ತುಮಕೂರಿನ ಸಿದ್ದಗಂಗಾ ಮಠದ ಹಿಂಭಾಗದಲ್ಲಿರುವ ಗೋಕಟ್ಟೆಯಲ್ಲಿ ಕಾಲು ಜಾರಿ ಬಿದ್ದ ರಂಜಿತ್ ನನ್ನು ರಕ್ಷಿಸಲು ಹೋಗಿ ಮೃತಪಟ್ಟ ಎಲ್ಲಾ ನಾಲ್ಕು ಕುಟುಂಬಕ್ಕೆ ತಲಾ 2 ಲಕ್ಷ ರೂಪಾಯಿ ಪರಿಹಾರವನ್ನು ನೀಡುತ್ತೇವೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಭರವಸೆ ನೀಡಿದ್ದಾರೆ.
ತುಮಕೂರಿನ ಕ್ಯಾತ್ಸಂದ್ರದ ಸಿದ್ಧಗಂಗಾ ಮಠದ ಬಳಿ ಇರುವ ಗೋಕಟ್ಟೆಯಲ್ಲಿ ಕಾಲು ಜಾರಿ ಬಿದ್ದ ರಂಜಿತ್ ನನ್ನು ರಕ್ಷಿಸಲು ಆತನ ತಾಯಿ ಲಕ್ಷ್ಮೀ ಸ್ನೇಹಿತರಾದ ಶಂಕರ, ಹರ್ಷಿತ್ ಮತ್ತು ಮಹದೇವಪ್ಪ ಈ ನಾಲ್ವರೂ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನಾ ಸ್ಥಳಕ್ಕೆ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅಧಿಕಾರಿಗಳೊಂದಿಗೆ ಖುದ್ದು ಭೇಟಿ ನೀಡಿ ಅವರು ಮಾತನಾಡಿದರು.
ಮೃತರ ಕುಟುಂಬಸ್ಥರೊಂದಿಗೆ ಮಾತನಾಡಿ ಅವರಿಗೆ ಸಾಂತ್ವನ ಹೇಳಿದರಲ್ಲದೆ, ಸ್ಥಳದಲ್ಲಿಯೇ ಮುಖ್ಯಮಂತ್ರಿಗಳನ್ನು ದೂರವಾಣಿಯ ಮೂಲಕ ಸಂಪರ್ಕಿಸಿ ಮೃತ ಕುಟುಂಬಕ್ಕೆ ತಲಾ 2 ಲಕ್ಷ ರೂ.ಗಳ ಪರಿಹಾರವನ್ನು ಘೋಷಣೆ ಮಾಡಿದರು.
ಮೃತರ ಆತ್ಮಕ್ಕೆ ಶಾಂತಿ ಕೋರಿ, ಇಂತಹ ದುರ್ಘಟನೆಗಳು ಮರುಕಳಿಸದಂತೆ ಮುಂಜಾಗೃತ ಕ್ರಮಗಳನ್ನು ಅನುಸರಿಸಲು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
ಶಾಲೆಗಳ ಸುತ್ತಮುತ್ತ ಇರುವಂತಹ ಕೆರೆ ಕಟ್ಟೆ ಸ್ಥಳಗಳಿಗೆ ಮಕ್ಕಳು ತೆರಳದಂತೆ ಪೋಷಕರು ಮಕ್ಕಳಿಗೆ ತಿಳಿ ಹೇಳಬೇಕು ಎಂದು ಹೇಳಿದರು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿ ಜಿ.ಪ್ರಭು ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಾಹುಲ್ ಕುಮಾರ್ ಶಹಾಪೂರ್ವಾಡ್ ಇದ್ದರು.


