ಮಂಗಳವಾರ ರಾತ್ರಿ ಮತ್ತು ಬುಧವಾರ ಬೆಳಗ್ಗೆ ಸುರಿದ ಭಾರೀ ಮಳೆಗೆ ತುಮಕೂರು ಅಮಾನೀಕೆರೆ ಕೋಡಿ ಬಿದ್ದು ನೀರು ಹರಿಯುತ್ತಿದೆ. ಹಲವು ವರ್ಷಗಳ ಬಳಿಕ ಅಮಾನಿಕೆರೆ ಕೋಡಿ ಬಿದ್ದಿರುವುದು ನಗರ ಜನತೆ ಸಂತಸಗೊಳ್ಳುವಂತೆ ಮಾಡಿದೆ.
ಕೆರೆ ಕೋಡಿ ಬಿದ್ದಿರುವ ಹಿನ್ನೆಲೆಯಲ್ಲಿ ಸೇತುವೆ ನಿರ್ಮಾಣದ ಬಳಿ ವ್ಯವಸ್ಥೆ ಮಾಡಿದ್ದ ರಸ್ತೆಯಲ್ಲಿ ವಾಹನ ಸಂಚಾರವನ್ನು ನಿರ್ಬಂಧಿಸಲಾಗಿದೆ.
ಅಮಾನಿಕೆರೆಯ ಕೋಡಿ ಹಿಂಭಾಗದಲ್ಲಿರುವ ಮನೆಗಳಿಗೆ ನೀರು ನುಗ್ಗಿದ್ದು ಸ್ಥಳೀಯ ನಿವಾಸಿಗಳು ಪರದಾಡುವಂತೆ ಆಗಿದೆ. ಈ ಹಿನ್ನೆಲೆಯಲ್ಲಿ ಅಲ್ಲಿನ ನಿವಾಸಿಗಳನ್ನು ಬೇರೆಡೆ ಸ್ಥಳಾಂತರ ಮಾಡಲು ತುಮಕೂರು ಮಹಾನಗರ ಪಾಲಿಕೆ ಅಧಿಕಾರಿಗಳು ಮತ್ತು ಸಿಬ್ಬಂದಿ ಕ್ರಮ ಕೈಗೊಂಡಿದ್ದಾರೆ.
ವ್ಯಾಪಕ ಮಳೆ ಸುರಿದ ಹಿನ್ನೆಲೆಯಲ್ಲಿ ತುಮಕೂರು ತಾಲ್ಲೂಕು ಚಿಕ್ಕಸಾರಂಗಿಯಲ್ಲಿ ರಾಗಿ ಬೆಳೆಯ ತಾಕುಗಳು ಮತ್ತು ತೋಟಗಳು ಜಲಾವೃತಗೊಂಡಿವೆ. ರೈತರು ಸಂಕಟಪಡುವಂತಾಗಿದೆ.
ಇನ್ನೊಂದೆಡೆ ತುಮಕೂರು ಜಿಲ್ಲೆಯ ಕೊರಟಗೆರೆ ತಾಲ್ಲೂಕಿನಲ್ಲಿ ಮಂಗಳವಾರ ರಾತ್ರಿ ಮತ್ತು ಬುಧವಾರ ಸುರಿದ ಭಾರೀ ಮಳೆಯಿಂದ 25ಕ್ಕೂ ಹೆಚ್ಚು ಕೆರೆಗಳು ತುಂಬಿ ಕೋಡಿ ಬಿದ್ದಿವೆ.
ಭಾರೀ ಮಳೆ ಸುರಿದ ಹಿನ್ನೆಲೆಯಲ್ಲಿ ಕೊರಟಗೆರೆ ತಾಲ್ಲೂಕಿನಲ್ಲಿ ಹರಿಯುವ ಸುವರ್ಣಮುಖಿ ಮತ್ತು ಮಧುಗಿರಿ ತಾಲ್ಲೂಕಿನಲ್ಲಿ ಹರಿಯುವ ಜಯಮಂಗಲಿ ನದಿಗಳು ತುಂಬಿ ಹರಿಯುತ್ತಿದ್ದು ಅಪಾಯ ಮಟ್ಟವನ್ನು ಮೀರಿ ಹರಿಯುತ್ತಿವೆ. ಈ ಹಿನ್ನೆಲೆಯಲ್ಲಿ ನದಿ ಪಾತ್ರಕ್ಕೆ ತೆರಳದಂತೆ ಜಿಲ್ಲಾಡಳಿತ ಸ್ಥಳೀಯ ವಾಸಿಗಳಿಗೆ ಸೂಚನೆ ನಿಡಿದೆ.
ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ಜಯಮಂಗಲಿ ನದಿಯ ಹತ್ತಿರ ಜಿಲ್ಲಾಧಿಕಾರಿ ಶುಭ ಕಲ್ಯಾಣ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಭೇಟಿ ನೀಡಿದ್ದಾರೆ.
ತುಮಕೂರು ಜಿಲ್ಲೆ ಗುಬ್ಬಿ ಪಟ್ಟಣದ ರೈಲ್ವೆ ಅಂಡರ್ಪಾಸ್ನಲ್ಲಿ ಮಳೆ ನೀರು ನಿಂತು ಕೆಎಸ್ಸಾರ್ಟಿಸಿ ಬಸ್ ಚಲಿಸಲಾಗದೆ ನಿಂತಿದ್ದರಿಂದ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಹಗ್ಗದ ಸಹಾಯದಿಂದ ಬಸ್ನಲ್ಲಿದ್ದ ಪ್ರಯಾಣಿಕರನ್ನು ಹೊರಗೆ ಕರೆ ತಂದಿದ್ದಾರೆ.