯಲು ಯೋಗ್ಯವಲ್ಲದ ರಾಡಿ ಮಿಶ್ರಿತ ಹಾಗೂ ಹುಳುಗಳು ಇರುವ ನೀರು ಸರಬರಾಜು ಮಾಡಲಾಗುತ್ತಿರುವ ಕುರಿತು ಶಾಸಕರಾದ ಅಲ್ಲಮಪ್ರಭು ಪಾಟೀಲ ಹಾಗೂ ಕನೀಜ್ ಫಾತೀಮಾ ಸಭೆಯಲ್ಲಿ ಪ್ರಸ್ತಾಪಿಸಿದ್ದರು. ಅಗತ್ಯವಿರುವಷ್ಟು ಸಿಬ್ಬಂದಿಯನ್ನು ಕೂಡಲೇ ನೇಮಿಸಿಕೊಂಡು ಒಡೆದು ಸೋರುತ್ತಿರುವ ಪೈಪ್ ಲೈನ್ಗಳನ್ನು ತ್ವರಿತಗತಿಯಲ್ಲಿ ಬದಲಾಯಿಸಿ ಸಾರ್ವಜನಿಕರ ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಿ ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.
ಕಲಬುರಗಿಯ ಅಭಿವೃದ್ಧಿಗೆ ನಮ್ಮ ಸರ್ಕಾರ ವಿಶೇಷ ಕಾಳಜಿ ವಹಿಸಿದೆ. ಆದರೆ ಕೆಲ ಅಧಿಕಾರಿಗಳು ನಿರೀಕ್ಷಿತ ಮಟ್ಟದಲ್ಲಿ ಸ್ಪಂದಿಸುತ್ತಿಲ್ಲ. ಹೀಗಾಗಿ ಜನರ ನಿರೀಕ್ಷೆಗಳನ್ನು ತಲುಪಲು ವಿಳಂಬವಾಗುತ್ತಿದೆ. ಈ ಸ್ಥಿತಿಯು ಬದಲಾಗಬೇಕು ಎಂಬ ಉದ್ದೇಶದಿಂದಲೇ ಹಿರಿಯ-ಕಿರಿಯ ಅಧಿಕಾರಿಗಳ ಜೊತೆ ನಿರಂತರ ಸಂಪರ್ಕದಲ್ಲಿದ್ದು ಜಿಲ್ಲೆಯನ್ನು ಮಾದರಿಯಾಗಿ ಅಭಿವೃದ್ಧಿ ಮಾಡಲು ನನ್ನ ಪ್ರಯತ್ನ ನಿರಂತರವಾಗಿ ಸಾಗಲಿದೆ ಎಂದರು.


