Sunday, September 8, 2024
Google search engine
Homeಮುಖಪುಟಕರ್ನಾಟಕದ ಪಾಲಿನ ತೆರಿಗೆ ಹಣ ಬಿಡುಗಡೆಗೆ ಆಗ್ರಹಿಸಿ ದೆಹಲಿಯಲ್ಲಿ ರಾಜ್ಯ ಸರ್ಕಾರ ಪ್ರತಿಭಟನೆ

ಕರ್ನಾಟಕದ ಪಾಲಿನ ತೆರಿಗೆ ಹಣ ಬಿಡುಗಡೆಗೆ ಆಗ್ರಹಿಸಿ ದೆಹಲಿಯಲ್ಲಿ ರಾಜ್ಯ ಸರ್ಕಾರ ಪ್ರತಿಭಟನೆ

ಕರ್ನಾಟಕ ರಾಜ್ಯಕ್ಕೆ ನಿರಂತರ ಅನ್ಯಾಯ, ತಾರತಮ್ಯ ಆಗುತ್ತಿರುವುದನ್ನು ಖಂಡಿಸಿ ಫೆಬ್ರವರಿ 7ರಂದು ದೆಹಲಿಯ ಜಂತರ್ ಮಂತರ್ ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ಸಚಿವರು, ಶಾಸಕರು, ವಿಧಾನಪರಿಷತ್ ಸದಸ್ಯರು ಪ್ರತಿಭಟನೆ ನಡೆಸಿ ಕರ್ನಾಟಕ ರಾಜ್ಯಕ್ಕೆ ತಮ್ಮ ಪಾಲಿನ ಹಣ ಬಿಡುಗಡೆ ಮಾಡುವಂತೆ ಆಗ್ರಹಿಸಿದರು.

ದೆಲ್ಲಿ ಚಲೋ ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಇದು ರಾಜಕೀಯ ಹೋರಾಟವಲ್ಲ. ನಮ್ಮ ರಾಜ್ಯದ ಪಾಲಿನ ಹಣವನ್ನು ಬಿಡುಗಡೆ ಮಾಡುವಂತೆ ಪ್ರತಿಭಟನೆ ನಡೆಸುತ್ತಿದ್ದೇವೆ. ನಾವು ಬಿಜೆಪಿ ವಿರುದ್ಧ ಪ್ರತಿಭಟನೆ ಮಾಡುತ್ತಿಲ್ಲ. ರಾಜ್ಯದ ಪರವಾಗಿ ಪ್ರತಿಭಟಿಸುತ್ತಿದ್ದೇವೆ ಎಂದರು.

ಕೇಂದ್ರ ಸರ್ಕಾರವು ಕರ್ನಾಟಕಕ್ಕೆ ತೆರಿಗೆ ಪಾಲಿನಲ್ಲಿ ತಾರತಮ್ಯ, ಅನುದಾನ ಹಂಚಿಕೆಯಲ್ಲಿ ಮೋಸ, ನೀರಾವರಿ ಯೋಜನೆಗಳಿಗೆ ಅನುಮತಿ ನಿರಾಕರಣೆ, ವಿಶೇಷ ಅನುದಾನಕ್ಕೆ ಅಡ್ಡಗಾಲು ಹಾಕಿ ಕನ್ನಡಿಗರ ಮೇಲೆ ಸಾಲು ಸಾಲು ದ್ರೋಹ ಎಸಗಿದೆ ಎಂದು ಟೀಕಿಸಿದರು.

ರಾಜ್ಯದ ಜನತೆ ನಮಗೆ ಕೊಟ್ಟ ಅವಕಾಶಕ್ಕೆ ನ್ಯಾಯ ಒದಗಿಸಬೇಕಾದುದ್ದು ನಮ್ಮ ಆದ್ಯ ಕರ್ತವ್ಯ. ಒಕ್ಕೂಟ ವ್ಯವಸ್ಥೆಯಲ್ಲಿ ಕೇಂದ್ರ ಸರ್ಕಾರ ನ್ಯಾಯ ಒದಗಿಸಿಕೊಡಲಿದೆ ಎಂದು ಇಲ್ಲಿಯವರೆಗೂ ತಾಳ್ಮೆಯಿಂದ ಕಾಯುತ್ತಿದ್ದೆವು. ಆದರೆ ನಮಗೆ ಬರಬೇಕಾದ 1 ಲಕ್ಷ 87 ಸಾವಿರ ಕೋಟಿ ರೂಪಾಯಿ ತೆರಿಗೆ ಪಾಲನ್ನು ಕೊಡಬೇಕು ಎಂದು ಒತ್ತಾಯಿಸಿದರು.

ಭದ್ರಾ ಯೋಜನೆಗೆ 5,300 ಕೋಟಿ ಕೊಡುತ್ತೇವೆ ಎಂದು ಕಳೆದ ಸಾಲಿನ ಬಜೆಟ್ ನಲ್ಲಿ ಘೋಷಿಸಿದರು. ಆದರೆ ಈವರಗೆ ಒಂದು ರೂಪಾಯಿ ಕೂಡ ಬಿಡುಗಡೆ ಮಾಡಿಲ್ಲ. ಬರ ಪರಿಹಾರದ ಹಣವನ್ನೂ ನೀಡಿಲ್ಲ. ನರೇಗಾ ಅಡಿ 150 ಮಾನವ ದಿನಗಳಿಗೆ ಕೂಲಿ ಕೊಡಲು ಕೂಡ ಅನುಮತಿ ನೀಡಿಲ್ಲ. ಇಂಥ ಹಲವು ಕಾರಣಗಳಿಗಾಗಿ ಅನಿವಾರ್ಯವಾಗಿ ಪ್ರತಿಭಟನೆ ನಡೆಸಲಾಗುತ್ತಿದೆ ಎಂದು ತಿಳಿಸಿದರು.

ಕೇಂದ್ರ ಸರ್ಕಾರದ ತೆರಿಗೆ ಹಣವೆಂದರೆ ರಾಜ್ಯಗಳಿಂದ ಬರುವ ತೆರಿಗೆ ಹಣ, ಸೆಸ್, ಪೆಟ್ರೋಲ್ ಡೀಸೆಲ್, ಸರ್ಚಾರ್ಜ್. ಇವುಗಳಿಂದ ಸಂಗ್ರಹವಾಗುವ ಹಣವನ್ನು ಕೇಂದ್ರ ಮತ್ತು ರಾಜ್ಯಗಳಿಗೆ ಹಂಚಿಕೆಯಾಗಬೇಕೆಂದು ಹಣಕಾಸು ಆಯೋಗ ರಚನೆಯಾಗಿದೆ.ಇಲ್ಲಿಯವರೆಗೆ 15 ಹಣಕಾಸು ಆಯೋಗಗಳು ಆಗಿವೆ. ಪ್ರಸ್ತುತ 16ನೇ ಹಣಕಾಸು ಆಯೋಗ ರಚನೆಯಾಗಿದ್ದು, ಅಧ್ಯಕ್ಷರ ನೇಮಕವಾಗಿದೆ ಎಂದು ಹೇಳಿದರು.

14ನೇ ಹಣಕಾಸು ಆಯೋಗದಲ್ಲಿ ರಾಜ್ಯದ ತೆರಿಗೆಯ ಪಾಲು ಶೇಕಡ 4.71ರಷ್ಟು ಇದ್ದದ್ದು, 15ನೇ ಹಣಕಾಸು ಆಯೋಗದಲ್ಲಿ 3.64% ಗೆ ಇಳಿಕೆಯಾಗಿದೆ. ಅಂದರೆ ಶೇಕಡ 1.07% ಕಡಿಮೆಯಾಗಿದೆ. ಅದರಿಂದ 4 ವರ್ಷಗಳಲ್ಲಿ 45,000 ಕೋಟಿ ರೂ. ರಾಜ್ಯಕ್ಕೆ ಕಡಿತ ಆಯಿತು. ಇದು ಕೇವಲ ನಗದು ಹಂಚಿಕೆಯೊಂದರಲ್ಲೇ ಆಗಿರುವ ಅನ್ಯಾಯ. ಅಂದಾಜಿನ ಪ್ರಕಾರ ಈ ವರ್ಷ ನಗದು ಹಂಚಿಕೆಯಲ್ಲಿ 62,098 ಕೋಟಿ ರೂ.ಗಳು ಕರ್ನಾಟಕಕ್ಕೆ ಕಡಿಮೆಯಾಗಲಿದೆ ಎಂದು ತಿಳಿಸಿದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular