ದಕ್ಷಿಣ ಭಾರತದಲ್ಲಿ ಬಿಜೆಪಿ ಪಕ್ಷ ಖಾತೆ ತೆರೆಯುವಂತಾಗಲು ಹಗಲಿರುಳು ಪಕ್ಷಕ್ಕಾಗಿ ದುಡಿದ ಬಿ.ಎಸ್.ಯಡಿಯೂರಪ್ಪ ಮತ್ತು ಅವರ ಪುತ್ರ ಬಿ.ವೈ.ವಿಜಯೇಂದ್ರ ಅವರ ಬಗ್ಗೆ ಕೆಲ ಬಿಜೆಪಿ ಮುಖಂಡರು ಬಹಳ ಹೀನಾಯವಾಗಿ ಮಾತನಾಡುತಿದ್ದು, ಅವರಿಗೆ ಬಿ.ಎಸ್.ಯಡಿಯೂರಪ್ಪನವರ ಬಲ ಏನು ಎಂಬುದನ್ನು ತೋರಿಸುವ ಸಲುವಾಗಿ ಮಾರ್ಚ್ 4ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಹಳೆ ಮೈಸೂರು ಪ್ರಾಂತದ ವೀರಶೈವ, ಲಿಂಗಾಯಿತ ಮುಖಂಡ ಸಭೆ ಕೆರೆಯಲಾಗಿದೆ ಎಂದು ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ತಿಳಿಸಿದ್ದಾರೆ.
ತುಮಕೂರಿನ ವೀರಶೈವ ಕಲ್ಯಾಣ ಮಂಟಪದಲ್ಲಿ ಆಯೋಜಿಸಿದ್ದ ವೀರಶೈವ-ಲಿಂಗಾಯಿತ ಮುಖಂಡರ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಯಡಿಯೂರಪ್ಪನವರ ಬಲ ಪ್ರದರ್ಶನದ ಈ ಸಭೆಗೆ ವೀರಶೈವ ಲಿಂಗಾಯಿತ ಮಹಾ ಸಂಗಮ ಎಂದು ಹೆಸರಿಡಲಾಗಿದೆ. ಅಂದು ಹಳೆ ಮೈಸೂರು ಭಾಗಕ್ಕೆ ಸೇರಿದ ಎಲ್ಲಾ ಜಿಲ್ಲೆಗಳ ಬಿ.ಎಸ್.ಯಡಿಯೂರಪ್ಪ ಅಭಿಮಾನಿಗಳು, ಹಿತೈಷಿಗಳು ಪಾಲ್ಗೊಂಡು ಮುಂದಿನ ಆಗು ಹೋಗುಗಳ ಬಗ್ಗೆ ಚರ್ಚೆ ನಡೆಸಲಿದ್ದೇವೆ. ಹಾಗಾಗಿ ಈ ಭಾಗದ ಎಲ್ಲಾ ವೀರಶೈವ, ಲಿಂಗಾಯಿತ ಮುಖಂಡರು ಈ ಸಭೆಯಲ್ಲಿ ಭಾಗವಹಿಸಿ, ಯಡಿಯೂರಪ್ಪ ಮತ್ತು ಬಿ.ವೈ.ವಿಜಯೇಂದ್ರ ಅವರ ಕೈ ಬಲಪಡಿಸುವಂತೆ ಮನವಿ ಮಾಡಿದರು.
ನಾಲ್ಕು ಬಾರಿ ಮುಖ್ಯಮಂತ್ರಿಯಾಗಿ ಬಿ.ಎಸ್.ಯಡಿಯೂರಪ್ಪನವರು ಎಂದಿಗೂ ಜಾತಿ ಮಾಡಿದವರಲ್ಲ. ಎಲ್ಲಾ ವರ್ಗದ ಮಠ, ಮಾನ್ಯಗಳಿಗೂ ಅನುದಾನ ನೀಡಿ, ಮಠಗಳು ಶೈಕ್ಷಣಿಕ ಕಾರ್ಯಕ್ರಮಗಳನ್ನು ಕೈಗೊಳ್ಳಲು ನೆರವಾಗಿದ್ದಾರೆ. ಅಂತಹ ವ್ಯಕ್ತಿಯ ಕುಟುಂಬದ ವಿರುದ್ದ ಬಸರಾಜಪಾಟೀಲ್ ಯತ್ನಾಳ್ ಮತ್ತು ಕೆಲ ನಡೆಯದ ನಾಣ್ಯಗಳು ಕಳೆದ ನಾಲ್ಕು ತಿಂಗಳಿನಿಂದ ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಜನರಲ್ಲಿ ಗೊಂದಲ ಉಂಟು ಮಾಡುತ್ತಿದ್ದಾರೆ. ಬಿ.ಎಸ್.ಯಡಿ ಯೂರಪ್ಪ ಲಿಂಗಾಯಿತ ನಾಯಕರೇ ಅಲ್ಲ. ಅವರ ಕುಟುಂಬದ ಹಿಂದೆ ಯಾವ ವೀರಶೈವರು ಇಲ್ಲ ಎಂಬ ಕ್ಷÄಲ್ಲಕ ಹೇಳಿಕೆಗಳನ್ನು ನೀಡುತಿದ್ದಾರೆ. ಇದರಿಂದ ರಾಜ್ಯದ ವೀರಶೈವ, ಲಿಂಗಾಯಿತ ನಾಯಕರಿಗೆ ತೀವ್ರ ಬೇಸರ ಉಂಟಾಗಿದ್ದು, ಯಡಿಯೂರಪ್ಪ ಮತ್ತು ಬಿ.ವೈ.ವಿಜಯೇಂದ್ರ ಅವರ ಶಕ್ತಿ ಏನು ಎಂದು ತೋರಿಸುವ ಸಲುವಾಗಿಯೇ ಈ ವೀರಶೈವ, ಲಿಂಗಾಯಿತ ಮಹಾಸಂಗಮ ಆಯೋಜಿಸುತಿದೆ ಎಂದು ಹೇಳಿದರು.
ಅಖಿಲ ಕರ್ನಾಟಕ ವೀರಶೈವ, ಲಿಂಗಾಯಿತ ಮಹಾಸಭಾದ ಜಿಲ್ಲಾಧ್ಯಕ್ಷ ಡಾ.ಪರಮೇಶ್ ಮಾತನಾಡಿ, ಬಿ.ಎಸ್.ಯಡಿ ಯೂರಪ್ಪ ಕರ್ನಾಟಕದ ವೀರಶೈವ ಲಿಂಗಾಯಿತರ ಪ್ರಶ್ನಾತೀತ ನಾಯಕರು, ಅವರ ಸ್ಥಾನ ತುಂಬಲು ಯಾರಿಂದಲೂ ಸಾಧ್ಯವಿಲ್ಲ. ಅವರನ್ನು ಪಕ್ಷದಲ್ಲಿ ಕಡೆಗಣಿಸುವುದೆಂದರೆ, ಇಡೀ ಸಮುದಾಯವನ್ನೇ ಕಡೆಗಣಿಸಿದಂತೆ, ಬಿಜೆಪಿಗೆ ರಾಜ್ಯದಲ್ಲಿ ಉಳಿಗಾಲವಿಲ್ಲ. ನಮ್ಮ ನಾಯಕರಿಗೆ ಈ ರೀತಿಯ ಕಿರುಕುಳ ನೀಡುವುದು ಸಲ್ಲದು ಎಂದರು.
ಚಂದ್ರಮೌಳಿ, ಮರಿಸ್ವಾಮಿ, ಮುಖಂಡರಾದ ದಿಲೀಪ್, ಚಂದ್ರಶೇಖರ ಬಾಬು , ಗಿರೀಶ್ ಮಾತನಾಡಿದರು. ವೀರಶೈವ, ಲಿಂಗಾಯಿತ ಸಮುದಾಯಕ್ಕೆ ಸೇರಿದ ವಿವಿಧ ಬ್ಯಾಂಕುಗಳ ಅಧ್ಯಕ್ಷರಾದ ಓಹಿಲೇಶ್ವರ್, ಬಾವಿಕಟ್ಟೆ ಮಂಜುನಾಥ್, ರುದ್ರಪ್ಪ, ಸಿ.ವಿ.ಮಹದೇವಯ್ಯ ಇದ್ದರು.