ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದು 2 ವರ್ಷ ಕಳೆಯುತ್ತಾ ಬಂದಿದ್ದರೂ ತುಮಕೂರು ಜಿಲ್ಲೆಯಲ್ಲಿ ಇದುವರೆಗೂ ಮಾದಿಗ ಸಮುದಾಯದ ಕಾರ್ಯಕರ್ತರಿಗೆ, ಮುಖಂಡರಿಗೆ ಪಕ್ಷದಲ್ಲಿಯಾಗಲಿ, ವಿವಿಧ ನಿಗಮ, ಮಂಡಳಿ, ಪ್ರಾಧಿಕಾರಗಳಲ್ಲಾಗಲಿ, ಸ್ಥಾನಮಾನ ನೀಡದೆ ಕಡೆಗಣಿಸಲಾಗುತ್ತಿದೆ ಎಂದು ಡಿಎಸ್ಎಸ್ ಗುಬ್ಬಿ ತಾಲೂಕು ಸಂಚಾಲಕ ಮಾರಶೆಟ್ಟಿಹಳ್ಳಿ ಬಸವರಾಜು ಆರೋಪಿಸಿದ್ದಾರೆ.
ತುಮಕೂರಿನ ಎಂ.ಜಿ.ರಸ್ತೆಯ ಅಂಬೇಡ್ಕರ್ ಭವನದಲ್ಲಿ ಮಾದಿಗ ಪರ ಸಂಘಟನೆಗಳ ಒಕ್ಕೂಟದಿಂದ ಆಯೋಜಿಸಿದ್ದ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಜಿಲ್ಲೆಯಲ್ಲಿ ಇಬ್ಬರು ಸಚಿವರಿದ್ದರೂ ಮಾದಿಗರನ್ನು ತೀವ್ರವಾಗಿ ನಿರ್ಲಕ್ಷ್ಯ ಮಾಡಿದ್ದಾರೆ. ಮಾದಿಗರ ಮತಗಳಿಂದಲೇ ಗೆದ್ದು ಹತ್ತಾರು ವರ್ಷಗಳಿಂದ ಅಧಿಕಾರದಲ್ಲಿರುವ ಡಾ.ಜಿ.ಪರಮೇಶ್ವರ್ ಆಗಲಿ, ದಲಿತರ ಬಗ್ಗೆ ಕಾಳಜಿ ತೋರುವ ಸಹಕಾರ ಸಚಿವ ಕೆ.ಎನ್.ರಾಜಣ್ಣ ಅವರಾಗಲಿ ಮಾದಿಗ ಸಮುದಾಯದ ಯುವಕರಿಗೆ ಮನ್ನಣೆ ನೀಡುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.
ತಲೆ ತಲಾಂತರದಿಂದಲೂ ಮಾದಿಗ ಸಮುದಾಯ ಅಧಿಕಾರದಿಂದ ವಂಚಿತರಾಗುತ್ತಲೇ ಬಂದಿದ್ದಾರೆ. ಜಿಲ್ಲೆಯ ಕಾಂಗ್ರೆಸ್ ಪಕ್ಷದ ಹುದ್ದೆಗಳಲ್ಲಿ ಮಾದಿಗರನ್ನು ಕಡೆಗಣಿಸಲಾಗಿದೆ. ಎರಡು ವರ್ಷದಿಂದಲು ಎಪಿಎಂಸಿ ಮತ್ತು ಟೂಡಾ ಅಧ್ಯಕ್ಷ ಸ್ಥಾನಗಳು ಖಾಲಿ ಇವೆ. ಅಲ್ಲದೆ ಈಗ ವಿಧಾನಪರಿಷತ್ ಸ್ಥಾನಗಳು ಖಾಲಿ ಇದ್ದು ಸರಕಾರ ಮತ್ತು ಜಿಲ್ಲಾ ಉಸ್ತುವಾರಿ ಸಚಿವರು ಈ ಹುದ್ದೆಗಳನ್ನು ತುಂಬುವಾಗ ಮಾದಿಗ ಸಮುದಾಯದ ಮುಖಂಡರನ್ನು ಪರಿಗಣನೆಗೆ ತೆಗೆದುಕೊಳ್ಳಬೇಕು. ಇಲ್ಲದಿದ್ದಲ್ಲಿ ಮಾದಿಗರು ಬೀದಿಗಿಳಿದು ಹೋರಾಟ ನಡೆಸುವುದು ಅನಿವಾರ್ಯವಾಗಿದೆ ಎಂದು ಎಚ್ಚರಿಕೆ ನೀಡಿದರು.
ದಲಿತ ಮುಖಂಡ ಹಬ್ಬತ್ತನಹಳ್ಳಿ ಶ್ರೀನಿವಾಸ ಮಾತನಾಡಿ, ಮುಂಬರುವ ಎಂ.ಎಲ್.ಸಿ. ಚುನಾವಣೆಗಳಲ್ಲಿ ಜಿಲ್ಲೆಯಲ್ಲಿರುವ ಇಬ್ಬರು ಸಚಿವರುಗಳು ಮಾದಿಗ ಸಮುದಾಯದ ವ್ಯಕ್ತಿಗಳಿಗೆ ಎಂ.ಎಲ್.ಸಿ. ಸ್ಥಾನ ನೀಡಬೇಕು ಎಂಬುದು ನಮ್ಮ ಆಗ್ರಹವಾಗಿದೆ. ಈ ನಿಟ್ಟಿನಲ್ಲಿ ಶೀಘ್ರವೇ ಇಬ್ಬರು ಸಚಿವರನ್ನು ಭೇಟಿಯಾಗಿ ಮನವಿ ಸಲ್ಲಿಸಲಾಗುವುದು ಎಂದರು.
ದಲಿತ ಮುಖಂಡ ಜಯಣ್ಣ ಮಾತನಾಡಿ, ಕಾಂಗ್ರೆಸ್ ಪಕ್ಷದಿಂದ ಎಡಗೈ ಸಮುದಾಯಕ್ಕೆ ಯಾವುದೇ ರೀತಿಯ ಸಹಾಯ ಆಗಿಲ್ಲ. ತಲೆ ತಲಾಂತರದಿಂದಲೂ ಎಡಗೈ ಸಮುದಾಯ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸುತ್ತಾ ಬಂದಿದ್ದರೂ, ಮಾದಿಗರನ್ನು ತುಳಿಯುವ ಕೆಲಸ ನಿರಂತರವಾಗಿ ನಡೆದಿದೆ. ಚುನಾವಣೆಯಲ್ಲಿ ಅವಿರತ ದುಡಿದವರನ್ನು ಕಡೆಗಣಿಸಲಾಗಿದೆ. ಇದು ಯಾವುದೇ ಪಕ್ಷಕ್ಕೆ ಶೋಭೆ ತರುವಂತಹದಲ್ಲ. ಈಗಲೇ ಕಾಂಗ್ರೆಸ್ ಪಕ್ಷದ ಮುಖಂಡರು, ಅದರಲ್ಲಿಯೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ.ಪರಮೇಶ್ವರ್ ಮತ್ತು ಸಹಕಾರಿ ಸಚಿವರು ಎಡಗೈ ಸಮುದಾಯದಕ್ಕೆ ಅಧಿಕಾರ ನೀಡದಿದ್ದರೆ ಮುಂಬರುವ ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ, ಪಾಲಿಕೆ ಚುನಾವಣೆಗಳಲ್ಲಿ ಮಾದಿಗ ಸಮುದಾಯ ತಕ್ಕ ಪಾಠ ಕಲಿಸಲಿದೆ ಎಂದರು.
ಮಾದಿಗ ದಂಡೋರ ರಾಜ್ಯ ಪ್ರಧಾನ ಕಾರ್ಯದರ್ಶಿ ಬಿ.ಜಿ.ಸಾಗರ್ ಮಾತನಾಡಿದರು. ವೇದಿಕೆಯಲ್ಲಿ ಮಾದಿಗ ಪರ ಸಂಘಟನೆಗಳ ಒಕ್ಕೂಟದ ಗೂಳರಿವೆ ನಾಗರಾಜು, ಸಣ್ಣಭೂತಣ್ಣ, ಸುರೇಶ್ಕುಮಾರ್, ರಂಗಯ್ಯ. ಕೆಸ್ತೂರು ನರಸಿಂಹಮುರ್ತಿ, ಯೋಗಾನಂದ್ ಮಾಗೋಡು, ಹೆಬ್ಬೂರು ಗಾಂಧಿರಾಜ್ ಸೇರಿದಂತೆ ಹಲವರು ಹಾಜರಿದ್ದರು.