ಎಲ್ಲಾ ಗ್ರಾಮ ಪಂಚಾಯತಿಗಳು ಜನರ ನಿರೀಕ್ಷೆಗನುಗುಣವಾಗಿ ಉತ್ತಮ ಸೇವೆ ಒದಗಿಸಬೇಕೆಂದು ಗೃಹ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಜಿ. ಪರಮೇಶ್ವರ ಹೇಳಿದ್ದಾರೆ.
ತುಮಕೂರು ನಗರದ ಹೊರವಲಯದಲ್ಲಿರುವ ಶಿಕ್ಷಣ ಭೀಷ್ಮ ಹೆಚ್.ಎಂ. ಗಂಗಾಧರಯ್ಯ ಮೆಮೋರಿಯಲ್ ಸಭಾಂಗಣದಲ್ಲಿ ಗ್ರಾಮ ಪಂಚಾಯತಿಗಳ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳಿಗಾಗಿ ಹಮ್ಮಿಕೊಂಡಿದ್ದ ಒಂದು ದಿನದ ವಿಶೇಷ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.
ಗ್ರಾಮಗಳು ಅಭಿವೃದ್ಧಿ ಹಾದಿಯಲ್ಲಿ ಸಾಗಬೇಕಾದರೆ ಆಯಾ ಪಂಚಾಯತಿ ಚುನಾಯಿತ ಪ್ರತಿನಿಧಿಗಳು ಹಾಗೂ ಪಿಡಿಓಗಳು ಪಾರದರ್ಶಕವಾಗಿ ಸಾಮರಸ್ಯದಿಂದ ತಮ್ಮ ವ್ಯಾಪ್ತಿಯ ಕಟ್ಟಕಡೆಯ ವ್ಯಕ್ತಿಗೂ ಸರ್ಕಾರದ ಯೋಜನೆಗಳನ್ನು ತಲುಪಿಸುವ ಕೆಲಸ ಮಾಡಬೇಕು ಎಂದು ಕಿವಿಮಾತು ಹೇಳಿದರು.
ಮಹಾತ್ಮ ಗಾಂಧೀಜಿ ಆಶಯದಂತೆ ಜನರಿಗಾಗಿ ಉತ್ತಮ ಆಡಳಿತ ನೀಡುವುದು ಎಲ್ಲಾ ಪಂಚಾಯತಿಗಳ ಜವಾಬ್ದಾರಿ. ಭಾರತ ಹಳ್ಳಿಗಳ ದೇಶವಾಗಿದ್ದು, ರಾಜ್ಯದಲ್ಲಿ 6000ಕ್ಕೂ ಹೆಚ್ಚು ಗ್ರಾಮ ಪಂಚಾಯತಿಗಳಿವೆ. ಗ್ರಾಮ ಪಂಚಾಯತಿಗಳಿಗೆ ರಾಜಧಾನಿ ಬೆಂಗಳೂರಿನಿಂದ ಯೋಜನೆಗಳ ಸೌಲಭ್ಯ ಕಲ್ಪಿಸುವುದು ಕಷ್ಟಸಾಧ್ಯ. ಈ ನಿಟ್ಟಿನಲ್ಲಿ ತಳ ಹಂತದಲ್ಲಿರುವ ಗ್ರಾಮ ಪಂಚಾಯತಿಗಳಿಗೆ ಶಕ್ತಿ ನೀಡುವ ದೃಷ್ಟಿಯಿಂದ ಆಯಾ ಪಂಚಾಯತಿಗಳಿಗೆ ಅಧಿಕಾರ ನೀಡಲಾಗಿದೆ. ಈ ಅಧಿಕಾರವನ್ನು ಜನರ ಕಲ್ಯಾಣಕ್ಕಾಗಿ ಬಳಸಿಕೊಳ್ಳುವಂತೆ ತಿಳಿಸಿದರು.
ವಿಧಾನಸಭಾ ಕ್ಷೇತ್ರದ ಶಾಸಕರಿಗಿದ್ದ ಅಧಿಕಾರವನ್ನು ಗ್ರಾಮ ಪಂಚಾಯತಿ ಚುನಾಯಿತ ಪ್ರತಿನಿಧಿಗಳಿಗೆ ವಿಕೇಂದ್ರೀಕರಿಸಲಾಗಿದೆ. ಅಮೇರಿಕಾದಂತಹ ದೊಡ್ಡ ದೇಶದಲ್ಲಿಯೂ ಆಡಳಿತದಲ್ಲಿ ಮಹಿಳೆಯರಿಗೆ ಶೇ.50ರಷ್ಟು ಮೀಸಲಾತಿ ಸೌಲಭ್ಯ ನೀಡಿರುವುದಿಲ್ಲ. ಆದರೆ ಭಾರತದಲ್ಲಿ ಮಾತ್ರ ಪಂಚಾಯತಿ ಆಡಳಿತದಲ್ಲಿ ಮಹಿಳೆಯರಿಗೆ ಶೇ.50ರಷ್ಟು ಮೀಸಲಾತಿ ನೀಡಲಾಗಿದೆ. ಇದರಿಂದ ದೇಶದ ಲಕ್ಷಾಂತರ ಮಹಿಳೆಯರು ಅಧಿಕಾರದ ಚುಕ್ಕಾಣಿ ಹಿಡಿದು ಆಡಳಿತ ನಡೆಸುತ್ತಿದ್ದಾರೆ. ಪುರುಷ-ಮಹಿಳೆಯರಿಗೂ ಸಮಾನ ಸ್ಥಾನ-ಮಾನ ನೀಡಿರುವುದು ನಮ್ಮ ದೇಶದ ಹೆಗ್ಗಳಿಕೆ ಎಂದು ಹೇಳಿದರು.
ಕೂಲಿ ಸಿಗದೆ, ದುಡಿಮೆ ಇಲ್ಲದೆ ಹಸಿದವರಿಗೆ ಉದ್ಯೋಗ ನೀಡುವ ಸಲುವಾಗಿ ಮಹಾತ್ಮಗಾಂಧಿ ಉದ್ಯೋಗ ಖಾತ್ರಿ ಯೋಜನೆಯಡಿ ಉದ್ಯೋಗ ನೀಡಲಾಗುತ್ತಿದೆ. ಸ್ವಚ್ಛತಾ ಕಾರ್ಯಕ್ರಮದಡಿ ಗ್ರಾಮ ಪಂಚಾಯತಿಯಲ್ಲಿ ತ್ಯಾಜ್ಯ ನಿರ್ವಹಣೆ ಮಾಡುವ ಮೂಲಕ ಜನ ಸಾಮಾನ್ಯರ ಆರೋಗ್ಯ ಸುರಕ್ಷತೆಗಾಗಿ ಕ್ರಮ ಕೈಗೊಳ್ಳಲಾಗುತ್ತಿದೆ. ವಿವಿಧ ವಸತಿ ಯೋಜನೆಯಡಿ ಬಡವರಿಗೆ ಸೌಲಭ್ಯ ಕಲ್ಪಿಸುವ ಸಲುವಾಗಿ ನಿವೇಶನ ಗುರುತಿಸಲು ಜಿಲ್ಲಾಡಳಿತಕ್ಕೆ ಸೂಚಿಸಲಾಗಿದೆ ಎಂದರು.