ಇತ್ತೀಚಿನ ರಾಜಕೀಯ ಬೆಳೆವಣಿಗೆಯೊಂದರಲ್ಲಿ ಮಾದಿಗ ಸಮುದಾಯದ ಪರ ಧ್ವನಿ ಎತ್ತಿದ್ದ ಗುಬ್ವಿ ಕ್ಷೇತ್ರದ ಶಾಸಕ ಎಸ್.ಆರ್.ಶ್ರೀನಿವಾಸ್ ಅವರನ್ನು ಅವರ ಗೃಹ ಕಚೇರಿಯಲ್ಲಿ ಚಿತ್ರದುರ್ಗದ ಆದಿಜಾಂಭವ ಬೃಹನ್ಮಠದ ಷಡಕ್ಷರ ಮುನಿ ದೇಶಿಕೇಂದ್ರ ಸ್ವಾಮೀಜಿ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಚಿತ್ರದುರ್ಗದ ಆದಿಜಾಂಭವ ಕೋಡಿಹಳ್ಳಿ ಬೃಹನ್ಮಠದ ಷಡಕ್ಷರ ಮುನಿ ಸ್ವಾಮೀಜಿ, ರಾಜ್ಯದಲ್ಲಿ ಮಾದಿಗ ಸಮುದಾಯ ಎಲ್ಲಾ ವಿಭಾಗದಲ್ಲಿ ಅತ್ಯಂತ ಹಿಂದೆ ಉಳಿದಿದೆ. ಎಲ್ಲಾ ರಾಜಕೀಯ ಪಕ್ಷಗಳು ಸಮುದಾಯವನ್ನು ಕೇವಲ ಓಟ್ ಬ್ಯಾಂಕಾಗಿ ಮಾತ್ರ ಬಳಸಿಕೊಂಡಿದ್ದಾರೆ. ಆರ್ಥಿಕ, ಸಾಮಾಜಿಕ, ಶೈಕ್ಷಣಿಕ, ಔದ್ಯೋಗಿಕ ಎಲ್ಲಾ ರೀತಿಯಿಂದಲೂ ಮಾದಿಗ ಸಮುದಾಯ ಮುಖ್ಯವಾಹಿನಿಗೆ ಬರಬೇಕೆಂದರೆ ಅಧಿಕಾರದಲ್ಲಿ ಇರುವವರು ಸಮುದಾಯದ ಪರವಾಗಿ ದನಿ ಎತ್ತಬೇಕು. ಆ ಕೆಲಸವನ್ನು ಶಾಸಕ ಶ್ರೀನಿವಾಸ್ ಮಾಡಿದ್ದಾರೆ ಎಂದು ಶ್ಲಾಘಿಸಿದರು.
ಶಾಸಕರ ಬಳಿ ಎರಡು ಪ್ರಮುಖ ಕೋರಿಕೆಗಳನ್ನು ಮುಂದುಟ್ಟಿದ್ದೇವೆ. ಸುಪ್ರೀಂ ಕೋರ್ಟಿನ ತೀರ್ಪಿನಂತೆ ಒಳಮೀಸಲಾತಿಯನ್ನು ತ್ವರಿತವಾಗಿ ಜಾರಿಗೆ ತರಲು ಮುಖ್ಯಮಂತ್ರಿಗಳ ಮೇಲೆ ಒತ್ತಡ ಹೇರಬೇಕು. ಎಲ್ಲೆಲ್ಲಿ ಮಾದಿಗ ಸಮುದಾಯಗಳಿಗೆ ಪ್ರಾತಿನಿಧ್ಯ ಸಿಕ್ಕಿಲ್ಲವೋ ಅಂತಹ ಕಡೆಗಳಲ್ಲಿ ಮಾದಿಗ ಸಮುದಾಯಕ್ಕೆ ಅವಕಾಶಗಳನ್ನು ಕಲ್ಪಿಸಿ ಸಮಾಜದ ಮುಖ್ಯವಾಹಿನಿಗೆ ತರಲು ಪ್ರಯತ್ನಿಸಬೇಕು ಎಂದರು.
ಕೆ.ಎಸ್.ಆರ್.ಟಿ.ಸಿ. ನಿಗಮದ ಅಧ್ಯಕ್ಷ ಎಸ್.ಆರ್.ಶ್ರೀನಿವಾಸ್ ಮಾತನಾಡಿ, ಜಿಲ್ಲೆಯಲ್ಲಿ ಮಾದಿಗ ಸಮುದಾಯ ಅವಕಾಶಗಳಿಂದ ವಂಚಿತವಾಗಿದೆ. ಹಾಗಾಗಿ ನಾನು ಅವರ ಪರವಾಗಿ ಮಾತನಾಡಿದ್ದೆ. ಈ ಹಿನ್ನೆಲೆಯಲ್ಲಿ ಆ ಸಮುದಾಯದ ಪ್ರಮುಖ ಮಠದ ಸ್ವಾಮೀಜಿ ನನ್ನನ್ನು ಭೇಟಿಯಾಗಿ ಅಭಿನಂದನೆ ಸಲ್ಲಿಸಿದ್ದಾರೆ. ಅವರ ಅಭಿಮಾನಕ್ಕೆ ನಾನು ಚಿರಋಣಿ. ಸಾಮಾಜಿಕ ನ್ಯಾಯವೆಂದರೆ ಎಲ್ಲ ಸಮುದಾಯಗಳಿಗೂ ಸಮಾನ ಅವಕಾಶ ದೊರೆಯಬೇಕು. ಈ ನಿಟ್ಟಿನಲ್ಲಿ ಸ್ವಾಮೀಜಿ ಮನವಿ ಕುರಿತು ಮುಖ್ಯಮಂತ್ರಿ ಅವರನ್ನು ಭೇಟಿಯಾಗಿ ಮಾತನಾಡುವುದಾಗಿ ತಿಳಿಸಿದರು.
ಈ ಸಂದರ್ಭದಲ್ಲಿ ದಲಿತ ಮುಖಂಡರಾದ ಕೋಡಿಯಾಲ ಮಹದೇವು, ಚೇಳೂರು ಶಿವನಂಜಪ್ಪ ಸೇರಿದಂತೆ ಅನೇಕ ದಲಿತ ಮುಖಂಡರು ಇದ್ದರು.


