ದುಡ್ಡಿನ ವ್ಯವಹಾರದ ಕಾರಣಕ್ಕಾಗಿ ನಡೆದಿದೆ ಎನ್ನಲಾದ ಜೈನಮುನಿ ಕಾಮಕುಮಾರ ನಂದಿ ಮಹರಾಜರ ಹತ್ಯೆಯ ಆರೋಪಿಗಳನ್ನು ಕೊಲೆ ನಡೆದ 6 ಗಂಟೆಗಳ ಒಳಗೆ ಬಂಧಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಅದೇ ರೀತಿ ವೈಯಕ್ತಿಕ ದ್ವೇಷದ ಕಾರಣಕ್ಕಾಗಿ ಟಿ.ನರಸೀಪುರದ ವೇಣುಗೋಪಾಲ್ ಅವರನ್ನು ಹತ್ಯೆಗೈದ ಆರೋಪಿಗಳನ್ನು ಕೊಲೆ ನಡೆದ 24 ಗಂಟೆಯೊಳಗೆ ಬಂಧಿಸಲಾಗಿದೆ ಎಂದು ತಿಳಿಸಿದ್ದಾರೆ.
ಬೆಂಗಳೂರಿನ ಏರೋನಿಕ್ಸ್ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಹಾಗೂ ಸಿಇಒ ಹತ್ಯೆಯ ಆರೋಪಿಗಳನ್ನು ಕೊಲೆ ನಡೆದ 24 ಗಂಟೆಯೊಳಗೆ ಬಂಧಿಸಲಾಗಿದೆ ಎಂದು ಸ್ಪಷ್ಟಪಡಿಸಿದ್ದಾರೆ.
ಪ್ರಕರಣವನ್ನು ಕುಲಂಕಷವಾಗಿ ತನಿಖೆ ನಡೆಸಿ ಅಪರಾಧಿಗಳಿಗೆ ಗರಿಷ್ಠ ಶಿಕ್ಷೆಯಾಗುವಂತೆ ಕ್ರಮವಹಿಸಲು ರಾಜ್ಯದ ಪೊಲೀಸ್ ಇಲಾಖೆ ಸಮರ್ಥವಾಗಿದೆ. ಈ ಬಗ್ಗೆ ಯಾವ ಸಂದೇಹವೂ ಬೇಡ ಎಂದು ಟ್ವೀಟ್ಟರ್ ನಲ್ಲಿ ಹೇಳಿದ್ದಾರೆ.
ಹತ್ಯೆ, ಅಪಹರಣ ಮುಂತಾದ ಅಪರಾಧ ಕೃತ್ಯಗಳು ದುರದೃಷ್ಟಕರ. ಆದರೆ ಒಂದು ಸರ್ಕಾರವಾಗಿ ಇಂಥ ಕಾನೂನು ವಿರೋಧಿ ಕೃತ್ಯಗಳು ನಡೆಯದಂತೆ ತಡೆಯಲು ನಾವು ಪ್ರಾಮಾಣಿಕವಾಗಿ ಶ್ರಮಿಸುತ್ತಿದ್ದೇವೆ ಎಂದು ತಿಳಿಸಿದ್ದಾರೆ.
ಸಮಾಜದಲ್ಲಿ ಶಾಂತಿ ಸುವ್ಯವಸ್ಥೆ ನೆಲೆಗೊಳಿಸುವುದು ನಮ್ಮ ಮೊದಲ ಆದ್ಯತೆಯಾಗಿದೆ. ಇದಕ್ಕಾಗಿ ಕಾನೂನಿನ ಕೈಗಳಿಗೆ ಇನ್ನಷ್ಟ ಬಲ ನೀಡಲಾಗುವುದು ಎಂದು ಹೇಳಿದ್ದಾರೆ.


