ತುಮಕೂರು ಜಿಲ್ಲೆಯ ಪಾವಗಡ ಪಟ್ಟಣದಲ್ಲಿ ನಿಷೇಧಿತ ಕೀಟನಾಶಕ ಮಾರಾಟ ಮಾಡುತ್ತಿದ್ದ ಅಂಗಡಿಯೊಂದರ ಮೇಲೆ ಕೃಷಿ ಇಲಾಖೆ ಜಾರಿ ದಳದ ಸಹಾಯಕ ನಿರ್ದೇಶಕ ಪುಟ್ಟರಂಗಪ್ಪ ನೇತೃತ್ವದಲ್ಲಿ ಅಧಿಕಾರಿಗಳು ದಾಳಿ ನಡೆಸಿ ಸುಮಾರು 13 ಸಾವಿರ ಮೌಲ್ಯದ ನಿಷೇಧಿತ ಕೀಟ ನಾಶಕಗಳನ್ನು ವಶಪಡಿಸಿಕೊಂಡಿದ್ದಾರೆ.
ಪಾವಗಡ ತಾಲ್ಲೂಕಿನ ವೈ.ಎನ್. ಹೊಸಕೋಟೆಯ ಎಂ.ಜಿ. ರಸ್ತೆಯಲ್ಲಿರುವ ಭಾಗ್ಯಲಕ್ಷ್ಮಿ ಏಜೆನ್ಸೀಸ್ ಕೀಟನಾಶಕ ಮಾರಾಟ ಮಳಿಗೆಯಲ್ಲಿ ನಿಷೇಧಿತ ಕೀಟನಾಶಕ ಮಾರಾಟ ಮಾಡಲಾಗುತ್ತಿದೆ ಎಂಬ ಬಗ್ಗೆ ಬಂದ ದೂರಿನ ಮೇರೆಗೆ ಕೃಷಿ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲಿಸಿದಾಗ ನಿಷೇಧಿತ ಕೀಟನಾಶಕವನ್ನು ಅನಧಿಕೃತವಾಗಿ ಖರೀದಿಸಿ ಮಾರಾಟ ಮಾಡುತ್ತಿರುವುದು ಬೆಳಕಿಗೆ ಬಂದಿದೆ.
ಈ ಅಂಗಡಿ ಮಾಲೀಕರು ಸುಮಾರು 84 ಸಾವಿರ ರೂ. ಮೌಲ್ಯದ 110 ಲೀಟರ್ ನಿಷೇಧಿತ ಕೀಟನಾಶಕವನ್ನು ಖರೀದಿಸಿ ಮಾರಾಟ ಮಾಡಿದ್ದಾರೆ. ಅಲ್ಲದೆ ಈ ಮಳಿಗೆಯಲ್ಲಿ ವ್ಯವಸ್ಥಿತ ರೀತಿಯಲ್ಲಿ ದಾಖಲೆಗಳಾಗಲೀ, ಕೃಷಿ ಪರಿಕರ ನಿರ್ವಹಣೆಯಾಗಲೀ, ದಾಸ್ತಾನು ದರಪಟ್ಟಿ ಪ್ರದರ್ಶನವನ್ನಾಗಲಿ ಮಾಡಿಲ್ಲ ಎಂದು ತಿಳಿದು ಬಂದಿದೆ.
ಅಂಗಡಿ ಮಾಲೀಕರಿಗೆ ಕಾರಣ ಕೇಳಿ ನೋಟಿಸ್ ಜಾರಿ ಮಾಡಲಾಗಿದೆ ಎಂದು ಕೃಷಿ ಇಲಾಖೆ ಜಾರಿ ದಳದ ಸಹಾಯಕ ನಿರ್ದೇಶಕ ಹಾಗೂ ಕೀಟನಾಶಕ ಪರಿವೀಕ್ಷಕ ಪುಟ್ಟರಂಗಪ್ಪ ತಿಳಿಸಿದ್ದಾರೆ.