Monday, March 16, 2026
Google search engine
Homeಜಿಲ್ಲೆಕೊಬ್ಬರಿಗೆ ಬೆಂಬಲ ಬೆಲೆ - ಮಾತಿಗೆ ತಪ್ಪಿದ ಡಿ.ಕೆ.ಶಿವಕುಮಾರ್ - ಜೆಡಿಎಸ್ ಮುಖಂಡ ಶಾಂತಕುಮಾರ್ ಆರೋಪ

ಕೊಬ್ಬರಿಗೆ ಬೆಂಬಲ ಬೆಲೆ – ಮಾತಿಗೆ ತಪ್ಪಿದ ಡಿ.ಕೆ.ಶಿವಕುಮಾರ್ – ಜೆಡಿಎಸ್ ಮುಖಂಡ ಶಾಂತಕುಮಾರ್ ಆರೋಪ

ಕೊಬ್ಬರಿ ಬೆಳೆಗಾರರು ಪ್ರತಿಭಟನೆ ನಡೆಸುವ ಸಂದರ್ಭದಲ್ಲಿ ಭೇಟಿ ನೀಡಿ, ನಮ್ಮ ಪಕ್ಷ ಅಧಿಕಾರಕ್ಕೆ ಬಂದರೆ ಕ್ವಿಂಟಾಲ್ ಕೊಬ್ಬರಿಗೆ 15000 ರೂ ನೀಡುವ ಭರವಸೆ ನೀಡಿದ್ದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಕೇವಲ 1250 ರೂ ಪ್ರೋತ್ಸಾಹ ಧನ ಘೋಷಿಸುವ ಮೂಲಕ, ನುಡಿದಂತೆ ನಡೆಯುವಲ್ಲಿ ಕಾಂಗ್ರೆಸ್ ಪಕ್ಷ ವಿಫಲವಾಗಿದೆ ಎಂದು ಜೆಡಿಎಸ್ ಮುಖಂಡ ಕೆ.ಟಿ.ಶಾಂತಕುಮಾರ್ ಆರೋಪಿಸಿದ್ದಾರೆ.

ತುಮಕೂರಿನ ಜೆಡಿಎಸ್ ಕಚೇರಿಯಲ್ಲಿ ನಡೆದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಡಿ.ಕೆ.ಶಿವಕುಮಾರ್ ನೀಡಿದ ಭರವಸೆಯನ್ನು ನಂಬಿ ರಾಜ್ಯದ ಮಧ್ಯ ಕರ್ನಾಟಕ, ಹಳೆ ಮೈಸೂರು ಭಾಗದ ಸುಮಾರು 35 ವಿಧಾನಸಭಾ ಕ್ಷೇತ್ರಗಳ ಜನರು ಕಾಂಗ್ರೆಸ್ ಗೆ ಮತ ನೀಡಿ, ಅಧಿಕಾರಕ್ಕೆ ತಂದಿದ್ದಾರೆ. ಹಾಗಾಗಿ ಕೊಬ್ಬರಿ ಬೆಳೆಗಾರರಿಗೆ ನೀಡಿದ ಭರವಸೆ ಈಡೇರಿಸುವುದು ಸರ್ಕಾರದ ಕರ್ತವ್ಯವಾಗಿದೆ ಎಂದರು.

ತುಮಕೂರು ಮತ್ತು ಸುತ್ತಮುತ್ತಲ ಜಿಲ್ಲೆಗಳಲ್ಲಿ ಕೊಬ್ಬರಿ ದರ ಕುಸಿತ ಒಂದು ಜ್ವಲಂತ ಸಮಸ್ಯೆಯಾಗಿದೆ. 2019-20ರಲ್ಲಿ ಕ್ವಿಂಟಾಲ್ ಕೊಬ್ಬರಿಗೆ 18500 ರಿಂದ 19000 ರೂ ಇತ್ತು. ನಂತರ ಕುಸಿತ ಕಾಣುತ್ತಾ ಬಂದಿದೆ. ಇದರ ವಿರುದ್ದ ರೈತರು ನಿರಂತರ ಹೋರಾಟ ಮಾಡಿದ್ದರ ಫಲವಾಗಿ ನ್ಯಾಫೇಡ್ ಮೂಲಕ ಬೆಂಬಲ ಬೆಲೆಯಲ್ಲಿ ಖರೀದಿಸುವ ಕೊಬ್ಬರಿಗೆ ಕ್ವಿಂಟಾಲ್ ಒಂದಕ್ಕೆ 11,750 ರೂ ನಿಗಧಿ ಪಡಿಸಲಾಗಿತ್ತು. ಆದರೆ ಇಂದು ಕೊಬ್ಬರಿ ಬೆಲೆ ಕ್ವಿಂಟಾಲ್ಗೆ 7600 ರಿಂದ 8000 ರೂಗಳಿಗೆ ಇಳಿದಿದೆ ಎಂದು ಆರೋಪಿಸಿದರು.

ನ್ಯಾಫೇಡ್ ಮೂಲಕ ಕೊಬ್ಬರಿ ಖರೀದಿಸುತ್ತಿದ್ದರೂ ಗುಣಮಟ್ಟದ ಹೆಸರಿನಲ್ಲಿ ಒಳ್ಳೆಯ ಕೊಬ್ಬರಿಯನ್ನು ಕೊಳ್ಳದೆ ವಾಪಸ್ ಕಳುಹಿಸಲಾಗುತ್ತಿದೆ. ಒಂದು ಕೊಬ್ಬರಿ 75ಎಂ.ಎಂ ಸುತ್ತಳತೆಗಿಂತ ಕಡಿಮೆ ಇರಬಾರದು, ತೇವಾಂಶ ಶೇ7ರಷ್ಟು ಇರಬೇಕು. ಹೀಗೆ ಹತ್ತು ಹಲವು ಷರತ್ತುಗಳನ್ನು ವಿಧಿಸುವ ಮೂಲಕ ಕೊಬ್ಬರಿ ಮಾರಾಟಕ್ಕೆ ತೊಡಕು ಉಂಟು ಮಾಡಿದೆ ಎಂದು ಆಪಾದಿಸಿದರು.

ಕೊಬ್ಬರಿ ಬೆಲೆ ಕುಸಿತದ ಬಗ್ಗೆ ಸದನದಲ್ಲಿ ತುಮಕೂರು ಜಿಲ್ಲೆಯ ಶಾಸಕರು ಸೇರಿದಂತೆ, ಜೆಡಿಎಸ್ ಮುಖಂಡರಾದ ಎಚ್.ಡಿ.ಕುಮಾರ ಸ್ವಾಮಿ, ಎಚ್.ಡಿ.ರೇವಣ್ಣ ಚರ್ಚೆ ನಡೆಸಿದ್ದರ ಫಲವಾಗಿ ಸರ್ಕಾರ ಇದುವರೆಗೂ ನ್ಯಾಫೇಡ್ ನಿಂದ ಖರೀದಿಸಿರುವ ಕೊಬ್ಬರಿಯನ್ನು ಹೊರತು ಪಡಿಸಿ, ಮುಂದೆ ಖರೀದಿಸಿರುವ ಕೊಬ್ಬರಿ ಕ್ವಿಂಟಾಲ್ ಒಂದಕ್ಕೆ 1250 ರೂ ಪ್ರೋತ್ಸಾಹ ಧನ ಘೋಷಣೆ ಮಾಡಿದೆ.

ನ್ಯಾಫೇಡ್ 11750 ಮತ್ತು ರಾಜ್ಯ ಸರಕಾರದ 1250 ಸೇರಿದಂತೆ ಕ್ವಿಂಟಾಲ್ ಕೊಬ್ಬರಿ ಬೆಲೆ 13000 ಆಗಲಿದೆ. ಡಿ.ಸಿ.ಎಂ ಘೋಷಣೆ ಮಾಡಿದ್ದು ಕ್ವಿಂಟಾಲ್ ಕೊಬ್ಬರಿಗೆ 15000 ರೂ, ಹಾಗಾಗಿ ಉಳಿದ 2000 ರೂ ಪ್ರೋತ್ಸಾಹ ಧನವನ್ನು ಕೂಡಲೇ ಘೋಷಣೆ ಮಾಡಬೇಕು. ಈ ವರ್ಷ ಖರೀದಿ ಮಾಡಿರುವ ಎಲ್ಲಾ ಕೊಬ್ಬರಿಗೂ ಈ ಪ್ರೋತ್ಸಾಹಧನ ನೀಡಬೇಕು ಎಂದು ಆಗ್ರಹಿಸಿದರು.

ಪ್ರಕಾಶ ಕಮ್ಮರಡಿ ನೇತೃತ್ವದ ಕೃಷಿ ಉತ್ಪನ್ನಗಳ ಬೆಲೆ ನಿಗಧಿ ಆಯೋಗ ಮಾಡಿರುವ ಶಿಫಾರಸ್ಸಿನ ಪ್ರಕಾರ ಒಂದು ಕ್ವಿಂಟಾಲ್ ಕೊಬ್ಬರಿ ಬೆಳೆಯಲು ಸುಮಾರು 16000 ರೂ ವೆಚ್ಚವಾಗುತ್ತದೆ. ನ್ಯಾಫೇಡ್ ಮತ್ತು ರಾಜ್ಯ ಸರ್ಕಾರದ ಪ್ರೋತ್ಸಾಹ ಧನ ಸೇರಿ 13000 ರೂಗಳಿಗೆ ಕೊಬ್ಬರಿ ಖರೀದಿಯಾದರೆ, ರೈತನಿಗೆ ಒಂದು ಕ್ವಿಂಟಾಲ್ 3000 ರೂ ನಷ್ಟು ಉಂಟಾಗುತ್ತದೆ. ಹಾಗಾಗಿ ಕೇಂದ್ರ ಸರ್ಕಾರ ಕೊಬ್ಬರಿಯ ವೈಜ್ಞಾನಿಕ ಬೆಂಬಲ ಬೆಲೆಯನ್ನು ಘೋಷಿಸಬೇಕು ಎಂದು ಒತ್ತಾಯಿಸಿದ್ದಾರೆ.

ಜೆಡಿಎಸ್ ಪಕ್ಷದ ಜಿಲ್ಲಾಧ್ಯಕ್ಷ ಆರ್.ಸಿ.ಅಂಜನಪ್ಪ ಮಾತನಾಡಿ, ಕೊಬ್ಬರಿ ದರ ಕುಸಿತದ ವಿಚಾರವಾಗಿ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಕೊಟ್ಟ ಮಾತಿನಂತೆ ನಡೆದುಕೊಳ್ಳಬೇಕು ಎಂದು ಹೇಳಿದ್ದಾರೆ.

ಮಾಧ್ಯಮಗೋಷ್ಠಿಯಲ್ಲಿ ಜೆಡಿಎಸ್ ಜಿಲ್ಲಾ ಕಾರ್ಯಾಧ್ಯಕ್ಷ ಟಿ.ಆರ್.ನಾಗರಾಜು, ಸೋಲಾರ್ ಕೃಷ್ಣಮೂರ್ತಿ, ಡಾಂಡೇಲಿ ಗಂಗಣ್ಣ, ಚಲುವರಾಜು, ತಾಹೀರಾ ಭಾನು, ಲೀಲಾವತಿ ಇದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular