ಕುಮಾರಣ್ಣ ಮೈತ್ರಿ ಕರ್ನಾಟಕಕ್ಕೆ ಮಾತ್ರ ಎನ್ನುತ್ತಿದ್ದಾರೆ. ಆ ಪಕ್ಷದ ರಾಷ್ಟ್ರೀಯ ಅಧ್ಯಕ್ಷರು ಕೇರಳಕ್ಕೆ ಒಂದು ಭಾಗ, ಕರ್ನಾಟಕಕ್ಕೆ ಒಂದು ಭಾಗ ಎಂದು ಹೇಗೆ ಮಾಡುತ್ತಾರೋ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ವ್ಯಂಗ್ಯವಾಡಿದ್ದಾರೆ.
ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ನಡೆದ ವಿವಿಧ ಪಕ್ಷಗಳ ಮುಖಂಡರ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಹೇಳಿದ್ದಿಷ್ಟು:
ಜೆಡಿಎಸ್ ಎನ್ಡಿಎಗೆ ಸೇರಿದ ಕಾರಣ, ಕೇರಳ ಸೇರಿದಂತೆ ಇತರೇ ರಾಜ್ಯಗಳ ಜೆಡಿಎಸ್ ಪಕ್ಷದ ನೂರಾರು ನಾಯಕರು ಕಾಂಗ್ರೆಸ್ ಪಕ್ಷಕ್ಕೆ ಅದರಲ್ಲೂ ‘ಇಂಡಿಯಾ’ ಗೆ ಸೇರುತ್ತಿದ್ದಾರೆ ಎಂದು ಹೇಳಿದರು.
ನಾನು ಕೇವಲ ಪಕ್ಷಕ್ಕೆ ಆಹ್ವಾನ ನೀಡಲು ಬಂದಿಲ್ಲ. ಒಬ್ಬೊಬ್ಬ ನಾಯಕರು, ಕಾರ್ಯಕರ್ತರು ಕನಿಷ್ಠ 10 ಜನರನ್ನು ಪಕ್ಷಕ್ಕೆ ಸೇರಿಸಿಕೊಳ್ಳುವ ಗುರಿ ನೀಡಲು ಬಂದಿದ್ದೇನೆ. ಕಾಂಗ್ರೆಸ್ ಪಕ್ಷವೇ ಈ ದೇಶದ ಶಕ್ತಿ, ಕಾಂಗ್ರೆಸ್ ಇತಿಹಾಸ ಈ ದೇಶದ ಇತಿಹಾಸ, ಎಲ್ಲರೂ ಸೇರಿ ಮತ್ತಷ್ಟು ಪಕ್ಷವನ್ನು ಬಲಪಡಿಸೋಣ ಎಂದು ಕರೆ ನೀಡಿದರು.
ಜೆಡಿಎಸ್ ಪಕ್ಷದ ಸಾವಿರಾರು ಕಾರ್ಯಕರ್ತರನ್ನು ಪಕ್ಷಕ್ಕೆ ಬರ ಮಾಡಿಕೊಳ್ಳಲು ಮೈಸೂರಿನಿಂದ ಓಡೋಡಿ ಬಂದೆ. ಮುಖ್ಯಮಂತ್ರಿಗಳು ಸಹ ಈ ಕಾರ್ಯಕ್ರಮಕ್ಕೆ ಬರಬೇಕಾಗಿತ್ತು, ಕೊನೆ ಕ್ಷಣದಲ್ಲಿ ಬೇರೆ ಕಾರ್ಯಕ್ರಮ ನಿಗದಿಯಾದ ಕಾರಣ ಬರಲಾಗಲಿಲ್ಲ ಎಂದು ಹೇಳಿದರು.
ಶ್ರೀಕಾಂತ್ ಅವರು ಹಳೆಯ ಗೆಳೆಯ, ಒಳ್ಳೆಯ ಸಂಘಟನಾ ಚತುರ. ಬಹಳ ಕಾಲದಿಂದ ಗಾಳ ಹಾಕುತ್ತಲೇ ಇದ್ದೆ, ಬಲೆಗೆ ಬಿದ್ದಿರಲಿಲ್ಲ. ಈತನಿಗೆ ಸಾಕಷ್ಟು ಆಶ್ವಾಸನೆ ನೀಡಿದ್ದೆವು, ಬಹಿರಂಗವಾಗಿ ಹೇಳಲು ಆಗುವುದಿಲ್ಲ ಎಂದರು.
ಬದುಕಿನಲ್ಲಿ ಏನಾದರೂ ಸಾಧನೆ ಮಾಡಬೇಕು ಎಂದು ಶಿವಮೊಗ್ಗ, ಬೆಂಗಳೂರಿನಲ್ಲಿ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸಿದ್ದರು. ಶ್ರೀಕಾಂತ್ ಅವರಿಗೆ ನಾಯಕರನ್ನು ಸೃಷ್ಟಿಮಾಡುವ ದೊಡ್ಡ ಶಕ್ತಿಯಿದೆ. ಇದಕ್ಕೆ ಸಾಕ್ಷಿಯಾಗಿ, ಯಶವಂತಪುರ, ಶಿವಮೊಗ್ಗದ ಎಲ್ಲಾ ಪಕ್ಷಗಳ ನಾಯಕರು ಬಂದಿದ್ದಾರೆ.
ಮಹಮದ್ ಷಫಿ ಅವರು ಸಹ ಪಕ್ಷದ ಆಸ್ತಿಯಾಗಿದ್ದವರು. ಏಕೆ ದುಡುಕಿನ ನಿರ್ಧಾರ ತೆಗೆದುಕೊಂಡರೋ ಗೊತ್ತಿಲ್ಲ, ಮತ್ತೆ ಅವರನ್ನು ಭವ್ಯವಾಗಿ ಆಹ್ವಾನ ಮಾಡುತ್ತಿದ್ದೇವೆ. ಖುದ್ದಾಗಿ ಪರಮೇಶ್ವರ್ ಅವರೇ ಬರುತ್ತೇನೆ ಎಂದು ಹೇಳಿದ್ದರು. ದಸರಾಗೆ ದುಡಿದ ಪೊಲೀಸರಿಗೆ ಅಭಿನಂದನಾ ಸಮಾರಂಭ ಇದ್ದ ಕಾರಣ ಬರಲಾಗಲಿಲ್ಲ ಎಂದರು.


