ಆದಾಯಕ್ಕೂ ಮೀರಿ ಆಸ್ತಿ ಹೊಂದಿದ ಹಿನ್ನೆಲೆಯಲ್ಲಿ ಚಿತ್ರದುರ್ಗ, ಕೊಡಗು, ಬೆಂಗಳೂರು, ಬೀದರ್, ತುಮಕೂರು ಸೇರಿದಂತೆ ಹಲವು ಜಿಲ್ಲೆಯ ಅಧಿಕಾರಿಗಳ ಮನೆಗಳ ಮೇಲೆ ಲೋಕಾಯುಕ್ತ ದಾಳಿ ನಡೆಸಿದ್ದು ಅಪಾರ ಪ್ರಮಾಣದ ದಾಖಲೆಗಳನ್ನು ವಶಪಡಿಸಿಕೊಳ್ಳಲಾಗಿದೆ.
ಚಿತ್ರದುರ್ಗದ ಹೊಳಲ್ಕೆರೆ ಸಣ್ಣ ನೀರಾವರಿ ಇಲಾಖೆ ಇಂಜಿನಿಯರ್ ಕೆ.ಮಹೇಶ್, ಪತ್ನಿ ಬಿಬಿಎಂಪಿ ಎಕ್ಸಿಕ್ಯೂಟೀವ್ ಇಂಜಿನಿಯರ್ ಎಚ್.ಭಾರತಿ ಮನೆಯ ಮೇಲೆ ದಾಳಿ ನಡೆಸಲಾಗಿದೆ. ದಾವಣಗೆರೆಯ ಮಹೇಶ್ ಮೆನೆ ಮೇಲೂ ದಾಳಿ ನಡೆಸಿ ದಾಖಲೆಗಳನ್ನು ವಶಪಡಿಸಿಕೊಂಡಿದ್ದು ಅವುಗಳನ್ನು ಪರಿಶೀಲಿಸುತ್ತಿದ್ದಾರೆ.
ತುಮಕೂರು ನಗರಾಭಿವೃದ್ಧಿ ಪ್ರಾಧಿಕಾರದ ಜಂಟಿ ನಿರ್ದೇಶಕ ನಾಗರಾಜು ಮನೆ ಹಾಗೂ ಕಚೇರಿಯ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ತುಮಕೂರು ನಗರದ ದೇವನೂರು ಚರ್ಚ್ ಸಮೀಪ ಇರುವ ನಾಗರಾಜು ಮನೆ ಮತ್ತು ಬೆಳಗುಂಬ ರಸ್ತೆಯಲ್ಲಿರುವ ತುಮಕೂರು ನಗರಾಭಿವೃದ್ಧಿ ಕಚೇರಿಯಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ.
ನಾಗರಾಜು ಪಾವಗಡ ತಾಲ್ಲೂಕಿನ ಜಂಗಮರಹಳ್ಳಿಯವರು. ಕಳೆದ ಒಂದೂವರೆ ವರ್ಷದಿಂದ ಟೂಡಾದ ಜಂಟಿ ನಿರ್ದೇಶಕರಾಗಿ ಕೆಲಸ ನಿರ್ವಹಿಸುತ್ತಿದ್ದರು. ಇವರ ಮನೆಯ ಮೇಲೆ ಲೋಕಾಯುಕ್ತ ದಾಳಿ ನಡೆದಿದೆ.
ಕೊಡಗು ಎಡಿಸಿ ನಂಜುಂಡೇಗೌಡ ಅವರ ಮನೆ ಮೇಲೆ ದಾಳಿ ನಡೆದಿದೆ. ದಾಳಿ ವೇಳೆ ಹಣ ಲೆಕ್ಕ ಹಾಕಲು ಮೆಷಿನ್ ತರಿಸಲಾಗಿದ್ದು ಹೆಚ್ಚಿನ ಪ್ರಮಾಣದ ಹಣ ದೊರೆತಿರುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಕೊಪ್ಪಳ ನಿರ್ಮಿತಿ ಕೇಂದ್ರದ ಕಚೇರಿಯ ವ್ಯವಸ್ಥಾಪಕ ಮಂಜುನಾಥ್ ಬನ್ನಿಕೊಪ್ಪ ಅವರ ಮನೆ, ನಿರ್ಮಿತಿ ಕೇಂದ್ರ, ಹುಲಗಿಯಲ್ಲಿನ ಲಾಡ್ಜ್ ಮೇಲೆ ದಾಳಿ ನಡೆದಿದೆ.
ಬೆಂಗಳೂರಿನ ಮಹದೇವಪುರ ವಲಯದ ಬಿಬಿಎಂಪಿ ರೆವಿನ್ಯೂ ಇನ್ಸ್ ಪೆಕ್ಟರ್ ನಟರಾಜ್ ಮನೆ ಮೇಲೆಯೂ ದಾಳಿಯಾಗಿದೆ. ರಾಮನಗರ ಜಿಲ್ಲೆಯ ಕನಕಪುರ ತಾಲ್ಲೂಕಿನ ಶಿವನಹಳ್ಳಿ ಗ್ರಾಮದಲ್ಲಿರುವ ನಟರಾಜು ಮನೆ ಮೇಲೆ ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲಿಸುತ್ತಿವೆ ಎಂದು ಮಾಧ್ಯಮಗಳು ವರದಿ ಮಾಡಿವೆ.


