Thursday, January 29, 2026
Google search engine
Homeಮುಖಪುಟಜ.12ರೊಳಗೆ ಒಳಮೀಸಲಾತಿ ಜಾರಿಗೊಳಿಸದಿದ್ದರೆ ಹೋರಾಟ

ಜ.12ರೊಳಗೆ ಒಳಮೀಸಲಾತಿ ಜಾರಿಗೊಳಿಸದಿದ್ದರೆ ಹೋರಾಟ

ಬರುವ ಜನವರಿ 12ರೊಳಗೆ ರಾಜ್ಯ ಸರ್ಕಾರ ಪರಿಶಿಷ್ಟ ಜಾತಿಯ ಒಳಮೀಸಲಾತಿ ಜಾರಿ ಮಾಡಬೇಕು, ಇಲ್ಲವಾದಲ್ಲಿ ಸಮುದಾಯದ ಎಲ್ಲಾ ಸಂಘಟನೆಗಳ ಜೊತೆ ಸೇರಿ ಉಗ್ರ ಹೋರಾಟ ನಡೆಸುವುದಾಗಿ ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾದ ರಾಷ್ಟ್ರೀಯ ಅಧ್ಯಕ್ಷ ಹಾಗೂ ದಲಿತ ಸಂಘರ್ಷ ಸಮಿತಿ ರಾಜ್ಯಾಧ್ಯಕ್ಷ ಡಾ.ಎನ್.ಮೂರ್ತಿ ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.
ತುಮಕೂರಿಲ್ಲಿ ಮಾಧ್ಯಮಗೋಷ್ಟಿಯಲ್ಲಿ ಮಾತನಾಡಿದ ಅವರು, ಸ್ವಾತಂತ್ರ್ಯ ನಂತರ ಪರಿಶಿಷ್ಟ ಜಾತಿಗೆ ಕೊಡಮಾಡಿದ ಶೇಕಡ 15ರಷ್ಟು ಮೀಸಲಾತಿಯು ಪರಿಶಿಷ್ಟ 101 ಜಾತಿಗಳ ಮಧ್ಯೆ ಸಮನಾಗಿ ಹಂಚಿಕೆಯಾಗಿಲ್ಲ. ಹಾಗಾಗಿ ಉದ್ಯೋಗ, ಶಿಕ್ಷಣ ಸವಲತ್ತಿನಲ್ಲಿ ತುಂಬಾ ವಂಚನೆಗೊಳಗಾದ ಮಾದಿಗ ಹಾಗೂ ಮಾದಿಗ ಸಂಬಂಧಿತ ಜಾತಿಗಳಾದ ಡೋಹರು, ದಕ್ಕಲಿಗ, ಮೋಚಿ, ಭಂಗಿ, ಜಾಡುಮಾಲಿ, ಸಮಗಾರ ಇತರೆ ಜಾತಿಗಳು ಸಾಮಾಜಿಕವಾಗಿ, ಆರ್ಥಿಕವಾಗಿ ತೀರಾ ಹಿಂದುಳಿದಿವೆ. ಆ ಜಾತಿಯವರು ಬಡತನ, ನಿರುದ್ಯೋಗದಿಂದ ಬಳಲುತ್ತಿದ್ದಾರೆ ಎಂದರು.
ಸುಪ್ರೀಂ ಕೋರ್ಟ್ ಆದೇಶವನ್ನು ಮೂರು ತಿಂಗಳೊಳಗೆ ಅನುಷ್ಟಾನಗೊಳಿಸುವುದಾಗಿ ಹಾಗೂ ಒಳಮೀಸಲಾತಿ ಜಾರಿಯಾಗುವ ತನಕ ರಾಜ್ಯ ಸಿವಿಲ್ ಸೇವೆಗಳಲ್ಲಿನ ಮೀಸಲಾತಿ ಅನ್ವಯವಾಗುವ ವೃಂದ ಹುದ್ದೆಗಳಿಗೆ ನೇರ ನೇಮಕಾತಿ ಹಾಗೂ ಮುಂಬಡ್ತಿ ಮಾಡಲು ಅಧಿಸೂಚನೆ ಹೊರಡಿಸುವುದಿಲ್ಲ ಎಂದು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿತ್ತು. ಆದರೆ ಒಳಗೊಳಗೆ ನೇಮಕಾತಿ ನಡೆಯುತ್ತಿರುವುದು ಆತಂಕಕ್ಕೆ ಎಡೆಮಾಡಿಕೊಟ್ಟಿದೆ ಎಂದು ಹೇಳಿದರು.
ದಲಿತ ಸಂಘರ್ಷ ಸಮಿತಿ ಜಿಲ್ಲಾಧ್ಯಕ್ಷ ಪಿ.ಎನ್.ರಾಮಯ್ಯ ಮಾತನಾಡಿ, ಕಾಂಗ್ರೆಸ್‌ನ ರಾಷ್ಟ್ರೀಯ ನಾಯಕರ ಸಲಹೆ ಪಡೆದು ಸುಪ್ರೀಂ ಕೋರ್ಟ್ ಆದೇಶ ಪಾಲನೆ ಮಾಡುವುದಾಗಿ ಸಿಎಂ ಸಿದ್ದರಾಮಯ್ಯ ಹೇಳಿದ್ದರು. ಆದರೆ, ರಾಹುಲ್ ಗಾಂಧಿ, ಸೋನಿಯಾ ಗಾಂಧಿ, ಮಲ್ಲಿಕಾರ್ಜುನ ಖರ್ಗೆ ಅವರು ಒಳಮೀಸಲಾತಿ ವಿರೋಧವಿದ್ದಾರೆ ಎಂದು ರಾಜ್ಯದ ಮಾದಿಗ ಸಮುದಾಯದ ಭಾವನೆ ಇದೆ ಎಂದರು.
ಈ ಭಾವನೆ ಹೋಗಲಾಡಿಸಲು ರಾಹುಲ್ ಗಾಂಧಿ, ಸೋನಿಯಾ ಗಾಂಧಿ ಹಾಗೂ ಮಲ್ಲಿಕಾರ್ಜುನ ಖರ್ಗೆ ಅವರು ಒಳಮೀಸಾತಿ ಬಗ್ಗೆ ಧ್ವನಿ ಮಾಡಬೇಕು. ಸಂವಿಧಾನದ ಆಶಯಗಳನ್ನು ಪಾಲನೆ ಮಾಡುವುದಾಗಿ ಪಾರ್ಲಿಮೆಂಟಿನಲ್ಲಿ ಹೇಳುವ ಈ ನಾಯಕರು ಒಳಮೀಸಲಾತಿ ಬಗ್ಗೆಯೂ ಮಾತನಾಡಬೇಕು ಎಂದು ಒತ್ತಾಯಿಸಿದರು.
ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾದ ಜಿಲ್ಲಾಧ್ಯಕ್ಷ ಅಟ್ಟಪ್ಪ, ಸಂಘಟನಾ ಅಧ್ಯಕ್ಷ ಪುಟ್ಟಸ್ವಾಮಿ, ಮುಖಂಡರಾದ ಲಕ್ಷ್ಮಮ್ಮ, ಡಿ.ಎಸ್.ಸುನಿಲ್, ಬೈಲಹೊನ್ನಯ್ಯ, ಕೋದಂಡರಾಮ, ರಾಘುಕುಮಾರ್, ಹನುಮಂತರಾಜು, ಸಾದತ್ ಮೊದಲಾದವರು ಹಾಜರಿದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular