ಮಹಾತ್ಮ ಗಾಂಧಿ ಅವರು ಬ್ರಿಟೀಷರನ್ನ ಭಾರತ ಬಿಟ್ಟು ತೊಲಗಿ ಎನ್ನುವ ಹೋರಾಟಕ್ಕೆ 81 ವರ್ಷ ಆಗಿದೆ. ಈಗ ಮತ್ತೆ 8 ದಶಕಗಳ ನಂತರ ಭಾರತ ಬಿಟ್ಟು ತೊಲಗಿ ಎನ್ನುವ ಹೋರಾಟ ಮತ್ತೆ ಆರಂಭವಾಗಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಹಮ್ಮಿಕೊಂಡಿದ್ದ ಕ್ವಿಟ್ ಇಂಡಿಯಾ ಚಳವಳಿ ದಿನಾಚರಣೆಯಲ್ಲಿ ಮಾತನಾಡಿದ ಅವರು ಅಂದು ಬ್ರಿಟೀಷರ ವಿರುದ್ದ ಹೋರಾಟ ಮಾಡಿದ್ದೆವು. ಇಂದು ಕೋಮುವಾದಿ, ಸರ್ವಾದಿಕಾರಿ ಸರ್ಕಾರ ತೊಲಗಿಸಲು ಹೋರಾಟ ಮಾಡಬೇಕಾಗಿದೆ. ಕಾಂಗ್ರೆಸ್ ಮುಕ್ತ ಭಾರತ ಮಾಡುತ್ತೇವೆ ಎಂದು ಬಿಜೆಪಿ ಅವರು ಹೇಳುತ್ತಿದ್ದರು. ಈಗ ನೀವೆಲ್ಲಾ ಬಿಜೆಪಿ ಮುಕ್ತ ಭಾರತಕ್ಕೆ ಸಜ್ಜಾಗಬೇಕು ಎಂದು ಕರೆ ನೀಡಿದರು.
ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಬಂದ ನಂತರ ಭಾರತದ ಎಲ್ಲಾ ರಾಜ್ಯಗಳ ಪ್ರಮುಖ ವಿರೋಧ ಪಕ್ಷಗಳ ನಾಯಕರು, ಮುಖ್ಯಮಂತ್ರಿಗಳು ಇಂಡಿಯಾ ರಕ್ಷಿಸಿ ಅಭಿಯಾನಕ್ಕೆ ಬೆಂಗಳೂರು ಸಾಕ್ಷಿಯಾಯಿತು. ಇಡೀ ಇಂಡಿಯಾಕ್ಕೆ ಕರ್ನಾಟಕ ಆತ್ಮವಿಶ್ವಾಸ ನೀಡಿದೆ ಎಂದು ತಿಳಿಸಿದರು.
ಇಂಡಿಯಾ ಸಭೆಯ ನಂತರ ನಮ್ಮ ಪಕ್ಷದ ಎಲ್ಲಾ ರಾಜ್ಯಗಳ ನಾಯಕರನ್ನು ಕರೆದ ಉನ್ನತ ನಾಯಕರುಗಳು ಕರ್ನಾಟಕ ಮಾದರಿಯನ್ನು ಅನುಕರಿಸಿ ಎಂದು ಹೇಳಿದರು. ಕರ್ನಾಟಕ ಮಾದರಿ ಎಂದರೆ ಏನು? ಎಲ್ಲಾ ವೈಮನಸ್ಸು , ವ್ಯಕ್ತಿ ಪ್ರತಿಷ್ಠೆ ಬಿಟ್ಟು, ವ್ಯಕ್ತಿ ಮುಖ್ಯವಲ್ಲ, ಪಕ್ಷ ಮುಖ್ಯ ಎಂದು ದುಡಿಯುವುದೇ ಕರ್ನಾಟಕ ಮಾದರಿ ಎಂದು ಕಿವಿ ಮಾತು ಹೇಳಿದ್ದಾರೆ, ಇದು ನಮ್ಮ ಹೆಗ್ಗಳಿಕೆ ಎಂದರು.
ಆಗಸ್ಟ್ 20 ನೇ ತಾರೀಕು ಪ್ರತಿಯೊಂದು ಗ್ರಾಮ, ತಾಲ್ಲೂಕು, ಜಿಲ್ಲಾ ಪಂಚಾಯಿತಿ, ಮಟ್ಟದಲ್ಲಿ, ಮಹಾನಗರ ಪಾಲಿಕೆಯ ವಾರ್ಡ್ ಮಟ್ಟದಲ್ಲಿ ಗೃಹಲಕ್ಷ್ಮೀ ಫಲಾನುಭವಿಗಳನ್ನು ಸೇರಿಸಿ ಪಕ್ಷಾತೀತವಾಗಿ ಸಂಭ್ರಮಾಚರಣೆ ಮಾಡುವಂತೆ ಸೂಚಿಸಿದ್ಧೇವೆ. 1 ಕೋಟಿ 28 ಲಕ್ಷ ಮಹಿಳೆಯರ ಅರ್ಜಿಯನ್ನು ಪರಿಗಣಿಸಿದ್ದೇವೆ ಎಂದು ಹೇಳಿದರು.
ಬಿಜೆಪಿ, ಜೆಡಿಎಸ್ ಮತದಾರರ ಹೃದಯ ಗೆಲ್ಲಬೇಕು: ಮುಂದೆ ಲೋಕಸಭಾ ಚುನಾವಣೆ ಇದೆ. ನಮ್ಮ ಯೋಜನೆಗಳ ಲಾಭವನ್ನು ಬಿಜೆಪಿ ಮತದಾರರೂ ಪಡೆಯುತ್ತಿದ್ದಾರೆ. ಅಂತಹವರ ಹೃದಯ ಗೆಲ್ಲಬೇಕು, ಕರ್ನಾಟಕದಲ್ಲಿ ದ್ವೇಷ, ಅಸೂಯೆ ರಾಜಕಾರಣಕ್ಕೆ ಅವಕಾಶವಿಲ್ಲ, ಎಲ್ಲರೂ ನಮ್ಮವರೇ, ಆ ನಿಟ್ಟಿನಲ್ಲಿ ಎಲ್ಲಾ ನಾಯಕರು, ಕಾರ್ಯಕರ್ತರು ಕೆಲಸ ಮಾಡಬೇಕು. ನಮ್ಮ ಗುರಿ ಕೇವಲ 2024 ಮಾತ್ರವಲ್ಲ 2028 ಕೂಡ ಇರಬೇಕು ಎಂದರು.
ನಿಗಮ ಮಂಡಳಿ ಸೇರಿದಂತೆ ಇತರೇ ಅಧ್ಯಕ್ಷ, ಸದಸ್ಯ ಸ್ಥಾನಗಳಿಗೆ ಯಾರ್ಯಾರನ್ನೋ ನೇಮಕ ಮಾಡುವುದಿಲ್ಲ, ಯಾವ ನಾಯಕರು ಪಕ್ಷಕ್ಕಾಗಿ ದುಡಿದಿದ್ದಾರೋ ಅವರಿಗೆ ಮೊದಲ ಆದ್ಯತೆ ಜೊತೆಗೆ ರಂದೀಪ್ ಸುರ್ಜೇವಾಲ ಅವರು ಸೂಚನೆ ನೀಡಿದ್ದಾರೆ. ಬೂತ್ ಮಟ್ಟದಲ್ಲಿ ಎಷ್ಟು ಮತಗಳನ್ನು ಪಕ್ಷಕ್ಕೆ ತಂದಿದ್ದಾರೋ ಅಂತಹ ನಾಯಕರಿಗೆ ಮೊದಲು ಪ್ರಾಶಸ್ತ್ಯ ನೀಡಿ ಎಂದಿದ್ದಾರೆ ಅದರಂತೆ ನಡೆಯುತ್ತೇವೆ ಎಂದು ಹೇಳಿದರು.


