ನಿಗಮ ಮಂಡಳಿಗಳಿಗೆ ಅಧ್ಯಕ್ಷರ ನೇಮಕಾತಿಯಲ್ಲಿ ತನ್ನ ಬೆಂಬಲಿಗರಿಗೆ ಅವಕಾಶ ನೀಡಿಲ್ಲ ಎಂದು ಕಾಂಗ್ರೆಸ್ ನಾಯಕರ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಎಸ್.ಟಿ.ಶ್ರೀನಿವಾಸ್ ಅವರನ್ನು ಮನವೊಲಿಸುವಲ್ಲಿ ತುಮಕೂರು ಜಿಲ್ಲಾ ಕಾಂಗ್ರೆಸ್ ಮುಖಂಡರು ಯಶಸ್ವಿಯಾಗಿದ್ದಾರೆ.
ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಿಗೆ ತಮ್ಮ ರಾಜೀನಾಮೆ ನೀಡಲು ಮುಂದಾಗುತ್ತಿದ್ದಂತೆಯೇ ಎಚ್ಚೆತ್ತ ಜಿಲ್ಲಾ ಅಧ್ಯಕ್ಷ ಚಂದ್ರಶೇಖರ ಗೌಡ, ಲೋಕಸಭಾ ಸಂಸದ ಅಭ್ಯರ್ಥಿ ಆಕಾಂಕ್ಷಿ ಮುರಳೀಧರ ಹಾಲಪ್ಪ, ಹಿರಿಯ ಕಾಂಗ್ರೆಸ್ ಮುಖಂಡರಾದ ಅತೀಖ್ ಅಹಮ್ಮದ್, ಕೆಪಿಸಿಸಿ ಚುನಾವಣಾ ವೀಕ್ಷಕರು ಸೇರಿದಂತೆ ಕಾಂಗ್ರೆಸ್ ಮುಖಂಡರು ಎಸ್.ಟಿ.ಶ್ರೀನಿವಾಸ್ ಅವರೊಂದಿಗೆ ಪಕ್ಷದ ಕಚೇರಿಯಲ್ಲಿ ಚರ್ಚೆ ಮಾಡಿ ಒಂದು ವಾರಗಳ ಕಾಲವಕಾಶವನ್ನು ನಮಗೆ ನೀಡಿ ನಿಮ್ಮ ಸಮಸ್ಯೆ ಬಗೆಹರಿಸುವುದಾಗಿ ಆಶ್ವಾಸನೆ ನೀಡಿದ ಮೇರೆಗೆ ರಾಜಿನಾಮೆಯಿಂದ ಹಿಂದೆ ಸರಿದರು.
ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿರುವ ಎಸ್.ಟಿ.ಶ್ರೀನಿವಾಸ್, ಕಾಂಗ್ರೆಸ್ ಪಕ್ಷದ ಗೆಲುವಿಗೆ ಜಿಲ್ಲೆ, ತಾಲೂಕು, ಹೋಬಳಿ ಸೇರಿದಂತೆ ಬೂತ್ ಮಟ್ಟದ ಕಾರ್ಯಕರ್ತರ ಅಪಾರವಾದ ಶ್ರಮವಿದೆ. ಈ ಹಿನ್ನೆಲೆಯಲ್ಲಿ ತುಮಕೂರು ಗ್ರಾಮಾಂತರದಲ್ಲಿ ಕಾಂಗ್ರೆಸ್ ಪಕ್ಷವನ್ನು ಮುಂಚೂಣಿಗೆ ತರುವಲ್ಲಿ ಅನೇಕ ಕಾರ್ಯಕರ್ತರು ಶ್ರಮಿಸಿದ್ದಾರೆ ಎಂದು ಹೇಳಿದ್ದಾರೆ.
ತುಮಕೂರು ಗ್ರಾಮಾಂತರದಲ್ಲಿ ಹಲವಾರು ಕಾರ್ಯಕರ್ತರನ್ನ ಸಂಘಟಿಸಿ ಜಿಲ್ಲಾ ಕಾಂಗ್ರೆಸ್ ಪಕ್ಷದಲ್ಲಿ ಸೂಕ್ತ ಸ್ಥಾನಮಾನ ಕೊಡಿಸುವುದಾಗಿ ಭರವಸೆಯನ್ನು ನಾನು ನೀಡಿಕೊಂಡು ಬಂದಿದ್ದೆ, ಅದರಂತೆ ನನ್ನ ಅಪಾರ ಕಾರ್ಯಕರ್ತರು ಸಹ ಒಂದೊಳ್ಳೆ ಕೆಲಸವನ್ನು ಮಾಡಿದ್ದಾರೆ ಎಂದು ತಿಳಿಸಿದ್ದಾರೆ.
ಆದರೆ ಇತ್ತೀಚಿಗೆ ಬದಲಾದ ರಾಜಕೀಯ ಸನ್ನಿವೇಶಗಳಿಂದ ಹಲವಾರು ವರ್ಷಗಳಿಂದ ಕಾಂಗ್ರೆಸ್ ಪಕ್ಷದಲ್ಲಿ ಕೆಲಸ ಮಾಡಿಕೊಂಡು ಬಂದಿರುವ ನನ್ನಂತಹ ಹಲವು ಮಂದಿ ನಿಷ್ಠಾವಂತ ಕಾರ್ಯಕರ್ತರುಗಳಿಗೆ ತೀವ್ರ ಅನ್ಯಾಯವಾಗಿದೆಂದು ತಮ್ಮ ಬೇಸರವನ್ನು ವ್ಯಕ್ತಪಡಿಸಿದರಲ್ಲದೆ ಇತ್ತೀಚೆಗೆ ಪಕ್ಷಕ್ಕೆ ವಲಸೆ ಬಂದವರಿಗೆ ಮಾತ್ರ ಮಣೆಯನ್ನು ಹಾಕುತ್ತಿರುವುದು ನಮಗೆ ಬೇಸರ ಮೂಡಿಸಿದೆ ಎಂದು ಆರೋಪಿಸಿದ್ದಾರೆ.
ನನ್ನ ನೋವನ್ನು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರು ಸೇರಿದಂತೆ ಹಿರಿಯ ನಾಯಕರೊಂದಿಗೆ ಮಾತನಾಡಿದ್ದೇನೆ, ನಾನು ಮೂಲ ಕಾಂಗ್ರೆಸಿಗ ಹಾಗೂ ಪಕ್ಷಕ್ಕಾಗಿ ಸತತ ಹತ್ತಾರು ವರ್ಷಗಳಿಂದ ಕೆಲಸ ಮಾಡಿರುವವರ ಪಟ್ಟಿಯೊಂದನ್ನು ನೀಡಿದ್ದೇನೆ, ಅದನ್ನು ಶಿಫಾರಸ್ಸು ಮಾಡಿ ಅವರುಗಳಿಗೆ ಸೂಕ್ತ ಸ್ಥಾನಮಾನ ಕಲ್ಪಿಸಿಕೊಡುವಂತೆ ಮನವಿ ಮಾಡಿದ್ದೇನೆ. ಮುಂದಿನ ಒಂದು ವಾರದೊಳಗೆ ಈಡೇರಿಸುವುದಾಗಿ ಭರವಸೆಯನ್ನು ನೀಡಿದ್ದಾರೆ, ನೀಡಿರುವ ಭರವಸೆಯನ್ನು ಈಡೇರಿಸದಿದ್ದರೆ ನಾನು ಸೇರಿದಂತೆ ಹಲವಾರು ನನ್ನ ಕಾರ್ಯಕರ್ತರು ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆಯನ್ನು ನೀಡುವುದು ಶತಃ ಸಿದ್ಧ ಎಂದು ಹೇಳಿದರು.


