ಆದಾಯಕ್ಕಿಂತ ಹೆಚ್ಚು ಅಕ್ರಮವಾಗಿ ಆಸ್ತಿ ಗಳಿಸಿದ್ದಾರೆ ಎಂಬ ಆರೋಪದ ಮೇರೆಗೆ ಮಾ.6ರಂದು ಬೆಳಗ್ಗೆ ತುಮಕೂರು ಲೋಕಾಯುಕ್ತ ಪೊಲೀಸರು ಸಿರಾ ತಾಲ್ಲೂಕಿನ ತಾವರೆಕೆರೆ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಜಗದೀಶ್ ಮನೆ ಸೇರಿದಂತೆ ಒಟ್ಟು ಆರು ಕಡೆ ದಾಳಿ ನಡೆಸಿದ್ದಾರೆ.
ತುಮಕೂರು ಜಿಲ್ಲೆಯ ಶಿರಾ ತಾಲೂಕು ತಾವರೆಕೆರೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವೈದ್ಯರಾಗಿರುವ ಡಾ. ಜಗದೀಶ್ ತುಮಕೂರಿನ ಬಟವಾಡಿ ಬಳಿಯ ಮನೆ, ಶಿರಾ ತಾಲ್ಲೂಕಿನ ಫಾರಂ ಹೌಸ್, ಬರಗೂರಿನಲ್ಲಿರುವ ವಾಣಿಜ್ಯ ಕಟ್ಟಡ ಸೇರಿದಂತೆ ಆರು ಕಡೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ.
ಆದಾಯಕ್ಕಿಂತ ಹೆಚ್ಚಿಗೆ ಆಸ್ತಿ ಗಳಿಸಿದ್ದಾರೆ ಹಾಗೂ ಅಕ್ರಮ ಆಸ್ತಿ ಗಳಿಕೆ ಆರೋಪದಡಿ ಲೋಕಾಯುಕ್ತ ಅಧಿಕಾರಿಗಳು ಬರಗೂರಿನಲ್ಲಿರುವ ವಾಣಿಜ್ಯ ಕಟ್ಟಡ, ತುಮಕೂರಿನ ಬಟವಾಡಿ ಬಳಿ ಇರುವ ಮನೆ, ಮಂಜುನಾಥ್ ನಗರದಲ್ಲಿರುವ ಕಾಂಪ್ಲೆಕ್ಸ್ ಮೇಲೆ ದಾಳಿ ನಡೆಸಿದ್ದಾರೆ. ಯಲ್ಚೆನಹಳ್ಳಿ ಗ್ರಾಮದ ವಾಸದ ಮನೆ, ಸಹೋದರ ಕಾಂತರಾಜ್ ಹಾಗೂ ಡಾ. ಜಗದೀಶ್ ಪತ್ನಿ ರೂಪ ಹೆಸರಿನಲ್ಲಿರುವ ಮನೆ ಜಮೀನಿನ ಮೇಲೂ ದಾಳಿ ಮಾಡಿ ದಾಖಲಾತಿಗಳ ಪರಿಶೀಲನೆ ನಡೆಸಿದಾಗ ಸಿರಾ ತಾಲ್ಲೂಕಿನ ಬರಗೂರಿನಲ್ಲಿ ತನ್ನ ತಾಯಿ ಹೆಸರಿನಲ್ಲಿ ಆಸ್ತಿ ಪತ್ತೆಯಾಗಿದೆ ಎಂದು ಹೇಳಲಾಗಿದೆ.
ತುಮಕೂರು ಲೋಕಾಯುಕ್ತ ಎಸ್ಪಿ ಲಕ್ಷ್ಮೀನಾರಾಯಣ ನೇತೃತ್ವದಲ್ಲಿ ನಡೆದ ದಾಳಿಯಲ್ಲಿ ಡಿವೈಎಸ್ಪಿ ರಾಮಕೃಷ್ಣ ಕೆ.ಜಿ., ಇನ್ಸ್ಪೆಕ್ಟರ್ಗಳಾದ ಶಿವರುದ್ರಪ್ಪ ಮೇಟಿ, ಸುರೇಶ್, ಸಲೀಂ ಅಹಮದ್ ಮತ್ತು ಸಿಬ್ಬಂದಿಗಳು ಪಾಲ್ಗೊಂಡಿದ್ದು, ದಾಖಲಾತಿಗಳ ಪರಿಶೀಲನೆಯಲ್ಲಿ ತೊಡಗಿದ್ದಾರೆ. ಸಂಜೆ ವೇಳೆಗೆ ಸ್ಪಷ್ಟ ಮಾಹಿತಿ ದೊರೆಯಲಿದೆ ಎಂದು ಲೋಕಾಯುಕ್ತ ಮೂಲಗಳು ತಿಳಿಸಿವೆ.