ಮಾಜಿ ಪ್ರಧಾನಿ ಹಾಗೂ ಆರ್ಥಿಕ ತಜ್ಞ ಡಾ.ಮನಮೋಹನ್ ಸಿಂಗ್ ಗುರುವಾರ ನಿಧನರಾಗಿದ್ದಾರೆ. ಅವರಿಗೆ 92 ವರ್ಷ ವಯಸ್ಸಾಗಿತ್ತು. ತೀವ್ರ ಉಸಿರಾಟ ಸಮಸ್ಯೆಯಿಂದ ಬಳಲುತ್ತಿದ್ದ ಸಿಂಗ್ ಅವರನ್ನು ದೆಹಲಿಯ ಏಮ್ಸ್ ನಲ್ಲಿ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದ ನಿಧನರಾಗಿದ್ದಾರೆ.
ಸಿಂಗ್ ಅವರು 2004 ರಿಂದ 2014ರವರೆಗೆ ದೇಶದ ಪ್ರಧಾನಿಯಾಗಿ ಕಾರ್ಯನಿರ್ವಹಿಸಿದ್ದರು. ಈ ಹಿಂದೆ ಕೋವಿಡ್ ಗೂ ಒಳಗಾಗಿದ್ದ ಸಿಂಗ್ ಹಲವು ಬಾರಿ ಅನಾರೋಗ್ಯಕ್ಕೆ ಒಳಗಾಗಿ ಚಿಕಿತ್ಸೆ ಪಡೆಯುತ್ತಿದ್ದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಸಂತಾಪ
ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ನಿಧನದಿಂದ ದುಃಖಿತನಾಗಿದ್ದೇನೆ. ಅಪಾರ ಜ್ಞಾನ, ದೂರದೃಷ್ಟಿಯ ಆಲೋಚನೆ ಹಾಗೂ ಸಮರ್ಥ ನಾಯಕತ್ವವು ಭಾರತದ ನೆಲದಲ್ಲಿ ಅವರನ್ನು ಅಮರವಾಗಿಸಲಿದೆ ಎಂದು ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಸಂತಾಪ ವ್ಯಕ್ತಪಡಿಸಿದ್ದಾರೆ.
ಮನಮೋಹನ್ ಸಿಂಗ್ ಅವರು ಪ್ರಧಾನಿಯಾಗಿದ್ದಾಗ ನಾನು ಮೊದಲ ಬಾರಿಗೆ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಿದ್ದೆ. ಈ ಸಂದರ್ಭದಲ್ಲಿ ನಮ್ಮ ಸರ್ಕಾರದ ಯೋಜನೆಗಳಿಗೆ ಅವರಿಂದ ದೊರೆತ ಮಾರ್ಗದರ್ಶನ ಹಾಗೂ ಬೆಂಬಲವನ್ನು ಸ್ಮರಿಸಲೇಬೇಕು. ಯುಪಿಎ ಸರ್ಕಾರದ ಆಹಾರ ಹಕ್ಕು ಕಾಯ್ದೆಯು ನಮ್ಮ ನಾಡಿನ ಪ್ರಗತಿಯ ಹಾದಿಗೆ ಹೊಸ ಆಯಾಮ ಕಲ್ಪಿಸಿಕೊಟ್ಟಿದೆ ಎಂದು ಬಣ್ಣಿಸಿದ್ದಾರೆ.
ಮಾತಿಗಿಂತ ಕೃತಿ ಲೇಸೆಂಬ ನುಡಿಗಟ್ಟಿಗೆ ಅನ್ವರ್ಥದಂತೆ ಬದುಕಿದ ಓರ್ವ ಮುತ್ಸದ್ದಿ ನಾಯಕನನ್ನು ಕಳೆದುಕೊಂಡ ಭಾರತವಿಂದು ಬಡವಾಗಿದೆ ಎಂದು ಹೇಳಿದ್ದಾರೆ.
ಮೃತರ ಅವರ ಆತ್ಮಕ್ಕೆ ಚಿರಶಾಂತಿ ದೊರಕಲಿ, ಅವರ ಕುಟುಂಬ ವರ್ಗ ಮತ್ತು ಕೋಟ್ಯಂತರ ಅಭಿಮಾನಿಗಳಿಗೆ ದುಃಖ ಭರಿಸುವ ಶಕ್ತಿ ಸಿಗಲಿ ಎಂದು ಅವರು ಭಗವಂತನಲ್ಲಿ ಪ್ರಾರ್ಥಿಸಿದ್ದಾರೆ.


