Tuesday, October 22, 2024
Google search engine
Homeಜಿಲ್ಲೆಸಂಘಸಂಸ್ಥೆಗಳು ಸರ್ಕಾರಿ ಶಾಲೆಗಳ ನೆರವಿಗೆ ಬರಲಿ - ಸಹಕಾರ ಸಚಿವ ಕೆ.ಎನ್.ರಾಜಣ್ಣ ಸಲಹೆ

ಸಂಘಸಂಸ್ಥೆಗಳು ಸರ್ಕಾರಿ ಶಾಲೆಗಳ ನೆರವಿಗೆ ಬರಲಿ – ಸಹಕಾರ ಸಚಿವ ಕೆ.ಎನ್.ರಾಜಣ್ಣ ಸಲಹೆ

ಸರ್ಕಾರದ ಜೊತೆಗೆ ಸಂಘಸಂಸ್ಥೆಗಳು, ಶಕ್ತಿ ಇರುವವರು ಮೂಲಭೂತ ಸೌಕರ್ಯ ಒದಗಿಸಿ ಮಕ್ಕಳ ವಿದ್ಯಾಭ್ಯಾಸಕ್ಕೆ ನೆರವಾದರೆ ಆ ಮಕ್ಕಳು ಸಮಾಜದ ಆಸ್ತಿಯಾಗುತ್ತಾರೆ ಎಂದು ಸಹಕಾರ ಸಚಿವ ಕೆ.ಎನ್.ರಾಜಣ್ಣ ಹೇಳಿದರು.

ತುಮಕೂರಿನ ಬಡ್ಡಿಹಳ್ಳಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಜಿಂದಾಲ್ ಅಲ್ಯೂಮಿನಿಯಂ ಲಿಮಿಟೆಡ್ ಸಂಸ್ಥೆಯವರು ನಿರ್ಮಿಸಿಕೊಟ್ಟಿರುವ ನೂತನ ಶಾಲಾ ಕೊಠಡಿಗಳನ್ನು ಉದ್ಘಾಟಿಸಿ ಮಾತನಾಡಿದರು.

ಹಳ್ಳಿಯಾಗಲಿ, ನಗರವಾಗಲಿ, ಬಡವರಾಗಲಿ, ಸಿರಿವಂತರಾಗಲಿ ಎಲ್ಲಾ ಮಕ್ಕಳಿಗೂ ದೇವರು ಸಮಾನ ಬುದ್ಧಿಶಕ್ತಿ ಕೊಟ್ಟಿರುತ್ತಾನೆ. ಆ ಮಕ್ಕಳಲ್ಲಿರುವ ಬುದ್ಧಿಶಕ್ತಿ, ಪ್ರತಿಭೆಯನ್ನು ಅರಳಿಸಲು ಶಿಕ್ಷಕರು, ಪೋಷಕರು ಆದ್ಯತೆ ನೀಡಬೇಕು. ಮಕ್ಕಳು ಶಿಸ್ತು, ಶ್ರದ್ಧೆಯಿಂದ ಅಭ್ಯಾಸ ಮಾಡಿದರೆ ಯಶಸ್ಸು ಗಳಿಸಿ ಉನ್ನತ ಸ್ಥಾನಮಾನ ಪಡೆಯಬಹುದು ಎಂದರು.

ವಿದ್ಯಾಭ್ಯಾಸಕ್ಕೆ ಹೆಚ್ಚಿನ ಸೌಕರ್ಯಗಳಿವೆ. ಮಕ್ಕಳು ಶಾಲೆಯಲ್ಲಿ ಅಭ್ಯಾಸ ಮಾಡುವಷ್ಟೇ ಮುಖ್ಯವಾಗಿ ಅವರು ಶಾಲೆಗೆ ಗೈರುಹಾಜರಾಗದಂತೆ ನೋಡಿಕೊಳ್ಳಬೇಕು. ಪರೀಕ್ಷೆಯಲ್ಲಿ ಪಡೆಯುವ ಅಂಕಗಳಷ್ಟೇ ಶಾಲೆಯ ಹಾಜರಾತಿಯೂ ಮುಖ್ಯವಾಗುತ್ತದೆ. ಮಕ್ಕಳು ಶಾಲೆಗೆ ಗೈರುಹಾಜರಾಗದಂತೆ ಶಿಕ್ಷಕರು, ಇಲಾಖೆ ಅಧಿಕಾರಿಗಳು ಪೋಷಕರಿಗೆ ಮನವರಿಕೆ ಮಾಡಿಕೊಡಬೇಕು ಎಂದು ಕೆ.ಎನ್.ರಾಜಣ್ಣ ಸಲಹೆ ನೀಡಿದರು.

ಬಡ್ಡಿಹಳ್ಳಿ ಸರ್ಕಾರಿ ಶಾಲೆಯ ಈ ಮೊದಲಿದ್ದ ಕಟ್ಟಡ ಮಳೆಗಾಲದಲ್ಲಿ ಜಲಾವೃತವಾಗಿ ವಿದ್ಯಾರ್ಥಿಗಳ ಕಲಿಕೆಗೆ ಸಮಸ್ಯೆಯಾಗುತ್ತಿತ್ತು. ಈ ಸಮಸ್ಯೆ ನಿವಾರಣೆಗೆ ಇಲ್ಲಿನ ಹಲವರು ಪ್ರಯತ್ನ ಮಾಡಿ ಹೊಸ ಜಾಗದಲ್ಲಿ ಶಾಲೆ ಸ್ಥಾಪನೆಯಾಗಲು ಸಹಕರಿಸಿದರು. ಮಳೆಗಾಲದಲ್ಲಿ ನೀರು ಸಂಗ್ರಹವಾಗುವ ಜಾಗಗಳನ್ನು ರಕ್ಷಣೆ ಮಾಡಬೇಕು. ನಗರ ಪ್ರದೇಶಗಳಲ್ಲಿ ಕೆರೆಕಟ್ಟೆಗಳನ್ನು ಮುಚ್ಚುವ ಪ್ರಯತ್ನ ನಡೆದಿದೆ. ಕಟ್ಟೆಗಳಲ್ಲಿ ನೀರು ಸಂಗ್ರಹವಾಗುವುದರಿಂದ ಅಂತರ್ಜಲಮಟ್ಟ ಸುಧಾರಿಸುತ್ತದೆ ಎಂದು ಹೇಳಿದರು.

ನಿವೃತ್ತ ಪ್ರಾಚಾರ್ಯ ಮರಿಬಸಪ್ಪ ಮಾತನಾಡಿ, ಬಡ್ಡಿಹಳ್ಳಿ ಶಾಲೆಗೆ ಕಟ್ಟಡದ ಅವಶ್ಯಕತೆ ಬಗ್ಗೆ ಜಿಂದಾಲ್ ಸಂಸ್ಥೆಗೆ ಕೋರಿಕೊಂಡಾಗ ಕೇವಲ 95 ದಿನಗಳಲ್ಲಿ ಸುಸಜ್ಜಿತ ಕಟ್ಟಡ ನಿರ್ಮಿಸಿಕೊಟ್ಟರು. ಬಡವರೇ ಹೆಚ್ಚಾಗಿರುವ ಈ ಪ್ರದೇಶದ ಮಕ್ಕಳ ವಿದ್ಯಾಭ್ಯಾಸಕ್ಕಾಗಿ ಇಲ್ಲೊಂದು ಉನ್ನತೀಕರಿಸಿದ ಪ್ರೌಢಶಾಲೆ ಸ್ಥಾಪನೆಗೆ ಕ್ರಮ ತೆಗೆದುಕೊಳ್ಳುವಂತೆ ಸಚಿವ ಕೆ.ಎನ್.ರಾಜಣ್ಣ ಅವರಿಗೆ ಮನವಿ ಮಾಡಿದರು.

20-30 ಸಾವಿರ ಜನಸಂಖ್ಯೆ ಇರುವ ಈ ಭಾಗದ ಜನರ ಆದಾಯ ಪ್ರಮಾಣ ಪತ್ರ, ಜಾತಿ ಪ್ರಮಾಣ ಪತ್ರ, ಇನ್ನಿತರ ಕಂದಾಯ ಸೇವೆಗಳಿಗಾಗಿ ದೂರದ ಊರ್ಡಿಗೆರೆ ನಾಡಕಚೇರಿಗೆ ಹೋಗಬೇಕು. ಈ ಭಾಗದಲ್ಲಿ ನಾಡಕಚೇರಿ ತೆರೆಯುವಂತೆ ಕೋರಿದರು.

ಕಾರ್ಯಕ್ರಮದಲ್ಲಿ ಯುವ ಕಾಂಗ್ರೆಸ್ ಮುಖಂಡ ಶಶಿ ಹುಲಿಕುಂಟೇಮಠ್, ನಗರಪಾಲಿಕೆ ಸದಸ್ಯ ಬಿ.ಜಿ.ಕೃಷ್ಣಪ್ಪ, ಡಿಡಿಪಿಐ ಸಿ.ರಂಗಧಾಮಯ್ಯ, ಬಿಇಓ ಡಾ.ಸೂರ್ಯಕಲಾ, ಡಿಜಿ ಕಚೇರಿಯ ಸರ್ಕಲ್ ಇನ್ಸ್ಪೆಕ್ಟರ್ ಡಾ.ಎಂ.ಬಿ.ನವೀನ್‌ಕುಮಾರ್, ನಗರಪಾಲಿಕೆ ನಾಮಿನಿ ಸದಸ್ಯ ಕೆ.ಎಸ್.ಮಹೇಶ್, ಎಸ್.ಡಿ.ಎಂ.ಸಿ ಅಧ್ಯಕ್ಷ ಹನುಮಂತರಾಯಪ್ಪ, ಮುಖ್ಯಶಿಕ್ಷಕಿ ಬಿ.ದಾಕ್ಷಾಯಣಮ್ಮ, ಮುಖಂಡರಾದ ಮುನಿಬಸವರಾಜು, ಸಿದ್ಧಲಿಂಗಯ್ಯ, ಮೂರ್ತಿ, ಗಿರಿಜಮ್ಮ, ರವೀಶ್, ವೆಂಕಟೇಶ್,ಶಿವಕುಮಾರ್, ರವೀಶ್, ಸೂರಾಚಾರ್ ಇತರರು ಭಾಗವಹಿಸಿದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular