ಸಮಾಜದಲ್ಲಿ ಜಾತಿ, ಧರ್ಮಗಳ ಸಂಕೋಲೆಗಳಿಂದ ಮುಕ್ತರಾಗಿ ಸಂವಿಧಾನದ ಮೂಲಕ ಮನುಷ್ಯರು ಮನುಷ್ಯರಾಗಿ ಬದುಕಲು ಅವಕಾಶ ಕಲ್ಪಿಸಿದ ವಿಶ್ವ ಮಾನವತಾವಾದಿ ಡಾ. ಬಿ.ಆರ್. ಅಂಬೇಡ್ಕರ್ ಅವರು ನವ ಭಾರತದ ನಿರ್ಮಾಣಕ್ಕೆ ಶ್ರಮಿಸಿದವರಲ್ಲಿ ಅಗ್ರ ಪಂಕ್ತಿಯಲ್ಲಿ ನಿಲ್ಲುತ್ತಾರೆ ಎಂದು ಎಡಿಸಿ ಡಾ, ಎನ್. ತಿಪ್ಪೇಸ್ವಾಮಿ ತಿಳಿಸಿದ್ದಾರೆ.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಹಯೋಗದಲ್ಲಿ ತುಮಕೂರು ನಗರದ ಎಂಪ್ರೆಸ್ ಶಾಲಾ ಆವರಣದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಭಾರತ ಸಂವಿಧಾನ ದಿನಾಚರಣೆ ಹಾಗೂ ವಿಶೇಷ ಉಪನ್ಯಾಸ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ದೇಶದಲ್ಲಿ ಅಸ್ಪೃಶ್ಯತೆಯೆಂಬ ಸಾಮಾಜಿಕ ಪಿಡುಗಿನಿಂದ ಜಡ್ಡುಗಟ್ಟಿದ ಸಮಾಜವನ್ನು ಪುನರ್ ನಿರ್ಮಾಣ ಮಾಡಲು ಸಮಾಜ ಸುಧಾರಕರಾಗಿ, ಅರ್ಥಶಾಸ್ತçಜ್ಞರಾಗಿ ಅಂಬೇಡ್ಕರ್ ಅವರು ತೊಡಗಿಸಿಕೊಂಡಿದ್ದನ್ನು ಯಾರೂ ಅಲ್ಲಗಳೆಯುವಂತಿಲ್ಲ. ಜಗತ್ತಿನಲ್ಲಿಯೇ ಅತ್ಯಂತ ಶ್ರೇಷ್ಠ ಸಂವಿಧಾನವನ್ನು ರಚಿಸಿ ಎಲ್ಲರ ಮನಸ್ಸಿನಲ್ಲಿ ಉಳಿಯುವಂತಹ ಕೆಲಸ ಮಾಡಿದ್ದಾರೆ ಎಂದು ತಿಳಿಸಿದರು.
ಅಂಬೇಡ್ಕರ್ ಅವರ ತತ್ವಾದರ್ಶಗಳು ಸಮಾಜದ ಶೋಷಿತರು, ದಮನಿತರು, ದೀನ-ದಲಿತರ ಪರವಾಗಿ ಚಿಂತಿಸುವಂತೆ ಮಾಡಿದವು. ದೇಶದ ಜನತೆ ಸಮಾನತೆಯಿಂದ ಬದುಕಲು ಮಾರ್ಗ ತೋರಿದ ಭಾರತ ಸಂವಿಧಾನದ ಪಿತಾಮಹರೆಂದೆಸಿಕೊಂಡಿರುವ ಅಂಬೇಡ್ಕರರ ಅಸ್ಪೃಶ್ಯತೆ ವಿರುದ್ಧದ ಹೋರಾಟವು ತಮ್ಮ ಮೂಲಭೂತ ಹಕ್ಕುಗಳ ಬಗ್ಗೆ ಪ್ರಶ್ನಿಸಲು ಬಡವರು, ಹಿಂದುಳಿದ ವರ್ಗಗಳಿಗೆ ಶಕ್ತಿ ನೀಡಿತು ಎಂದು ತಿಳಿಸಿದರು.
ಅನ್ಯ ದೇಶಗಳ ಭಾಷೆ, ಧರ್ಮ, ಸಂವಿಧಾನವನ್ನು ಅಧ್ಯಯನ ಮಾಡಿ ಭಾರತ ಸಂವಿಧಾನ ರಚಿಸಿ ದೇಶಕ್ಕೆ ಕೊಡುಗೆ ನೀಡಿದ್ದಾರೆ. ಆಳುವ ವರ್ಗ, ಪರಕೀಯರ ಕಪಿಮುಷ್ಟಿಯಲ್ಲಿದ್ದ ಅಧಿಕಾರ, ಸಂಪತ್ತು, ನ್ಯಾಯವನ್ನು ಪ್ರತಿಯೊಬ್ಬರಿಗೂ ದಕ್ಕುವಂತೆ ಈ ಸಂವಿಧಾನ ಅವಕಾಶ ಕಲ್ಪಿಸಿದೆ. ಸಂವಿಧಾನ ನಮಗೆ ನೀಡಿದ ಹಕ್ಕು ಮತ್ತು ಸ್ವಾತಂತ್ರö್ಯವನ್ನು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಎಸಿ ಗೌರವ್ ಕುಮಾರ್ ಶೆಟ್ಟಿ, ತಹಶೀಲ್ದಾರ್ ರಾಜೇಶ್ವರಿ, ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಕೃಷ್ಣಪ್ಪ, ಪರಿಶಿಷ್ಟ ವರ್ಗಗಳ ಕಲ್ಯಾಣ ಅಧಿಕಾರಿ ತ್ಯಾಗರಾಜು, ಜಿಲ್ಲಾ ಅಲ್ಪಸಂಖ್ಯಾತ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಶಬ್ಬೀರ್ ಅಹಮ್ಮದ್, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಜಂಟಿ ನಿರ್ದೇಶಕ ಮಂಟೇಸ್ವಾಮಿ, ಡಾ|| ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ಮಂಜುನಾಥ್, ಎಂಪ್ರೆಸ್ ಕಾಲೇಜಿನ ಪ್ರಾಂಶುಪಾಲ ಮಲ್ಲೇಶ್ ಸೇರಿದಂತೆ ಹಲವರು ಪಾಲ್ಗೊಂಡಿದ್ದರು.


