ಜಾತ್ಯತೀತ ಜನತಾ ದಳದಿಂದ ಯಾವ ಶಾಸಕರು ಕೂಡ ಪಕ್ಷ ತೊರೆಯುವುದಿಲ್ಲ. ಈಗ ಹರಿದಾಡುತ್ತಿರುವ ಸುದ್ದಿ ಕೇವಲ ವದಂತಿ ಎಂದು ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಸ್ಪಷ್ಟಪಡಿಸಿದ್ದಾರೆ.
ಬೆಂಗಳೂರಿನ ಪಕ್ಷದ ಕಚೇರಿ ಜೆಪಿ ಭವನದಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಶಾಸಕರು ಪಕ್ಷಾಂತರ ಮಾಡಲಿದ್ದಾರೆ ಎಂಬ ವದಂತಿಯನ್ನು ನಿರಾಕರಿಸಿದ್ದಾರೆ.
ಮುಂದಿನ ತಿಂಗಳು 10ರಂದು ಸಭೆ ನಡೆಸುತ್ತೇವೆ. ಅದಕ್ಕೆ ಎಲ್ಲಾ ಜಿಲ್ಲೆಗಳಿಂದ ಕಾರ್ಯಕರ್ತರು, ಸ್ಥಳೀಯ ಮುಖಂಡರು ಹಾಜರಾಗಲಿದ್ದಾರೆ ಪಕ್ಷ ಸಂಘಟನೆ ಮಾಡುವ ದೃಷ್ಟಿಯಿಂದ ಈ ಸಭೆ ನಡೆಸುತ್ತಿದ್ದೇವೆ. ನಮಗೆ ಯಾವ ಪಕ್ಷದ ಮೇಲೂ ದ್ವೇಷವಿಲ್ಲ. ಪಕ್ಷ ಸಂಘಟನೆಯೇ ಮುಖ್ಯ ಎಂದು ಹೇಳಿದ್ದಾರೆ.
ರಾಜ್ಯದಲ್ಲಿ ಜೆಡಿಎಸ್ ಪಕ್ಷವನ್ನು ಬಲಪಡಿಸುವ ಹಿನ್ನೆಲೆಯಲ್ಲಿ ನಾನು ಕೂಡ ಪಕ್ಷ ಸಂಘಟನೆಯಲ್ಲಿ ತೊಡಗುತ್ತೇನೆ. ಬಿಜೆಪಿ ಮತ್ತು ಕಾಂಗ್ರೆಸ್ ಈ ಎರಡು ಪಕ್ಷಗಳ ನಡುವೆ ನಮ್ಮ ಪಕ್ಷವನ್ನು ಹೇಗೆ ಉಳಿಸಬೇಕು ಎಂಬ ಬಗ್ಗೆ ಚಿಂತನೆ ನಡೆಸಲಾಗಿದೆ ಎಂದರು.