ತುಮಕೂರು ಸಿದ್ದಗಂಗಾ ಮಠದ ಹಳೆಯ ವಿದ್ಯಾರ್ಥಿಗಳ ಹಾಗೂ ಹಿತೈಷಿಗಳ ಸಂಘದ ವತಿಯಿಂದ ಕೊಡಮಾಡುವ 2024ನೇ ಸಾಲಿನ ಪ್ರತಿಷ್ಟಿತ ಸಿದ್ದಗಂಗಾಶ್ರೀ ಪ್ರಶಸ್ತಿಯನ್ನು ನಾಡಿನ ಹಿರಿಯ ಜಾನಪದ ಮತ್ತು ಶರಣ ಸಾಹಿತ್ಯ ವಿದ್ವಾಂಸ ನಾಡೋಜ ಡಾ.ಗೊ.ರು.ಚನ್ನಬಸಪ್ಪನವರಿಗೆ ನೀಡಲಾಗುವುದು ಎಂದು ಸಿದ್ದಗಂಗಾ ಹಳೆಯ ವಿದ್ಯಾರ್ಥಿಗಳ ಹಾಗೂ ಹಿತೈಷಿಗಳ ಟ್ರಸ್ಟ್ ಕಾರ್ಯದರ್ಶಿ ಕೆ.ಎಚ್.ಶಿವರುದ್ರಯ್ಯ ತಿಳಿಸಿದ್ದಾರೆ.
ಕನ್ನಡ ಸಾಹಿತ್ಯ ಸೇವಾ ರತ್ನ, ನಿಕಟಪೂರ್ವ ಕನ್ನಡ ಸಾಹಿತ್ಯ ಪರಿಷತ್ ಹಾಗೂ ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ ಅಧ್ಯಕ್ಷರು, ಮಂಡ್ಯದಲ್ಲಿ ನಡೆದ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷ ಗೊ.ರು.ಚನ್ನಬಸಪ್ಪನವರು ಸಾಹಿತ್ಯ ಕೃಷಿಕರು ಹಾಗೂ ಶಿಕ್ಷಣ ಪ್ರೇಮಿ ಹೀಗೆ ಹಲವು ಪ್ರಕಾರಗಳ ಜೀವಮಾನ ಸಾಧನೆಯನ್ನು ಗುರುತಿಸಿ ಈ ಪ್ರಶಸ್ತಿಯನ್ನು ನೀಡಲಾಗುತ್ತಿದೆ ಎಂದು ಹೇಳಿದ್ದಾರೆ.
ಸಿದ್ದಗಂಗಾ ಮಠದಲ್ಲಿ ಜ.21ರಂದು ಬೆಳಗ್ಗೆ 11 ಗಂಟೆಗೆ ಡಾ.ಶಿವಕುಮಾರ ಶ್ರೀಗಳ 6ನೇ ವರ್ಷದ ಪುಣ್ಯಸ್ಮರಣೆ ಸಮಾರಂಭ ನಡೆಯಲಿದ್ದು ಆ ಸಮಾರಂಭದಲ್ಲಿ ಗೊರುಚ ಅವರಿಗೆ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಪ್ರಶಸ್ತಿಯು 1 ಲಕ್ಷ ನಗದು, ಅಭಿನಂದನಾ ಪತ್ರ ಹಾಗೂ ಸ್ಮರಣಿಕೆಯನ್ನು ಒಳಗೊಂಡಿರುತ್ತದೆ ಎಂದು ಶಿವರುದ್ರಯ್ಯ ತಿಳಿಸಿದ್ದಾರೆ.


