ಹವಾಮಾನ ವೈಪರೀತ್ಯ, ಅನಿಶ್ಚಿತ ಫಸಲು ಹಾಗೂ ರೋಗರುಜಿನಗಳಿಂದ ತತ್ತರಿಸಿಹೋಗಿರುವ ಕೃಷಿ ಕ್ಷೇತ್ರದಲ್ಲಿ ಮತ್ತೆ ಉತ್ಸಾಹವನ್ನು ಕಾಣಲು ನಮ್ಮ ಸರ್ಕಾರ ಟೊಂಕ ಕಟ್ಟಿ ನಿಂತಿದೆ. ಅನ್ನದಾತರ ಕೈಗಳಿಗೆ ಹಣ ನೀಡಿ ಅದನ್ನು ಕೃಷಿಯಲ್ಲಿ ಹೂಡಿಕೆ ಮಾಡಲು ಪ್ರೋತ್ಸಾಹಿಸಿ, ಆ ಮೂಲಕ ನಾಡಿನ ಆರ್ಥಿಕತೆಗೆ ಬಲತುಂಬುವುದು ನಮ್ಮ ಸರ್ಕಾರದ ಆಶಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
5 ಲಕ್ಷ ರೂ.ಗಳವರೆಗೆ ಶೂನ್ಯ ಬಡ್ಡಿ ರೂಪದಲ್ಲಿ ನೀಡಲಾಗುವ ಸಾಲವನ್ನು ಸಹಕಾರಿ ಕೃಷಿ ಬ್ಯಾಂಕ್ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್ಗಳಿಗೆ ವಿಸ್ತರಿಸಲಾಗಿದೆ. ಇದಕ್ಕಾಗಿ ಹೆಚ್ಚುವರಿಯಾಗಿ 38 ಕೋಟಿ ರೂ. ಮೀಸಲಿರಿಸಲಾಗಿದೆ ಎಂದು ತಿಳಿಸಿದ್ದಾರೆ.
ರೈತರ ಕಾಳಜಿ ಎನ್ನುವುದು ನಮ್ಮ ಭಾಷಣದ ಸರಕಲ್ಲ, ಆಡಳಿತದ ಕೇಂದ್ರಬಿಂದು ಎಂಬುದನ್ನು ಮತ್ತೆ ಸಾಬೀತು ಮಾಡಿದ್ದೇವೆ ಎಂದರು.
ಶಕ್ತಿ ಯೋಜನೆಯಿಂದ ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್ಗಳಲ್ಲಿ ಪ್ರಯಾಣಿಸುವವರ ಸಂಖ್ಯೆ ಹೆಚ್ಚಾಗಿದೆ. ಹೀಗಾಗಿ ಪ್ರಯಾಣಿಕರಿಗೆ ಉತ್ತಮ ಸೇವೆ ಒದಗಿಸಲು ಬಸ್ಗಳ ಸಂಖ್ಯೆಯನ್ನು ಹೆಚ್ಚಿಸಲು ಕ್ರಮ ಕೈಗೊಂಡಿದ್ದೇವೆ ಎಂದು ತಿಳಿಸಿದ್ದಾರೆ.
ಬಜೆಟ್ನಲ್ಲಿ ಸಾರಿಗೆ ನಿಗಮಗಳಿಗೆ 1,000 ಬಸ್ಗಳನ್ನು ಜಿಸಿಸಿ ಮೂಲಕ ಒದಗಿಸುವ ಬಗ್ಗೆ ಘೋಷಿಸಲಾಗಿತ್ತು. ಇದನ್ನು ಪರಿಷ್ಕರಿಸಿ 2,000 ಹೊಸ ಬಸ್ಗಳನ್ನು ಖರೀದಿಸಲು ನಿರ್ಧರಿಸಲಾಗಿದೆ. ಇದಕ್ಕೆ ಬೇಕಾಗಿರುವ ಅನುದಾನವನ್ನು ಒದಗಿಸಲಾಗುವುದು ಎಂದು ಹೇಳಿದ್ದಾರೆ.
ಈ ಮೂಲಕ ನಿಮ್ಮ ಪ್ರಯಾಣವನ್ನು ಇನ್ನಷ್ಟು ಸುಖಕರ ಮತ್ತು ಆರಾಮದಾಯಕವಾಗಿಸಲು ನಮ್ಮ ಸರ್ಕಾರ ಬದ್ಧವಾಗಿದೆ ಎಂದು ಭರವಸೆ ನೀಡಿದ್ದಾರೆ.


