ಸೇವೆ ಖಾಯಮಾತಿ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಅತಿಥಿ ಉಪನ್ಯಾಸಕರು ಕೈಗೊಂಡಿರುಪ ಅನಿರ್ಧಿಷ್ಟಾವಧಿ ಧರಣಿ ಮುಂದುವರೆದಿದೆ. ಮಹಿಳಾ ಉಪನ್ಯಾಸಕರಿಗೆ ತಿಂಗಳಿಗೆ ಎರಡು ರಜೆ ನೀಡುವಂತೆ ಆಗ್ರಹಿಸಿದ್ದಾರೆ.
ಚುನಾವಣಾ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷ ಪ್ರಣಾಳಿಕೆಯಲ್ಲಿ ಅತಿಥಿ ಉಪನ್ಯಾಸಕರಿಗೆ ಸೂಕ್ತ ಯೋಜನೆ ರೂಪಿಸುವುದಾಗಿ ಹೇಳಿತ್ತು. ಈ ಹಿನ್ನೆಲೆಯಲ್ಲಿ ಪ್ರಣಾಳಿಕೆಯಲ್ಲಿನ ಅಂಶಗಳನ್ನು ಪ್ರಣಾಳಿಕೆ ಓದುವ ಮೂಲಕ ವಿಭಿನ್ನವಾಗಿ ಪ್ರತಿಭಟನೆ ನಡೆಸಲಾಯಿತು.
ತುಮಕೂರಿನ ಜಿಲ್ಲಾಧಿಕಾರಿ ಕಚೇರಿ ಮುಂದೆ ಅನಿರ್ಧಿಷ್ಟಾವಧಿ ಧರಣಿ ನಡೆಸುತ್ತಿರುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಅತಿಥಿ ಉಪನ್ಯಾಸಕರು, ಬೇಡಿಕೆಗಳನ್ನು ಈಡೇರಿಸದಿದ್ದರೆ ಹೋರಾಟ ತೀವ್ರಗೊಳಿಸಲಾಗುವುದು ಎಂದು ಹೇಳಿದ್ದಾರೆ.
ಹನ್ನೊಂದು ತಿಂಗಳ ಹಸುಗೂಸುನೊಂದಿಗೆ ಪ್ರತಿಭಟನೆಗೆ ಬಂದಿದ್ದ ಅತಿಥಿ ಉಪನ್ಯಾಸಕಿ ಕೋಕಿಲ ಮಾತನಾಡಿ, ಅತಿಥಿ ಉಪನ್ಯಾಸಕರನ್ನು ಅದರಲ್ಲೂ ವಿಶೇಷವಾಗಿ ಮಹಿಳೆಯರಿಗೆ ಯಾವುದೇ ವಿಶೇಷ ರಜೆ ಸೌಲಭ್ಯಗಳಿಲ್ಲ. ಸರ್ಕಾರಿ ಸೌಲಭ್ಯಗಳು ಇಲ್ಲದೆ, ಅಮಾನವೀಯವಾಗಿ ನಮ್ಮನ್ನು ನಡೆಸಿಕೊಳ್ಳುತ್ತಿದ್ದಾರೆ ಎಂದು ದೂರಿದರು.
ರಾಜ್ಯಾದ್ಯಂತ ಆರು ಸಾವಿರದಷ್ಟು ಮಹಿಳಾ ಅತಿಥಿ ಉಪನ್ಯಾಸಕರು ಕೆಲಸ ಮಾಡುತ್ತಿದ್ದು ಯಾವುದೇ ಭದ್ರತೆಯ ರಜೆ ಇಲ್ಲದೆ ಸೇವೆ ಸಲ್ಲಿಸುತ್ತಿರುವುದು ವಿಪರ್ಯಾಸಕರ. ರಾಜ್ಯ ಸರ್ಕಾರ ನಮಗೂ ಒಂದು ಯೋಜನೆ ಮೂಲಕ ಸೇವೆ ಖಾಯಮಾತಿ ಮಾಡಬೇಕೆಂದು ಒತ್ತಾಯಿಸಿದರು.
ಅತಿಥಿ ಉಪನ್ಯಾಸಕರಿ ಪದ್ಮ, ಮಾತನಾಡಿ ಹಿಂದಿನ ಬಿಜೆಪಿ ಸರ್ಕಾರದಲ್ಲಿ ಎಂಟು ಗಂಟೆ ಇದ್ದ ಕಾರ್ಯಭಾರವನ್ನು 15 ಮತ್ತು 19 ಗಂಟೆಗೆ ಹೆಚ್ಚಿಸಿ ಗೌರವಧನವನ್ನು ಹೆಚ್ಚಿಸಿತು. ಅದೇ ರೀತಿ ನುಡಿದಂತೆ ನಡೆಯುವ ಸರ್ಕಾರ, ಕೊಟ್ಟ ಮಾತಿನಂತೆ ಸೂಕ್ತ ಯೋಜನೆಯನ್ನು ರೂಪಿಸಿ ಅತಿಥಿ ಉಪನ್ಯಾಸಕರಿಗೆ ಭದ್ರತೆ ಮತ್ತು ಖಾಯಮಾತಿ ಮಾಡಬೇಕು ಮತ್ತು ರಜೆ ಸೌಲಭ್ಯಗಳನ್ನು ನೀಡಬೇಕು ಎಂದು ಆಗ್ರಹಿಸಿದರು.