ರಾಜ್ಯದಲ್ಲಿನ ಸರ್ಕಾರಿ, ಅನುದಾನಿತ ಮತ್ತು ಅನುದಾನರಹಿತ ಪ್ರೌಢ ಶಾಲೆಗಳಲ್ಲಿ 9 ಮತ್ತು 10 ನೇ ತರಗತಿ ವಿದ್ಯಾರ್ಥಿಗಳಿಗೆ ಶಾಲೆಗಳನ್ನು ಪೂರ್ಣ ಪ್ರಮಾಣದಲ್ಲಿ ಪ್ರಾರಂಭಿಸಿ ಬೋಧನ ತರಗತಿಗಳನ್ನು ನಡೆಸಲು ಸಾರ್ವಜನಿಕ ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿದೆ.
ಆಗಸ್ಟ್ 23 ರಿಂದ ತರಗತಿಗಳು ಆರಂಭವಾಗಲಿದ್ದು ಶಾಲೆಗೆ ಹಾಜರಾಗುವ ವಿದ್ಯಾರ್ಥಿಗಳು ಪೋಷಕರಿಂದ ಅನುಮತಿ ಪತ್ರ ತರುವುದು ಕಡ್ಡಾಯಗೊಳಿಸಲಾಗಿದೆ. ಅನುಮತಿ ಪತ್ರದಲ್ಲಿ ಮಗುವಿಗೆ ಕೋವಿಡ್ ಲಕ್ಷಣಗಳಿರುವುದಿಲ್ಲ ಎಂದು ದೃಢೀಕರಿಸಿರಬೇಕು.
9 ಮತ್ತು 10ನೇ ತರಗತಿ ವಿದ್ಯಾರ್ಥಿಗಳು ಮನೆಯಿಂದಲೇ ಅಗತ್ಯವಾದ ಕುಡಿಯುವ ನೀರು ಮತ್ತು ಉಪಾಹಾರವನ್ನು ತರಬೇಕು ಎಂದು ಸುತ್ತೋಲೆಯಲ್ಲಿ ತಿಳಿಸಲಾಗಿದೆ. ಅವಶ್ಯಕತೆಗೆ ಅನುಸಾರ ಶಾಲೆಗಳಲ್ಲೂ ಮಕ್ಕಳಿಗೆ ಕುಡಿಯುವ ಶುದ್ದ ಬಿಸಿನೀರು ವ್ಯವಸ್ಥೆ ಮಾಡಬೇಕು ಎಂದು ಹೇಳಿದೆ.
ಶಾಲೆಗಳಲ್ಲಿ ವಿದ್ಯಾರ್ಥಿಗಳು ಭೌತಿಕ ತರಗತಿಗೆ ಹಾಜರಾಗುವುದು ಕಡ್ಡಾಯವಲ್ಲ. ತರಗತಿಗೆ ಹಾಜರಾಗದೇ ಇರುವ ವಿದ್ಯಾರ್ಥಿಗಳು ಆನ್ ಲೈನ್ ನಲ್ಲಿ ಬೋಧನೆ ಕೇಳಬಹುದು. ಆನ್ ಲೈನ್ ತರಗತಿಗಳಲ್ಲಿ ಹಾಜರಾಗಿ ಅಗತ್ಯ ಮಾಹಿತಿಯನ್ನು ಪಡೆಯಬಹುದು.
ಕೊಠಡಿಗಳ ಲಭ್ಯತೆ, ವಿದ್ಯಾರ್ಥಿಗಳ ಸಂಖ್ಯೆ ಮತ್ತು ಶಿಕ್ಷಕರ ಸಂಖ್ಯೆಯನ್ನು ಆಧರಿಸಿ ವೇಳಾಪಟ್ಟಿಯನ್ನು ತಯಾರಿಸಲಾಗಿದೆ. 9-10ನೇ ತರಗತಿಗಳಲ್ಲಿ 15-20 ಮಂದಿ ವಿದ್ಯಾರ್ಥಿಗಳನ್ನು ಗುಂಪುಗಳನ್ನಾಗಿ ರಚಿಸಿ ಬೋಧನೆ ಮಾಡಬೇಕು ಎಂದು ಸುತ್ತೋಲೆಯಲ್ಲಿ ತಿಳಿಸಿದೆ.
ಮಧ್ಯಾಹ್ನದ ಊಟದ ವಿರಾಮದ ಬಳಿಕ ಶಿಕ್ಷಕರು 8 ತರಗತಿ ವಿದ್ಯಾರ್ಥಿಗಳಿಗೆ ಕಲಿಕೆ ಪ್ರಕ್ರಿಯೆಯಲ್ಲಿ ತೊಡಗುವಂತೆ ಸಿದ್ದತೆ ಮಾಡಿಕೊಳ್ಳಬೇಕು ಎಂದು ಹೇಳಿದ್ದು 1 ರಿಂದ 10ನೇ ತರಗತಿ ವಿದ್ಯಾರ್ಥಿಗಳಿಗೆ ಶಾಲೆಗಳನ್ನು ಪರಿಸ್ಥಿತಿ ನೋಡಿಕೊಂಡು ಆರಂಭಿಸುವ ಚಿಂತನೆ ನಡೆಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.