ಬಿಜೆಪಿ ಸರ್ಕಾರ ಜಾರಿಗೆ ತಂದಿದ್ದ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಮುಂದಿನ ಶೈಕ್ಷಣಿಕ ವರ್ಷದಿಂದ ರದ್ದುಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಹಮ್ಮಿಕೊಂಡಿದ್ದ ಕಾಂಗ್ರೆಸ್ ಸಮಿತಿಯ ಸರ್ವ ಸದಸ್ಯರ ಸಭೆಯನ್ನು ಉದ್ಘಾಟಿಸಿ ಮಾತನಾಡಿದ ಅವರು, ಬಿಜೆಪಿ ಸರ್ಕಾರ ಜಾರಿಗೆ ತಂದಿರುವ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಮುಂದಿನ ವರ್ಷದಿಂದ ಸಂಪೂರ್ಣ ರದ್ದುಗೊಳಿಸಲಾಗುವುದು ಎಂದು ತಿಳಿಸಿದ್ದಾರೆ.
ಅಗತ್ಯವಾದ ಕೆಲವೊಂದು ಸಿದ್ದತೆಗಳನ್ನು ಮಾಡಿಕೊಂಡು ರಾಷ್ಟ್ರೀಯ ಶಿಕ್ಷಣ ನೀತಿಯನ್ನು ರದ್ದುಗೊಳಿಸಬೇಕಾಗಿದೆ. ಈ ವರ್ಷ ಅದಕ್ಕೆ ಸಮಯ ಇರಲಿಲ್ಲ. ಚುನಾವಣೆ ಫಲಿತಾಂಶ ಬಂದು ಸರ್ಕಾರ ರಚನೆ ಆಗುವ ವೇಳೆಗೆ ಶೈಕ್ಷಣಿಕ ವರ್ಷ ಆರಂಭವಾಗಿತ್ತು. ಮಧ್ಯದಲ್ಲಿ ಸಮಸ್ಯೆ ಆಗಬಾರದು ಎನ್ನುವ ಕಾರಣದಿಂದ ಈ ವರ್ಷ ಹೊಸ ಪದ್ದತಿಯೇ ಮುಂದುವರೆದಿದೆ ಎಂದು ಹೇಳಿದರು.
ರಾಷ್ಟ್ರೀಯ ಶಿಕ್ಷಣ ನೀತಿಗೆ ಏಕ ಕಾಲದಲ್ಲಿ ವಿದ್ಯಾರ್ಥಿಗಳು, ಪೋಷಕರು, ಉಪನ್ಯಾಸಕರು ಮತ್ತು ಶಿಕ್ಷಕರ ವಿರೋಧವಿದೆ. ದೇಶದಲ್ಲಿ ಎಲ್ಲೆಡೆ ಬಿಜೆಪಿ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಜಾರಿಗೊಳಿಸದೆ ರಾಜ್ಯದಲ್ಲಿ ಮೊದಲ ಬಾರಿಗೆ ಜಾರಿಗೊಳಿಸಿ ನಾಡಿನ ವಿದ್ಯಾರ್ಥಿ ಸಮೂಹದ ಹಿತಾಸಕ್ತಿಯನ್ನು ಬಲಿಕೊಟ್ಟಿದೆ ಎಂದು ಆರೋಪಿಸಿದರು.