ಜಮೀನು ಕಳೆದುಕೊಂಡವರ ಸಮಸ್ಯೆ ನಮಗೆ ಅರ್ಥವಾಗುತ್ತದೆ. ರೈತರಿಗೆ ಸಂಬಳ, ಬಡ್ತಿ, ಪಿಂಚಣಿ, ನಿವೃತ್ತಿ, ಲಂಚ ಯಾವುದೂ ಇಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ಬೆಂಗಳೂರಿನ ಸೆಂಟ್ರಲ್ ಕಾಲೇಜಿನ ಜ್ಞಾನಜ್ಯೋತಿ ಸಭಾಂಗಣದಲ್ಲಿ ನಡೆದ ಬಿ.ಡಿ.ಎ ಪೆರಿಫೆರಲ್ ರಿಂಗ್ ರಸ್ತೆಯ ಯೋಜನೆಯಲ್ಲಿ ಭೂಸ್ವಾಧೀನಕ್ಕೆ ಒಳಗಾಗಿರುವ ರೈತರು ಮತ್ತು ಭೂಮಾಲೀಕರ ಕುಂದು ಕೊರತೆಗಳ ಬಗ್ಗೆ ಆಯೋಜಿಸಿದ ಸಭೆಯನ್ನು ಉದ್ದೇಶಿಸಿ ಅವರು ಮಾತನಾಡಿದರು.
ರೈತನ ರಕ್ಷಣೆ ನಮ್ಮ ಜವಾಬ್ದಾರಿ. ಜಮೀನು ಕಳೆದುಕೊಂಡ ರೈತರಿಗೆ ಸಹಾಯ ಮಾಡಲು ನಾವು ಸಿದ್ಧರಿದ್ದೇವೆ. ನಿಮ್ಮ ಸಲಹೆ – ಸೂಚನೆಗಳನ್ನು ಆಧರಿಸಿ ಸರ್ಕಾರದ ಮಟ್ಟದಲ್ಲಿ ಚರ್ಚಿಸಲಾಗುವುದು ಎಂದು ತಿಳಿಸಿದ್ದಾರೆ.
ಭೂಮಿಯನ್ನು ಕಳೆದುಕೊಂಡ ರೈತರಿಗೆ ಮತ್ತು ಸರ್ಕಾರಕ್ಕೆ ಅನುಕೂಲ ಆಗುವಂತೆ ಕಾನೂನು ತಜ್ಞರ ಸಲಹೆಯನ್ನು ಪಡೆಯಲಾಗುವುದು. ಭೂಮಿ ಕಳೆದುಕೊಂಡ ರೈತರಿಗೆ ಸರ್ಕಾರ ಸ್ಪಂದಿಸಲಿದೆ ಎಂದು ಭರವಸೆ ನೀಡಿದ್ದಾರೆ.