ಬೆಂಗಳೂರಿನ ಅರಮನೆ ಮೈದಾನದಲ್ಲಿ ರಾಜ್ಯಸಭಾ ಸದಸ್ಯರು ಹಾಗೂ ಕಾಂಗ್ರೆಸ್ ಕಾರ್ಯಕಾರಣಿ ಸದಸ್ಯರಾದ ಡಾ.ಸೈಯದ್ ನಾಸಿರ್ ಹುಸೇನ್ ಅವರ ಅಭಿನಂದನಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ಈ ಸಂದರ್ಭದಲ್ಲಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಬಹುತ್ವವು ಭಾರತೀಯ ಸಂಸ್ಕೃತಿಯ ಜೀವಾಳ. ಇದೇ ಭಾರತದ ಮಣ್ಣಿನ ಸತ್ವ. ಭಾರತದ ಬಹುತ್ವದ ನಾಶ ಎಂದರೆ ಅದು ನಮ್ಮ ಸಂವಿಧಾನದ ನಾಶ ಎಂದು ಹೇಳಿದರು.
ಸಾವಿರಾರು ವರ್ಷಗಳ ಭಾರತದ ಬಹುತ್ವ ಸಂಸ್ಕೃತಿಯನ್ನು ನಾಶಪಡಿಸುವ ಹುನ್ನಾರ ನಡೆಯುತ್ತಿದೆ. ಇದಕ್ಕಾಗಿ ಆಕರ್ಷಕ ಪದಗಳನ್ನು, ಘೋಷಣೆಗಳನ್ನು ಕೊಡುತ್ತಿದ್ದಾರೆ. ಇದಕ್ಕೆ ಮರುಳಾದರೆ ಭಾರತದ ಸಾಮಾಜಿಕ, ರಾಜಕೀಯ ಮತ್ತು ಆರ್ಥಿಕ ಬೆಸುಗೆ ನಾಶವಾಗುತ್ತದೆ ಎಂದು ಆತಂಕ ವ್ಯಕ್ತಪಡಿಸಿದರು.
ದೇಶದ ಹೆಸರನ್ನೇ ಈಗ ಬದಲಾಯಿಸುವ ಹುನ್ನಾರ ಮಾಡುತ್ತಾ ಡ್ರಾಮಾ ಮಾಡುತ್ತಿದ್ದಾರೆ. ತನ್ನ ಕಾರ್ಯಕ್ರಮಗಳಿಗೆ ಮೇಕ್ ಇನ್ ಇಂಡಿಯಾ , ಸ್ಕಿಲ್ ಇಂಡಿಯಾ, ಸ್ಟಾಂಡ್ ಅಪ್ ಇಂಡಿಯಾ ಅಂತೆಲ್ಲಾ ಹೆಸರಿಟ್ಟಿದ್ದ ಬಿಜೆಪಿ, ಕೇಂದ್ರ ಸರ್ಕಾರವೇ ಈಗ “INDIA” ಹೆಸರಿಗೆ ಬೆಚ್ಚಿ ಬಿದ್ದು ದೇಶದ ಹೆಸರು “ಭಾರತ” ಎಂದು ಹೊಸದಾಗಿ ಹೇಳಲು ಹೊರಟಿದೆ ಎಂದರು.
ನಾವು ಭಾರತ್ ಜೋಡೋ ನಡೆಸಿದವರು. ನಮಗೆ ಭಾರತ-ಇಂಡಿಯಾ ಬಗ್ಗೆ ಪಾಠ ಹೇಳುವ ಮೂರ್ಖತನಕ್ಕೆ ಬಿಜೆಪಿ ಪರಿವಾರ ಮುಂದಾಗಿದೆ. ಇವರಿಗೆ ಭಾರತದ ಬಗ್ಗೆಯೂ ಗೌರವ ಇಲ್ಲ, ಇಂಡಿಯಾದ ಘನತೆಯೂ ಗೊತ್ತಿಲ್ಲ ಎಂದು ಟೀಕಾಪ್ರಹಾರ ನಡೆಸಿದರು.
ಭಾರತದ ಬಹುತ್ವ ಸಂಸ್ಕೃತಿ, ಸಂವಿಧಾನ ಕಾಂಗ್ರೆಸ್ ಕೈಗಳಲ್ಲಿ ಸುರಕ್ಷಿತವಾಗಿದೆ. ಯಾರು ಎಷ್ಟೆ ಹುನ್ನಾರ, ಪಿತೂರಿ ರಾಜಕಾರಣ ನಡೆಸಿದರೂ ನಾವು ಬಹುತ್ವದ ಭಾರತವನ್ನು, ಈ ಮಣ್ಣಿನ ಸೌಹಾರ್ದ ಪರಂಪರೆಯನ್ನು, ಜಾತ್ಯತೀತ ಸಂಸ್ಕೃತಿಯನ್ನು, ಭಾರತೀಯ ಸಂವಿಧಾನವನ್ನು ಕಾಪಾಡಿಕೊಳ್ಳುತ್ತೇವೆ ಎಂದು ಹೇಳಿದರು.