ರಾಮನಗರ ಜಿಲ್ಲೆಯ ಮಾಗಡಿ ತಾಲೂಕಿನ ಗೊಲ್ಲರದೊಡ್ಡಿ ಗ್ರಾಮದ ಮಕ್ಕಳಿಬ್ಬರು ಮನೆ ಪಾಠ ಮುಗಿಸಿಕೊಂಡು ಮನೆಗೆ ನಡೆದುಕೊಂಡು ವಾಪಸ್ ಬರುತ್ತಿದ್ದಾಗ ವೇಗವಾಗಿ ಚಲಿಸುತ್ತಿದ್ದ ಅಜಾಗರೂಕ ಸರಕು ವಾಹನದ ಅಪಘಾತಕ್ಕೆ ಸಿಲುಕಿ ದುರ್ಮರಣಕ್ಕೀಡಾಗಿರುವುದು ನನಗೆ ಅತೀವ ದುಃಖ, ಆಘಾತವನ್ನು ಉಂಟು ಮಾಡಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.
ಚಾಲಕನ ನಿರ್ಲಕ್ಷ್ಯದಿಂದಲೇ ಈ ದುರಂತ ಸಂಭವಿಸಿದೆ. ಜೀವ ಕಳೆದುಕೊಂಡ ರೋಹಿತ್, ಶಾಲಿನಿ ಕಂದಮ್ಮಗಳಿಗೆ ನನ್ನ ಭಾವಪೂರ್ಣ ಶ್ರದ್ಧಾಂಜಲಿ. ಮಕ್ಕಳ ಆತ್ಮಕ್ಕೆ ಚಿರಶಾಂತಿ ಸಿಗಲಿ, ಈ ದುಃಖ ಭರಿಸುವ ಶಕ್ತಿಯನ್ನು ಭಗವಂತ ಆ ಕುಟುಂಬಗಳಿಗೆ ನೀಡಲಿ ಎಂದು ತಿಳಿಸಿದ್ದಾರೆ.

ಗಾಯಗೊಂಡು ಚಿಕಿತ್ಸೆ ಪಡೆಯುತ್ತಿರುವ ಮಕ್ಕಳಾದ ಸುಚಿತ್, ಗೌತಮಿ, ಲೇಖನಾ ಶೀಘ್ರ ಗುಣಮುಖರಾಗಲಿ ಎಂದು ಕುಮಾರಸ್ವಾಮಿ ಹಾರೈಸಿದ್ದಾರೆ.
ರಾಜ್ಯ ಸರ್ಕಾರವು ಮೃತ ಮಕ್ಕಳ ಕುಟುಂಬಗಳಿಗೆ ಸೂಕ್ತ ಪರಿಹಾರ ನೀಡಬೇಕು ಹಾಗೂ ಗಾಯಾಳು ಮಕ್ಕಳ ಚಿಕಿತ್ಸೆಯ ವೆಚ್ಚ ಭರಿಸಬೇಕು ಎಂದು ಆಗ್ರಹಿಸಿದ್ದಾರೆ.
ರಸ್ತೆಗಳಲ್ಲಿ ಅತಿವೇಗ ಮತ್ತೂ ಅಜಾಗರೂಕತೆಯಿಂದ ವಾಹನಗಳನ್ನು ಚಲಾಯಿಸುವ ಚಾಲಕರ ವಿರುದ್ಧ ಪೊಲೀಸರು ನಿಗಾ ವಹಿಸಿ ಕಠಿಣ ಕ್ರಮ ಜರುಗಿಸಬೇಕು. ಅದರಲ್ಲೂ ಶಾಲಾ ಮಕ್ಕಳ ಸುರಕ್ಷತೆಯ ಕಡೆಗೆ ಹೆಚ್ಚು ಒತ್ತು ನೀಡಬೇಕು ಎಂದು ಒತ್ತಾಯಿಸಿದ್ದಾರೆ.


