ಇಂದು ಸಾಮಾಜಿಕ ಜಾಲತಾಣಗಳಲ್ಲಿ ಕನ್ನಡ, ಕನ್ನಡಿಗರನ್ನು ಹಿಯ್ಯಾಳಿಸುವ ಪ್ರವೃತ್ತಿಯು ಕಂಡುಬರುತ್ತಿದೆ. ಇದು ನಾಡದ್ರೋಹ ಎಂದು ಪರಿಗಣಿಸಿ, ಅಂತಹ ಕಿಡಿಗೇಡಿಗಳ ವಿರುದ್ಧ ಸರ್ಕಾರ ಕಠಿಣ ಕ್ರಮಗಳನ್ನು ಕೈಗೊಳ್ಳಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ ನೀಡಿದರು.
ಬೆಂಗಳೂರಿನ ಕಂಠೀರವ ಹೊರಾಂಗಣ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ 69 ನೇ ಕರ್ನಾಟಕ ರಾಜ್ಯೋತ್ಸವ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಭಾಷೆಯನ್ನು ಬೆಳೆಸಿ ಉಳಿಸಲು ಮೊದಲು ನಾವು ಕನ್ನಡಿಗರಾಗಿ, ಕನ್ನಡೇತರರಿಗೆ ಕನ್ನಡವನ್ನು ಕಲಿಸಲು ಪ್ರಯತ್ನಿಸುವ ಮೂಲಕ ಕನ್ನಡ ವಾತಾವರಣವನ್ನು ನಿರ್ಮಿಸಬೇಕು ಎಂದು ಹೇಳಿದರು.
ಮಾತೃಭಾಷೆ ಕನ್ನಡವನ್ನು ವ್ಯವಹಾರಿಕವಾಗಿ ಬಳಸುವ ಜೊತೆಗೆ, ಇತರರೊಂದಿಗೆ ಕನ್ನಡದಲ್ಲಿಯೇ ಮಾತನಾಡುವಂತೆ ಶಪಥ ಮಾಡಬೇಕು. ಕನ್ನಡೇತರರಿಗೆ ಕನ್ನಡವನ್ನು ಕಲಿಸಲು ಪ್ರಯತ್ನಿಸಬೇಕು. ಕನ್ನಡ ರಾಜ್ಯದ ಅನ್ನ, ನೀರು, ಗಾಳಿ ಸೇವಿಸಿದ ಮೇಲೆ, ಯಾವುದೇ ಜಾತಿ, ಧರ್ಮ, ಭಾಷೆಯವರೂ ಕೂಡ ಕನ್ನಡಿಗರೇ ಆಗುತ್ತಾರೆ ಎಂದರು.
ಕನ್ನಡ ಭಾಷೆಗೆ ಎರಡು ಸಾವಿರ ಇತಿಹಾಸವಿದ್ದು, ಬಹಳ ಪ್ರಾಚೀನ ಭಾಷೆಯಾಗಿದೆ. ಆದ್ದರಿಂದ ಕನ್ನಡಕ್ಕೆ ಶಾಸ್ತ್ರೀಯ ಭಾಷೆಯ ಸ್ಥಾನಮಾನ ದೊರೆತಿದೆ. ಭಾಷೆಯನ್ನು ಬಲಿಕೊಟ್ಟು ಉದಾರಿಗಳಾಗಬಾರದು. ಭಾಷೆಯ ಬಗ್ಗೆ ದುರಾಭಿಮಾನ ಬೆಳೆಸಿಕೊಳ್ಳದೇ, ಅಭಿಮಾನಗಳಾಗಬೇಕು. ಭಾಷೆಯನ್ನು ಬೆಳೆಸಿ ಉಳಿಸಲು ಮೊದಲು ಕನ್ನಡಿಗರಾಗಬೇಕು. ಬೇರೆ ಭಾಷೆಯನ್ನು ಕಲಿಯಬೇಡಿ ಎಂದು ಹೇಳುವುದಿಲ್ಲ. ಬೇರೆ ಭಾಷಾ ಸಂಪತ್ತನ್ನು ಬೆಳೆಸಿಕೊಳ್ಳಿ, ಆದರೆ ಕನ್ನಡದಲ್ಲಿ ಮಾತನಾಡುವುದನ್ನು ಮರೆಯಬೇಡಿ. ಮಾತೃಭಾಷೆಯಲ್ಲಿ ಶಿಕ್ಷಣ ಪಡೆಯುವುದು ಉತ್ತಮವಾದುದು ಎಂದು ಮಹಾತ್ಮಾ ಗಾಂಧೀಯವರು ಹೇಳಿದ್ದಾರೆ ಎಂದು ತಿಳಿಸಿದರು.
ಕೇಂದ್ರದ ವಿರುದ್ಧ ವಾಗ್ದಾಳಿ
ಕರ್ನಾಟಕ ರಾಜ್ಯ, ದೇಶದಲ್ಲಿ ಅತಿ ಹೆಚ್ಚು ತೆರಿಗೆ ನೀಡುವ ಎರಡನೇ ರಾಜ್ಯವಾಗಿದೆ. 4 ಲಕ್ಷ ಕೋಟಿಗೂ ಹೆಚ್ಚು ತೆರಿಗೆ ನೀಡಿದರೂ, ಕೇಂದ್ರದಿಂದ ದೊರೆಯುವ ತೆರಿಗೆ ಪಾಲು ಕೇವಲ 50-60 ಸಾವಿರ ಕೋಟಿ ಮಾತ್ರ. ಕನ್ನಡ ನಾಡು ಮುಂದುವರೆದಿದೆ ಎಂದು ಕೇಂದ್ರ ಸರ್ಕಾರ ನಮಗೆ ಅನ್ಯಾಯವೆಸಗಬಾರದು ಎಂದು ಹೇಳಿದರು.
ರಾಜ್ಯಕ್ಕೆ ಬರಬೇಕಾದ ನ್ಯಾಯಯುತ ತೆರಿಗೆ ಪಾಲನ್ನು ನೀಡಿ ಎಂದು ಕೇಂದ್ರಕ್ಕೆ ನಮ್ಮ ಬೇಡಿಕೆಗೆ ರಾಜಕೀಯ ಬಣ್ಣವನ್ನು ಬಳಿಯಲಾಗುತ್ತಿದೆ. ನಮ್ಮ ಹಕ್ಕಿಗೆ ಹೋರಾಡಬೇಕಾಗಿದೆ. ರಾಜ್ಯದ ಸಂಸದರು ಕೇಂದ್ರಕ್ಕೆ ಹೋಗಿದ್ದು, ಕೇಂದ್ರದಲ್ಲಿ ಕನ್ನಡಪರ ಧ್ವನಿ ಎತ್ತಬೇಕು. ಈ ಶಕ್ತಿಯನ್ನು ಆಯ್ಕೆಯಾಗಿ ಹೋದವರು ಬೆಳೆಸಿಕೊಂಡರೆ ರಾಜ್ಯಕ್ಕೆ ನ್ಯಾಯ ದೊರೆಯುತ್ತದೆ. ಕೇಂದ್ರದ ಅನ್ಯಾಯದ ನಡುವೆಯೂ, ಕರ್ನಾಟಕದ ಅಭಿವೃದ್ಧಿಗೆ ನಮ್ಮ ಸರ್ಕಾರ ಪ್ರಾಮಾಣಿಕ ಪ್ರಯತ್ನ ಮಾಡುತ್ತಿದೆ ಎಂದರು.
ರಾಜ್ಯದಲ್ಲಿ ಪ್ರತಿ ದಿನ 57 ಲಕ್ಷ ಶಾಲಾ ಮಕ್ಕಳಿಗೆ ವಾರದ ಆರೂ ದಿನಗಳು ಮೊಟ್ಟೆ ಹಾಗೂ ಚಿಕ್ಕಿಯನ್ನು ನೀಡಲಾಗುತ್ತಿದೆ. ಮಕ್ಕಳಿಗೆ ಹಾಲಿನ ಜೊತೆ ಸಾಯಿ ಅನ್ನಪೂರ್ಣ ಅವರ ಸಹಯೋಗದೊಂದಿಗೆ ರಾಗಿಮಾಲ್ಟನ್ನೂ ನೀಡಲಾಗುತ್ತಿದೆ. ಬಡವರ ಮಕ್ಕಳು ಅಪೌಷ್ಟಿಕತೆಯಿಂದ ಬಳಲಬಾರದು, ಗುಣಮಟ್ಟದ ಶಿಕ್ಷಣ ದೊರೆಯಬೇಕೆಂಬುದು ಸರ್ಕಾರದ ಉದ್ದೇಶ. ಇಂದು ಕನ್ನಡ ದೀವಿಗೆ ಪುಸ್ತಕವನ್ನು ಅತ್ಯಂತ ಸಂತೋಷದಿಂದ ಬಿಡುಗಡೆ ಮಾಡಲಾಗಿದೆ.


