ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತ ಮಾಡಿರುವ ತಂತ್ರಜ್ಞಾನದ ಪ್ರಗತಿಗೆ ಸಾಟಿ ಇಲ್ಲ. ಇದು ನಮ್ಮ ಜಾಣ್ಮೆ ಮತ್ತು ಮಿತವ್ಯಯ ಚಾತುರ್ಯವನ್ನು ತೋರಿಸುತ್ತದೆ ಎಂದು ನವದೆಹಲಿಯ ಜವಾಹರಲಾಲ್ ನೆಹರು ವಿಶ್ವವಿದ್ಯಾನಿಲಯದ ಕುಲಪತಿ ಸಾಂತಿಶ್ರೀ ಧೂಳಿಪುಡಿ ಪಂಡಿತ್ ತಿಳಿಸಿದ್ದಾರೆ.
ತುಮಕೂರು ವಿಶ್ವವಿದ್ಯಾನಿಲಯದಲ್ಲಿ ಹಮ್ಮಿಕೊಂಡಿದ್ದ 176ನೇ ಘಟಿಕೋತ್ಸವದಲ್ಲಿ ಮಾತನಾಡಿದ ಅವರು, ನೂರು ಮಿಲಿಯನ್ ಡಾಲರ್ಗಳಿಗೂ ಕಡಿಮೆ ವೆಚ್ಚದಲ್ಲಿ ಯಶಸ್ವಿಯಾಗಿ ಕೈಗೊಂಡ ಮೊದಲ ಮಂಗಳಯಾನ ಮತ್ತು ಇತ್ತೀಚಿನ ಚಂದ್ರಯಾನ-3ರ ಉಡಾವಣೆಗಳೆಲ್ಲವೂ ನಮ್ಮ ದೇಶದ ವಿಜ್ಞಾನಿಗಳ ಸಾಮರ್ಥ್ಯವನ್ನು ತೋರಿಸುತ್ತವೆ ಎಂದು ಶ್ಲಾಘಿಸಿದರು.
ಜೆಎನ್ ಯುನಲ್ಲಿ ಕನ್ನಡ ಪೀಠ ಸ್ಥಾಪಿಸಿದ್ದು, ಕರ್ನಾಟಕದ ಹಾಗೂ ಕನ್ನಡ ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ಪೀಠವನ್ನು ಅಭಿವೃದ್ಧಿ ಪಡಿಸಲು ಕರ್ನಾಟಕ ಸರ್ಕಾರ ಅನುದಾನ ನೀಡಬೇಕು ಎಂದು ಮನವಿ ಮಾಡಿದರು.
ಇದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿದ ಕುಲಾಧಿಪತಿಗಳೂ ಆದ ರಾಜ್ಯಪಾಲರು, ಕನ್ನಡದ ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ಕನ್ನಡ ಪೀಠವನ್ನು ಅಭಿವೃದ್ಧಿಪಡಿಸಲು ಸಹಕಾರ ನೀಡಲಾಗುವುದು. ಈ ಸಂಬಂಧ ಉನ್ನತ ಶಿಕ್ಷಣ ಸಚಿವರು, ಸರ್ಕಾರ ಕ್ರಮವಹಿಸಲಿದೆ ಎಂದರು.
ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ.ಸುಧಾಕರ್ ಮಾತನಾಡಿ, ಈ ಬಾರಿಯ ಘಟಿಕೋತ್ಸವದಲ್ಲಿ ವಿದ್ಯಾರ್ಥಿನಿಯರೇ ಹೆಚ್ಚಿನ ಚಿನ್ನದ ಪದಕಗಳನ್ನು ಗಳಿಸಿರುವುದು ಹೆಮ್ಮೆಯ ವಿಷಯವಾಗಿದೆ. ಪೋಷಕರು ಆ ವಿದ್ಯಾರ್ಥಿನಿಯರ ಶಿಕ್ಷಣವನ್ನು ಇಲ್ಲಿಗೆ ನಿಲ್ಲಿಸದೆ ಮುಂದುವರೆಸಬೇಕು ಎಂದು ಹೇಳಿದರು.
ಘಟಿಕೋತ್ಸವದಲ್ಲಿ ಸಮಾಜ ಸೇವಕ ರಮೇಶ್ ಬಾಬು ಹಾಗೂ ಚಲನಚಿತ್ರ ನಿರ್ದೇಶಕ ಟಿ.ಎಸ್.ನಾಗಾಭರಣ್ ಅವರಿಗೆ ಗೌರವ ಡಾಕ್ಟರೇಟ್ ಪದವಿ ಪ್ರದಾನ ಮಾಡಲಾಯಿತು.