ಆಡಳಿತಾರೂಢ ಬಿಜೆಪಿ ವಿರುದ್ಧ ರಚೆನಯಾಗಿರುವ ಪ್ರತಿಪಕ್ಷಗಳ ಮೈತ್ರಿಯ ಒಕ್ಕೂಟ ಇಂಡಿಯಾಕ್ಕೆ 13 ಮಂದಿ ಸದಸ್ಯರನ್ನು ಒಳಗೊಂಡ ಸಮನ್ವಯ ಸಮಿತಿಯನ್ನು ರಚಿಸಲಾಗಿದೆ.
ಮಹಾರಾಷ್ಟ್ರದ ರಾಜಧಾನಿ ಮುಂಬೈನಲ್ಲಿ ಎರಡು ದಿನಗಳ ಕಾಲ ನಡೆದ ಇಂಡಿಯ ಸಭೆಯಲ್ಲಿ ಸಮನ್ವಯ ಸಮಿತಿಯನ್ನು ರಚಿಸಲಾಗಿದೆ.
ಸಮನ್ವಯ ಸಮಿತಿಯಲ್ಲಿ ಕಾಂಗ್ರೆಸ್ ನಾಯಕ ಕೆ.ಸಿ.ವೇಣುಗೋಪಾಲ್, ಎನ್.ಸಿ.ಪಿ ಮುಖ್ಯಸ್ಥ ಶರದ್ ಪವಾರ್, ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್, ರಾಷ್ಟ್ರೀಯ ಜನತಾ ದಳದ ನಾಯಕ ತೇಜಸ್ವಿ ಯಾದವ್, ತೃಣಮೂಲ ಕಾಂಗ್ರೆಸ್ ನಾಯಕ ಅಭಿಷೇಕ್ ಬ್ಯಾನರ್ಜಿ, ಶಿವಸೇನೆಯ ಸಂಜಯ್ ರಾವತ್, ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೇನ್, ಆಮ್ ಆದ್ಮಿ ಪಕ್ಷದ ನಾಯಕ ರಾಘವ್ ಚಡ್ಡಾ, ಭಾರತ ಕಮ್ಯುನಿಸ್ಟ್ ಪಕ್ಷದ ಪ್ರಧಾನ ಕಾರ್ಯದರ್ಶಿ ಡಿ.ರಾಜಾ, ನ್ಯಾಷನಲ್ ಕಾನ್ಫರೆನ್ಸ್ ಮುಖ್ಯಸ್ಥ ಅಬ್ದುಲ್, ಪಿಡಿಪಿ ಮುಖ್ಯಸ್ಥೆ ಮೆಹಬೂಬ ಮುಫ್ತಿ ಇದ್ದಾರೆ.
ಈ ಸಮಿತಿಗೆ ಅಗತ್ಯ ನಿರ್ಧಾರಗಳನ್ನು ತೆಗೆದುಕೊಳ್ಳುವ ಅಧಿಕಾರವನ್ನು ನೀಡಲಾಗಿದ್ದು ಲೋಗೋವನ್ನು ಇನ್ನಷ್ಟೇ ರೂಪಿಸಬೇಕಾಗಿದೆ.
ಸಾರ್ವಜನಿಕ ಕಾಳಜಿ ಮತ್ತು ಪ್ರಾಮುಖ್ಯತೆಯ ವಿಷಯಗಳ ಕುರಿತು ದೇಶದ ವಿವಿಧ ಭಾಗಗಳಲ್ಲಿ ಶೀಘ್ರವಾಗಿ ಸಾರ್ವಜನಿಕ ರ್ಯಾಲಿ ಆಯೋಜಿಸಲು ನಿರ್ಧರಿಸಲಾಗಿದೆ. ಇಂಡಿಯಾ ಪಕ್ಷಗಳು ತಮ್ಮ ಸಂವಹನ ಮತ್ತು ಮಾಧ್ಯಮ ಕಾರ್ಯತಂತ್ರಗಳನ್ನು ಸಂಘಟಿಸುವ ಮತ್ತು ವಿವಿಧ ಭಾಷೆಗಳಲ್ಲಿ ಜುಡೇಗಾ ಭಾರತ್, ಜಿತೀಗಾ ಇಂಡಿಯಾ ಎಂಬ ವಿಷಯದೊಂದಿಗೆ ಪ್ರಚಾರಗಳನ್ನು ನಡೆಸಲು ತೀರ್ಮಾನಿಸಲಾಗಿದೆ.